ಶಾಸಕರ ಮನೆ ಮೇಲೆ ಲೋಕಾಯುಕ್ತ ದಾಳಿಯಿಂದ ಬಿಜೆಪಿಗೆ ಮುಜುಗರ: ದಾವಣಗೆರೆಯಲ್ಲಿ ಬಿ.ಎಲ್ ಸಂತೋಷ್ ಸಭೆ
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯ ಮೇಲೆ ಲೋಕಾಯುಕ್ತ ದಾಳಿ ಹಾಗೂ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಬಂಧನದ ಬಳಿಕ ಎದುರಾಗಿರುವ ಮುಜುಗರ ಕುರಿತಂತೆ ಸ್ಥಳೀಯ ನಾಯಕರಿಂದ ಬಿ.ಎಲ್. ಸಂತೋಷ್ ಮಾಹಿತಿ ಪಡೆದುಕೊಂಡಿದ್ದಾರೆ.
ದಾವಣಗೆರೆ, ಮಾರ್ಚ್ 8: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಭರ್ಜರಿ ಸಿದ್ಧತೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ದಾವಣಗೆರೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯ ಮೇಲೆ ಲೋಕಾಯುಕ್ತ ದಾಳಿ ಹಾಗೂ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಬಂಧನದ ಬಳಿಕ ಎದುರಾಗಿರುವ ಮುಜುಗರ ಕುರಿತಂತೆ ಸ್ಥಳೀಯ ನಾಯಕರಿಂದ ಬಿ.ಎಲ್. ಸಂತೋಷ್ ಮಾಹಿತಿ ಪಡೆದುಕೊಂಡಿದ್ದಾರೆ. ಮಾತ್ರವಲ್ಲ, ಮುಜುಗರ ಹೆಚ್ಚಾಗದಂತೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎನ್ನುವುದರ ಬಗ್ಗೆ ಹಾಗೂ ಚನ್ನಗಿರಿ ಕ್ಷೇತ್ರದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಹಮ್ಮಿಕೊಳ್ಳಲಾದ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಭಾಗವಹಿಸಿದ ಮಾತನಾಡಿದ ಬಿ.ಎಲ್ ಸಂತೋಷ್, "ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಗೆಲುವಿಗೆ ಶ್ರಮಿಸಿ. ಭಿನ್ನಾಭಿಪ್ರಾಯಗಳಿದ್ದರೆ ಈಗಲೇ ಸರಿಪಡಿಸಿಕೊಳ್ಳಿ. ಚುನಾವಣೆ ಸಮೀಪಿಸಿದಾಗ ಬಂಡಾಯ ಸಾಮಾನ್ಯ. ಈ ರೀತಿ ಆಗದಂತೆ ಪಕ್ಷದ ಪ್ರಮುಖರು ಎಚ್ಚರ ವಹಿಸಬೇಕು. ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಶ್ರಮಿಸುವಂತೆ" ಸಲಹೆ ನೀಡಿದರು.
ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನು ಜನರಿಗೆ ತಲುಪಿಸಿ. ಸರ್ಕಾರದ ಸಾಧನೆಗಳು ಮನೆ ಮನೆಗೆ ತಲುಪಿದರೆ ಗೆಲುವಿಗೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ಹೇಳಿದರು.

ದೇಶಾದ್ಯಂತ ಬಿಜೆಪಿ ಅಲೆ ಇದೆ. ಪ್ರಮುಖ ಚುನಾವಣೆಗಳಲ್ಲಿ ಬಿಜೆಪಿಯೇ ಗೆದ್ದಿದೆ. ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದೇವೆ. ಬೇರೆ ಪಕ್ಷಗಳು ಲಾಭ ಪಡೆದುಕೊಳ್ಳಲು ಬಿಡಬೇಡಿ. ಕಾರ್ಯಕರ್ತರ ಪ್ರೀತಿ, ವಿಶ್ವಾಸಗಳಿಸಿ. ಅವರ ಜೊತೆ ನಿರಂತರ ಸಂಪರ್ಕದಲ್ಲಿರಿ. ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಭಿನ್ನಮತ ಬರಬಾರದು. ನಮ್ಮಲ್ಲಿ ಒಗ್ಗಟ್ಟಿದ್ದರೆ ಗೆಲುವು ನಮ್ಮದಾಗುತ್ತದೆ ಎಂದು ಕಾರ್ಯಕರ್ತರಲ್ಲಿ ಭರವಸೆ ಹೆಚ್ಚಿಸಿದರು.
ಮುಂಬರುವ 2023ರ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತಂತೆ ಸಲಹೆ ನೀಡಿದ ಬಿ.ಎಲ್ ಸಂತೋಷ್ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿಯೂ ಈ ಬಾರಿ ಬಿಜೆಪಿ ಗೆಲ್ಲಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿರುವುದಲ್ಲದೇ ಅಭ್ಯರ್ಥಿಗಳು ಯಾರಾಗಬೇಕು ಎಂದು ಸಹ ಸಮಾಲೋಚನೆ ನಡೆಸಿದ್ದಾರೆ.

ಸಭೆಯಲ್ಲಿ ಸಂಸದ ಜಿ. ಎಂ. ಸಿದ್ದೇಶ್ವರ, ಶಾಸಕರಾದ ಎಸ್. ಎ. ರವೀಂದ್ರನಾಥ್, ಎಸ್. ವಿ. ರಾಮಚಂದ್ರ, ಪ್ರೊ. ಲಿಂಗಣ್ಣ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಶಿವಯೋಗಿ ಸ್ವಾಮಿ, ಮಾಜಿ ಶಾಸಕರಾದ ಬಸವರಾಜ್ ನಾಯ್ಕ್, ಬಿ. ಪಿ. ಹರೀಶ್, ಜಯಾ ರುದ್ರೇಶ್, ವಿಧಾನ ಪರಿಷತ್ ಸದಸ್ಯ ನವೀನ್ ಮತ್ತಿತರರು ಹಾಜರಿದ್ದರು.
ಪಂಚಮಸಾಲಿ ಪೀಠಕ್ಕೆ ಬಿ.ಎಲ್ ಸಂತೋಷ್ ಭೇಟಿ
ಹರಿಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಸ್ ಸಂತೋಷ್ ಭೇಟಿ ನೀಡಿ ವಚನಾನಂದ ಸ್ವಾಮೀಜಿ ಜೊತೆ ಚರ್ಚೆ ನಡೆಸಿದರು. ಶ್ರೀಗಳ ಆಶೀರ್ವಾದ ಪಡೆದ ಸಂತೋಷ್ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಹಾಜರಿದ್ದರು.
ಚುನಾವಣೆಗೆ ಇನ್ನೆರಡು ತಿಂಗಳು ಬಾಕಿ ಇರುವಂತೆ ಪಂಚಮಸಾಲಿ ಪೀಠಕ್ಕೆ ಬಿ.ಎಲ್. ಸಂತೋಷ್ ಭೇಟಿ ನೀಡಿರುವುದು ರಾಜಕೀಯ ಕಾರಣಕ್ಕಾಗಿ ಎನ್ನಲಾಗುತ್ತಿದ್ದು, ಪಂಚಮಸಾಲಿ ಸಮಾಜದ ಮತಗಳು ಕೈತಪ್ಪದಂತೆ ಎಚ್ಚರ ವಹಿಸಲು ಬಿಜೆಪಿ ಮುಂದಾಗಿದೆ. ಈ ನಿಟ್ಟಿನಲ್ಲಿ ಶ್ರೀಗಳ ಭೇಟಿ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ ಎನ್ನಲಾಗಿದೆ.












Click it and Unblock the Notifications