ಶಾಸಕ ರೇಣುಕಾಚಾರ್ಯ-ಸಹೋದರರ ಮೇಲೆ ಭ್ರಷ್ಟಾಚಾರ ಆರೋಪ
ದಾವಣಗೆರೆ, ಫೆಬ್ರವರಿ 11: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ಎಂ.ಪಿ.ರೇಣುಕಾಚಾರ್ಯ ಹಾಗೂ ಅವರ ಸಹೋದರರು ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಫೆಬ್ರವರಿ 13ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಏಕಾಂಗಿಯಾಗಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಭ್ರಷ್ಟಾಚಾರ ವಿರೋಧಿ ವೇದಿಕೆ ಗೌರವಾಧ್ಯಕ್ಷ ಗುರುಪಾದಯ್ಯ ಮಠದ್ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ಭ್ರಷ್ಟಾಚಾರ ಮೀತಿಮೀರಿದೆ. ಶಾಸಕರು ಹಾಗೂ ಅವರ ಸಹೋದರ ಸ್ವಜನ ಪಕ್ಷಪಾತ, ಸರ್ವಾಧಿಕಾರತ್ವ ಧೋರಣೆ, ಅಸಂಬದ್ಧ ಮತ್ತು ಪ್ರಚೋದನಾತ್ಮಕ ಹೇಳಿಕೆಗಳಿಂದ ಅವಳಿ ತಾಲ್ಲೂಕಿನಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ. ಇದರಿಂದ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುವ ಸಂಭವವಿದೆ" ಎಂದು ದೂರಿದ್ದಾರೆ.

"ಸರ್ಕಾರ ರೂಪಿಸಿದ ಮರಳು ನೀತಿಯನ್ನು ಉಲ್ಲಂಘಿಸಿ ಹಿಂಬಾಲಕರೊಂದಿಗೆ ಕಾನೂನು ಬಾಹಿರ ಮರಳು ಮಾಫಿಯಾಗೆ ಉತ್ತೇಜನ ನೀಡುತ್ತಿದ್ದಾರೆ. ಉದ್ಯೋಗ ಖಾತ್ರಿ ಮತ್ತು ವಿವಿಧ ಕ್ಷೇತ್ರದಲ್ಲಿ ಭ್ರಷ್ಟಾಚಾರ ಮೀತಿಮೀರಿದೆ. ಅಣ್ಣ ತಮ್ಮಂದಿರಂತೆ ಬದುಕುತ್ತಿರುವ ಹಿಂದೂ ಮುಸ್ಲಿಮರ ಮಧ್ಯೆ ಕಿಚ್ಚು ಹಚ್ಚುವ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಹುನ್ನಾರ ನಡೆಸುತ್ತಿದ್ದಾರೆ. ಇದೆಲ್ಲವನ್ನು ಖಂಡಿಸಿ ಏಕಾಂಕಿಯಾಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದೇನೆ. ಹೊನ್ನಾಳಿಯ ಭ್ರಷ್ಟಾಚಾರದ ಬಗ್ಗೆ ಜಿಲ್ಲಾಧಿಕಾರಿ, ಮುಖ್ಯಮಂತ್ರಿಗಳಿಗೆ, ಪ್ರಧಾನಮಂತ್ರಿ ಹಾಗೂ ಬಿಜೆಪಿಯ ರಾಷ್ಟ್ರ ಹಾಗೂ ರಾಜ್ಯಾಧ್ಯಕ್ಷರಿಗೆ ಪತ್ರ ಬರೆಯಲಾಗುವುದು" ಎಂದು ತಿಳಿಸಿದ್ದಾರೆ.












Click it and Unblock the Notifications