Linganamakki Dam: ಈ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಯಾವಾಗ?-ಸಚಿವರು ಹೇಳಿದ್ದೇನು?
ಚಿತ್ರದುರ್ಗ, ಆಗಸ್ಟ್, 15: ಸರ್ಕಾರವು ಜನರ ಸರ್ವತೋಮುಖ ಏಳಿಗೆಗಾಗಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಿರಾತಂಕವಾಗಿ ಸಾಗುತ್ತಿದ್ದು, ಮುಂದೆಯೂ ಯಾವುದೇ ಅಡ್ಡಿಯಿಲ್ಲದೆ ಸಾಗಲಿವೆ ಸಚಿವ ಡಿ.ಸುಧಾಕರ್ ಇಂದು (ಆಗಸ್ಟ್ 15) ಭರವಸೆ ನೀಡಿದರು. ಅಲ್ಲದೆ ಇದೇ ವೇಳೆ ಅವರು ವಾಣಿ ವಿಲಾಸ ಸಾಗರ ಹಾಗೂ ಲಿಂಗನಕ್ಕಿ ಜಲಾಶಯದ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆದ 78ನೇ ಸ್ವಾತಂತ್ಯೋತ್ಸವದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಚಿತ್ರದುರ್ಗ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ 4.50 ಲಕ್ಷ, ಗೃಹಜ್ಯೋತಿ ಯೋಜನೆಯಡಿ 3.71 ಲಕ್ಷ , ಗೃಹಲಕ್ಷ್ಮೀ ಯೋಜನೆಯಡಿ 3.81 ಲಕ್ಷ, ಯುವನಿಧಿ ಯೋಜನೆಯಡಿ 4,726, ಹಾಗೂ ಶಕ್ತಿ ಯೋಜನೆಯಡಿ 2.60 ಕೋಟಿ ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ.

ಇಡೀ ದೇಶದಲ್ಲಿಯೇ ಮೊದಲು ಜಾರಿಗೆ ತಂದಿರುವ ಈ ಐದು ಗ್ಯಾರಂಟಿ ಯೋಜನೆಗಳು ಬಡವರು, ಕೆಳವರ್ಗದ ಜನರು, ಮಹಿಳೆಯರನ್ನು ಸಬಲೀಕರಿಸಿ ಸಮಾಜದ ಮುಖ್ಯ ವಾಹಿನಿಗೆ ತರಲು ಯಶಸ್ವಿಯಾಗುತ್ತಿವೆ. ಬಡತನವ ಬುಡಮಟ್ಟ ಕೀಳ ಬನ್ನಿ ಎಂದು ರಾಷ್ಟ್ರಕವಿ ಕುವೆಂಪುರವರು ಕರೆಕೊಟ್ಟಂತೆ ಬಡತನ ನಿರ್ಮೂಲನೆಗಾಗಿ, ಯುವಕರಿಗೆ ಉದ್ಯೋಗ ನೀಡುವುದಕ್ಕಾಗಿ ಮತ್ತು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವುದಕ್ಕಾಗಿ ಈ ಯೋಜನೆಗಳನ್ನು ಜಾರಿಗೊಳಿಸಲಾಗಿರುತ್ತದೆ. ನಮ್ಮ ಸರ್ಕಾರ ನುಡಿದಂತೆ ನೆಡೆದಿದೆ ಎಂದರು.
ಮಹತ್ವಾಕಾಂಕ್ಷೆ ಭದ್ರಾ ಮೇಲ್ದಂಡೆ ಯೋಜನೆಯು ಸಾಕಾರಗೊಳ್ಳುವ ದಿನಗಳು ಸಮೀಪಿಸುತ್ತಿವೆ. ಭದ್ರಾ ಮೇಲ್ದಂಡೆ ಯೋಜನೆಯ ತಾಂತ್ರಿಕ ತೊಡಕಾಗಿದ್ದ ಅಬ್ಬಿನಹೊಳಲು ಸ್ಥಳ ಸಮಸ್ಯೆಯನ್ನು ಜಲಸಂಪನ್ಮೂಲ ಸಚಿವರು ಹಾಗೂ ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ, ರೈತರೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥ ಪಡಿಸಿದ್ದಾರೆ.
ಬಾಕಿ ಕಾಮಗಾರಿ ಪ್ರಾರಂಭಗೊಳಿಸಲಾಗಿದ್ದು, ತೀವ್ರ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಕಾಮಗಾರಿ ವೇಗ ಹೆಚ್ಚಿಸಲು ಸಾಧ್ಯವಾಗದ ಕಾರಣ, ಮುಂದಿನ ಮುಂಗಾರು ಅವಧಿ ಮುಕ್ತಾಯಗೊಳ್ಳುವುದರೊಳಗೆ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ನೀರು ಹರಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಜಿಲ್ಲೆಯ ಜೀವನಾಡಿ ಆಗಿರುವ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಪ್ರಸ್ತುತ ಭದ್ರಾ ಜಲಾಶಯದಿಂದ ಪ್ರತಿ ನಿತ್ಯ 700 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಎತ್ತಿನಹೊಳೆ ಮುಖ್ಯ ಕಾಲುವೆ 32.50 ಕಿಲೋ ಮೀಟರ್ನಲ್ಲಿ ಬೇಲೂರು ತಾಲ್ಲೂಕಿನ ಹೊಲಬಗೆರೆ ಗ್ರಾಮದ ಬಳಿಯ ಎಸ್ಕೇಪ್ ಮುಖಾಂತರ ಬೆಟ್ಟದ ಆಲೂರು ಹಳೇಬೀಡು ಕೆರೆ ಬೆಳವಾಡಿ ಕೆರೆ ಮುಖಾಂತರ ವೇದಾವತಿ ನದಿಗೆ ಹರಿಸಲಾಗುತ್ತದೆ.
ಅಲ್ಲಿಂದ ವಾಣಿ ವಿಲಾಸ ಸಾಗರ ಜಲಾಶಯ ತುಂಬಿಸುವ ಪ್ರಸ್ತಾವನೆ ಇದ್ದು, ಅಲ್ಲದೇ ಲಿಂಗನಮಕ್ಕಿ ಜಲಾಶಯದಿಂದ ವಿದ್ಯುತ್ ಉತ್ಪಾದನೆ ನಂತರ ಸಮುದ್ರಕ್ಕೆ ಹರಿದು ಹೋಗುವ ಸುಮಾರು 40 ಟಿಎಂಸಿ ನೀರನ್ನು ಬಳಸಿಕೊಂಡು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರ ಮುಂದಾಗಿದೆ.
ಈ ಯೋಜನೆಯಲ್ಲಿಯೂ ಸಹ ಜಲಾಶಯದಲ್ಲಿ ನೀರು ಶೇಖರಿಸಿ ನಂತರ ಬೆಂಗಳೂರಿಗೆ ನೀರೊಯ್ಯುವ ಪ್ರಸ್ತಾವನೆಯ ಸರ್ವೇ ಕಾರ್ಯ ಪ್ರಾರಂಭಿಸಲಾಗಿದೆ. ಒಟ್ಟಾರೆಯಾಗಿ ಮುಂದಿನ ದಿನಗಳಲ್ಲಿ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರ ಜಲಾಶಯವು ಭರ್ತಿಯಾಗುವ ಎಲ್ಲಾ ಅವಕಾಶಗಳು ದಟ್ಟವಾಗಿದ್ದು, ಇದರಿಂದ ನಮ್ಮ ರೈತರ ಮೊಗದಲ್ಲಿ ಮಂದಹಾಸ ಮೂಡುವುದಲ್ಲದೇ ಮತ್ತು ಜಿಲ್ಲೆಯಲ್ಲಿನ ಅಂತರ್ಜಲ ಮಟ್ಟ ಹೆಚ್ಚಳವಾಗವುದು ಬಹುತೇಕ ನಿಶ್ಚಿತವಾಗಿದೆ ಎಂದು ಸಚಿವ ಡಿ.ಸುಧಾಕರ್ ಆಶ್ವಾಸನೆ ವ್ಯಕ್ತಪಡಿಸಿದರು.
ಬೆಳೆ ಸಮೀಕ್ಷೆಯಲ್ಲಿ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಪೂರ್ವ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 1,30,694 ರೈತರ ತಾಕುಗಳ ಪೈಕಿ 1,28,375 ತಾಕುಗಳ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆ. 2023ರ ಮುಂಗಾರು ಹಂಗಾಮಿನಲ್ಲಿ 81,501 ರೈತರು 284.22 ಕೋಟಿ ರೂಪಾಯಿ ಬೆಳೆ ವಿಮೆ ಪಡೆದಿರುತ್ತಾರೆ.
ಹಾಗೂ 2024ರ ಮುಂಗಾರು ಹಂಗಾಮಿನಲ್ಲಿ 1,12,101 ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿದ್ದು, ಜಿಲ್ಲೆಯು ರಾಜ್ಯದಲ್ಲಿ 8ನೇ ಸ್ಥಾನದಲ್ಲಿರುತ್ತದೆ. 2023ರ ಮುಂಗಾರು ಹಂಗಾಮಿನಲ್ಲಿ 1,44,166 ರೈತರಿಗೆ 125.75 ಕೋಟಿ ರೂಪಾಯಿಗಳನ್ನು ಪಾರದರ್ಶಕವಾಗಿ ಫ್ರೂಟ್ಸ್, ಪರಿಹಾರ್ ತಂತ್ರಾಂಶಗಳ ಮೂಲಕ ನೇರವಾಗಿ ರೈತರ ಖಾತೆಗಳಿಗೆ ಜಮಾ ಮಾಡಿರುವುದು ನಮ್ಮ ಸರ್ಕಾರದ ಹೆಮ್ಮೆಯಾಗಿರುತ್ತದೆ ಎಂದು ಹೇಳಿದರು.
ರಾಜ್ಯ ಸರ್ಕಾರವು ಅಭಿವೃದ್ಧಿಗೆ ಬದ್ಧವಾಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ, ಅದರಲ್ಲೂ ಗ್ರಾಮೀಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರ ಇತ್ತೀಚೆಗೆ ವಿದ್ಯಾರ್ಥಿ ವೇತನ ಘೋಷಿಸಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನರ ಮಾಶಾಸನ ನೀಡುತ್ತಿರುವುದಲ್ಲದೇ, ಮಾತೃಪೂರ್ಣ, ಪೋಷಣ್ ಅಭಿಯಾನ ಯೋಜನೆ, ಪ್ರಧಾನಮಂತ್ರಿ ಮಾತೃವಂದನಾ, ಸ್ತ್ರೀಶಕ್ತಿ , ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಯೋಜನೆ, ಸ್ವಾಧಾರ ಶಕ್ತಿಸದನ ಯೋಜನೆ, ಸಾಂತ್ವಾನ ಯೋಜನೆಗಳ ಮುಖಾಂತರ ಮಹಿಳೆಯರು, ಆರ್ಥಿಕ ದುರ್ಬಲರು ಮತ್ತು ಹಿಂದುಳಿದ ವರ್ಗಗಳ ಏಳಿಗೆಗೆ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ.
ಹಾಗೆಯೇ ಜಿಲ್ಲೆಯಲ್ಲಿ ಕೃಷಿ, ನೀರಾವರಿ, ಶಿಕ್ಷಣ, ಸಾರಿಗೆ-ಸಂಪರ್ಕ,ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ, ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಅಭಿವೃದ್ಧಿ, ಅಲ್ಪ ಸಂಖ್ಯಾತರು, ಮಹಿಳೆಯರು, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಚಿವ ಡಿ.ಸುಧಾಕರ್ ಹೇಳಿದರು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸಿದ್ದರು. ಆಕರ್ಷಕ ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಾಗರಿಕ ಪೊಲೀಸ್, ಸಶಸ್ತ್ರ ಪೊಲೀಸ್, ಅರಣ್ಯ, ಗೃಹ ರಕ್ಷಕ ಎನ್ಸಿಸಿ, ಸ್ಕೌಟ್ ಮತ್ತು ಗೈಡ್ಸ್ ಸೇರಿ ಹಲವು ಶಾಲಾ ಕಾಲೇಜು ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿದರು. ಡಿಎಆರ್ಆರ್.ಪಿ.ಐ ಹೆಚ್.ಡಿ.ರುದ್ರೇಶ್ ಪರೇಡ್ ಕಮಾಂಡರ್ ಆಗಿ ಪಥ ಸಂಚಲನ ನೆರವೇರಿಸಿದರು. ಪೊಲೀಸ್ ವಾದ್ಯ ವೃಂದ ಕವಾಯತಿನಲ್ಲಿ ಸುಶ್ರಾವ್ಯವಾಗಿ ವಾದ್ಯ ನುಡಿಸಿದರು.
ಕೋಟೆ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಸಂಗೊಳ್ಳಿ ರಾಯಣ್ಣನ ಕುರಿತು ಹಾಗೂ ಪಿಳ್ಳೇಕೆರನಹಳ್ಳಿ ಬಾಪೂಜಿ ಪ್ರೌಢ ಶಾಲೆ ವಿದ್ಯಾರ್ಥಿಗಳು ಸುರಪುರ ವೆಂಕಟಪ್ಪ ನಾಯಕ ಜೀವನ ವೃತ್ತಾಂತದ ನೃತ್ಯ ರೂಪಕ ಪ್ರದರ್ಶಿಸಿದರು. ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ವೈವಿಧ್ಯತೆ ಬಿಂಬಿಸುವ ನೃತ್ಯ ಪ್ರದರ್ಶಿಸಿದರು.












Click it and Unblock the Notifications