ಚಿತ್ರದುರ್ಗ: ಕಲುಷಿತ ನೀರು ಕುಡಿದು ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ
ಚಿತ್ರದುರ್ಗ, ಆಗಸ್ಟ್ 01: ಕಲುಷಿತ ನೀರು ಕುಡಿದು ಓರ್ವ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು ,20ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಬಡಾವಣೆಯಲ್ಲಿ ನಡೆದಿದೆ.
ನೀರು ಕುಡಿದು ಅಸ್ವಸ್ಥಗೊಂಡಿದ್ದ ಮಂಜುಳಾ (21) ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ದುರಾದೃಷ್ಟವಶಾತ್ ಮಂಜುಳಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇನ್ನು 20 ಜನರು ಅಸ್ವಸ್ಥಗೊಂಡಿದ್ದು, ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದಾರೆ ಎಂದು ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಕವಾಡಿಗರಹಟ್ಟಿ ಬಡಾವಣೆಗೆ ನಗರಸಭೆಯಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ಈ ನೀರು ಸೇವಿಸಿ ಜನರು ಏಕಾಏಕಿ ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡವನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ , ಚಿಕಿತ್ಸೆ ನೀಡಲಾಗುತ್ತಿದೆ. ನಗರಸಭೆಯಿಂದ ನೀರು ಸರಬರಾಜು ಮಾಡಲಾಗಿದ್ದು, ನೀರಿನ ಟ್ಯಾಂಕರ್ ಸ್ವಚ್ಚಗೊಳಿಸದೇ ನೀರು ಸರಬರಾಜು ಮಾಡಿರುವುದು ಈ ಘಟನೆಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಕವಾಡಿಗರಹಟ್ಟಿಯ ಜನರು ಆಕ್ರೋಶ ಕೂಡ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿದು ಬರಬೇಕಿದೆ.
ಖಾರದ ತಿಂಡಿ ಸೇವಿಸಿ ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ
ಚಾಮರಾಜನಗರ: ಗುಂಡ್ಲುಪೇಟೆಯ ಯಡನವಹಳ್ಳಿ ಬಳಿಕ ಗರಗನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಏಳು ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವಿಸಿ ಅಸ್ವಸ್ಥತರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇತ್ತೀಚಿಗೆ ನಡೆದಿತ್ತು.
ಯಡನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ಯಾಂಪಸ್ನಲ್ಲಿರುವ ಗರಗನಹಳ್ಳಿ ವಸತಿ ಶಾಲೆಯಲ್ಲಿ ಬುಧವಾರ ಬೆಳಗಿನ ತಿಂಡಿ ತರಕಾರಿ ಬಾತ್ಅನ್ನು ಮಕ್ಕಳಿಗೆ ನೀಡಿದ್ದು, ತಿಂಡಿ ಹೆಚ್ಚು ಖಾರವಾದ ಹಿನ್ನೆಲೆಯಲ್ಲಿ ವರ್ಣಿತ(13), ಹರ್ಷಿತಾ(13), ಪ್ರಿಯ(13), ರಚನಾ(15), ಸಂಜನಾ(15), ಸಂಗೀತ (13), ಪ್ರಜ್ವಲ್(15) ಎಂಬ ಏಳು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ಉರಿ, ವಾಂತಿ ಕಾಣಿಸಿಕೊಂಡಿತ್ತು.
ನಂತರ ಅಸ್ವಸ್ಥತರನ್ನು ಕೂಡಲೇ ಸಮೀಪದ ಹೊರೆಯಾಲ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ವಸತಿ ಶಾಲೆ ಪ್ರಾಂಶುಪಾಲ ಲೋಕೇಶ್ ಹಾಗೂ ಬೇಗೂರು ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು. ಘಟನೆಯಲ್ಲಿ ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದರು.












Click it and Unblock the Notifications