"ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಹಣ ಪಡೆದರೆ ನಿರ್ದಾಕ್ಷಿಣ್ಯ ಕ್ರಮ"
ದಾವಣಗೆರೆ, ಜುಲೈ 27: ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳು ಹಣ ಪಡೆಯುವಂತಿಲ್ಲ. ಸರ್ಕಾರದ ಈ ಆದೇಶ ಉಲ್ಲಂಘಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದರು.
Recommended Video
ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಸೋಮವಾರ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ನಗರದ ಖಾಸಗಿ ಆಸ್ಪತ್ರೆಗಳು ಹಣ ಕಟ್ಟಿಸಿಕೊಳ್ಳುತ್ತಿರುವ ಕುರಿತು ಬಂದ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, "ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿ ಕೊರೊನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು. ಇಂಥ ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವುದೇ ಸಬೂಬು ಹೇಳುವಂತಿಲ್ಲ" ಎಂದರು.

ದಾವಣಗೆರೆಯಲ್ಲಿ ಕೋವಿಡೇತರ ರೋಗಿಗಳಿಗೆ ಬೆಡ್ಗಳು ಇಲ್ಲ ಎನ್ನುವ ನೆಪವೊಡ್ಡಿ ಕೆಲ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುತ್ತಿರುವ ಬಗ್ಗೆ ವರದಿ ಬಂದಿರುವುದನ್ನು ಗಮನಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನಗರದ ಎಲ್ಲ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗುವುದು. ಈ ತಂಡ ದಿನ ಇಪ್ಪತ್ನಾಲ್ಕು ಗಂಟೆಗಳ ಕಾಲ ಮೂರು ಪಾಳಿಯಲ್ಲಿ ಕೆಲಸ ಮಾಡಲಿದೆ. ಚಿಕಿತ್ಸೆ ಅಗತ್ಯ ಇರುವವರು ಈ ತಂಡವನ್ನು ಸಂಪರ್ಕಿಸಿದರೆ ಅಗತ್ಯ ಸೇವೆ ನೀಡಲು ತಂಡ ಸಹಕಾರ ನೀಡಲಿದೆ. ಚಿಕಿತ್ಸೆ ನಿರಾಕರಿಸಿದರೆ ಅಂಥ ಆಸ್ಪತ್ರೆಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನೀಡಲಾಗಿದೆ ಎಂದರು.
ಬಿಎಸ್ ವೈ ಅಧಿಕಾರಕ್ಕೆ ಬರುತ್ತಿದ್ದಂತೆ ಅತಿವೃಷ್ಟಿಯಂಥ ಸವಾಲು ಎದುರಾಗಿತ್ತು. ನಂತರ, ಕೊರೊನಾ ವೈರಸ್ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿದೆ. ಕೊರೊನಾ ಸಮಸ್ಯೆ ಇಲ್ಲದಿದ್ದರೆ ರಾಜ್ಯವನ್ನು ಇನ್ನಷ್ಟು ಅಭಿವೃದ್ಧಿ ಮಾಡಬಹುದಿತ್ತು ಎಂದರು. ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ.ಲಿಂಗಣ್ಣ, ಎಸ್.ವಿ. ರಾಮಚಂದ್ರಪ್ಪ, ಜಿ.ಪಂ. ಅಧ್ಯಕ್ಷೆ ದೀಪಾ ಜಗದೀಶ ಇತರರು ಉಪಸ್ಥಿತರಿದ್ದರು.












Click it and Unblock the Notifications