ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಅಭ್ಯರ್ಥಿ ಯಾರು?; ಶ್ರೀರಾಮುಲು
ಚಿತ್ರದುರ್ಗ, ಜೂನ್ 23; "ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ನಾಯಕರಿಗೆ ಬುದ್ಧಿ ಭ್ರಮಣೆ ಆಗಿದೆ. ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ" ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಭವಿಷ್ಯ ನುಡಿದರು.
Recommended Video
ಚಿತ್ರದುರ್ಗ ನಗರದಲ್ಲಿ ಬುಧವಾರ ಮಾತನಾಡಿದ ಸಚಿವರು, "ಸಿದ್ದರಾಮಯ್ಯ ಕರ್ನಾಟಕದಲ್ಲಿ ಮತ್ತೆ ಮುಖ್ಯಮಂತ್ರಿ ಆಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಕುರ್ಚಿಗಾಗಿ ಕಚ್ಚಾಟ ನಡೆಯುತ್ತಿದೆ. ಆದರೆ ಬಿಜೆಪಿಯಲ್ಲಿ ಕುರ್ಚಿಗಾಗಿ ಕಚ್ಚಾಟ ಎಂದು ಆರೋಪ ಮಾಡುತ್ತಿದ್ದಾರೆ" ಎಂದರು.
"ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಭವಿಷ್ಯ ಹೇಳುತ್ತಿದ್ದಾರೆಯೇ?. ಸಿಎಂ ಅಭ್ಯರ್ಥಿ ಡಿಕೆಶಿ ಅಥವಾ ಸಿದ್ದರಾಮಯ್ಯ ಇವರಿಬ್ಬರಲ್ಲಿ ಯಾರು? ಮೊದಲು ಅದನ್ನು ತಿಳಿಸಲಿ" ಎಂದು ಸವಾಲು ಹಾಕಿದರು.

"ದೇಶದಲ್ಲಿ ಮೋದಿ ಪ್ರಧಾನಿ ಆಗಿರುವವರೆಗೆ ಕಾಂಗ್ರೆಸ್ ಧೂಳಿಪಟವಾಗಿರುತ್ತದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕಚ್ಚಾಟ ಇಲ್ಲ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷ ತಿರ್ಮಾನಿಸುತ್ತದೆ" ಎಂದು ಸ್ಪಷ್ಟಪಡಿಸಿದರು.
"ರಮೇಶ್ ಜಾರಕಿಹೊಳಿ ವಿರುದ್ಧ ಇನ್ನೂ ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರ ಧರ್ಮ ಬಿಟ್ಟು ಅಧರ್ಮಕ್ಕೆ ಸಹಕರಿಸುವ ಪ್ರಶ್ನೆಯೇ ಇಲ್ಲ. ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ" ಎಂದರು.
ಕೋವಿಡ್ ನಿಯಮ ಉಲ್ಲಂಘನೆ; ಚಿತ್ರದುರ್ಗ ನಗರದ ಕಲಾ ಕಾಲೇಜು ಹಾಗೂ ಬುದ್ಧ ನಗರದಲ್ಲಿ ನಡೆದ ವೈದ್ಯರ ನಡೆ ಹಳ್ಳಿಗಳ ಕಡೆ, ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಕಾರ್ಯಕ್ರಮದಲ್ಲಿ ಹೆಚ್ಚು ಜನಸಂದಣಿ ಉಂಟಾಗಿತ್ತು. ಕಾರ್ಯಕ್ರಮದಲ್ಲಿ ಸಚಿವರು ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.












Click it and Unblock the Notifications