ದೇಶದ್ರೋಹಿ ಕೃತ್ಯಗಳಿಗೆ ವಿದ್ಯಾರ್ಥಿಗಳ ಬಳಕೆ; ಬೊಮ್ಮಾಯಿ ಎಚ್ಚರಿಕೆ
ದಾವಣಗೆರೆ, ಫೆಬ್ರವರಿ 22: "ರಾಜ್ಯದಲ್ಲಿ ದೇಶ ವಿರೋಧಿ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂಥ ಕೃತ್ಯಗಳ ಹಿಂದಿರುವವರನ್ನು ಪತ್ತೆ ಹಚ್ಚಲು ಬೆಂಗಳೂರಿನಲ್ಲಿ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ನಾಳೆ ಸಭೆ ಕರೆಯುತ್ತೇನೆ" ಎಂದು ದಾವಣಗೆರೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ದಾವಣಗೆರೆಯ ಸರ್ಕ್ಯೂಟ್ ಹೌಸ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿರೋಧಿ ಹೇಳಿಕೆಗಳು, ಕೃತ್ಯಗಳ ಹಿಂದೆ ಒಂದು ವ್ಯವಸ್ಥಿತ ಸಂಚು-ಷಡ್ಯಂತ್ರ ಇದೆ. ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆದಿದೆ. ಹಾಗಾಗಿ ಇದನ್ನೆಲ್ಲ ಹತ್ತಿಕ್ಕಲು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸುವುದಾಗಿ ತಿಳಿಸಿದರು.
ವಿದ್ಯಾರ್ಥಿಗಳಿಂದ ಪಾಕ್ ಪರ ಘೋಷಣೆ; ಗೃಹ ಸಚಿವರು ಹೇಳಿದ್ದೇನು?
"ರಾಜ್ಯದಲ್ಲಿ ದೇಶದ್ರೋಹಿ ಕೃತ್ಯಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ವಿದ್ಯಾರ್ಥಿಗಳು, ಅದರಲ್ಲೂ ಹೆಣ್ಣು ಮಕ್ಕಳನ್ನು ಇಂತಹ ಕೆಲಸಗಳಿಗೆ ಬಳಕೆ ಮಾಡಿಕೊಂಡು ಸಮಾಜದಲ್ಲಿ ಶಾಂತಿ ಕದಡುವ, ಗಲಭೆ ಸೃಷ್ಟಿಸುವ, ವೈಷಮ್ಯ ಉಂಟುಮಾಡುವ ಕೆಲಸ ನಡೆಯುತ್ತಿದೆ" ಎಂದು ದೂರಿದರು. "ಅಮೂಲ್ಯ ಹಿಂದೆ ಕೆಲ ವ್ಯಕ್ತಿಗಳು ಹಾಗೂ ಸಂಘಟನೆಗಳ ಕುಮ್ಮಕ್ಕು ಇದ್ದಂತಿದೆ. ಇದರ ಬಗ್ಗೆ ನಾಳೆ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಇಂತಹ ಕೃತ್ಯದಲ್ಲಿ ಭಾಗಿಯಾದವರನ್ನು ಬೇರು ಸಹಿತ ಕಿತ್ತು ಹಾಕಲಾಗುವುದು" ಎಂದರು.
ರಾಜ್ಯದಲ್ಲಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ, ದೇಶ ವಿರೋಧಿ ಚಟುವಟಿಕೆಗಳಿಗೆ ಶಾಲಾ-ಕಾಲೇಜುಗಳ ವೇದಿಕೆಗಳನ್ನು ವಿದ್ಯಾರ್ಥಿಗಳು ಬಳಸದಂತೆ ಎಚ್ಚರ ವಹಿಸಿ ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ಕಣ್ಣಿಡುವಂತೆಯೂ ಸೂಚನೆ ನೀಡಲಾಗಿದೆ ಎಂದರು. ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡು ಇಂತಹ ಚಟುವಟಿಕೆಗಳಲ್ಲಿ ತೊಡಗಿಸುವ ಪ್ರಯತ್ನ ನಡೆದಿದೆ. ಇಂತಹ ಚಟುವಟಿಕೆಗಳಲ್ಲಿ ಯಾರೇ ಭಾಗಿಯಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.