ದಾವಣಗೆರೆಯಲ್ಲಿ ಅನಾವಶ್ಯಕ ಸಂಚಾರಕ್ಕೆ ಬ್ರೇಕ್
ದಾವಣಗೆರೆ. ಮಾರ್ಚ್ 29: ಅನಾವಶ್ಯಕವಾಗಿ ದ್ವಿಚಕ್ರ ವಾಹನಗಳಲ್ಲಿ ಸಂಚರಿಸಿದರೆ ಅವುಗಳನ್ನು ಸೀಜ್ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಕಟ್ಟುನಿಟ್ಟಿನ ಆದೇಶವಿದ್ದರೂ ಜನರು ಅನಾವಶ್ಯಕವಾಗಿ ನಗರದೆಲ್ಲೆಡೆ ಸಂಚಾರ ಮಾಡುತ್ತಿದ್ದಾರೆ. ಪೊಲೀಸರ ಮನವಿಗೂ ಸ್ಪಂದಿಸುತ್ತಿಲ್ಲ ಅದಕ್ಕಾಗಿ ಈ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.
ದಾವಣಗೆರೆ ಡಿಸಿಯಿಂದ ಶಾಸಕ ರೇಣುಕಾಚಾರ್ಯಗೆ ಕ್ಲಾಸ್
ಔಷಧಿ, ದಿನಸಿ ತರುವವರಿಗೆ, ಆಸ್ಪತ್ರೆಯಲ್ಲಿ ದಾಖಲಾಗಿರುವವರ ಕಡೆಯವರಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ವಿನಾಕಾರಣ ಕಾರುಗಳಲ್ಲಿ ನಾಲ್ಕೈದು ಮಂದಿ ಸಂಚಾರ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಅವಶ್ಯವಿದ್ದರೆ ಮಾತ್ರ ಮನೆಯಿಂದ ಹೊರಬರಬೇಕು, ಸಾರ್ವಜನಿಕರೂ ಸಹ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಈಗಾಗಲೇ ಪೆಟ್ರೋಲ್ ಬಂಕ್ ಗಳ ಬಂದ್ ಗೆ ಆದೇಶ ನೀಡಿದ್ದಾರೆ. ಆದರೂ ಸಹ ಜನರು ಬಂಕ್ ಗಳಿಗೆ ತೆರಳುತ್ತಿದ್ದಾರೆ. ಚನ್ನಗಿರಿ ತಾಲ್ಲೂಕಿನಲ್ಲಿ ಪೊಲೀಸರೆಂದು ಸುಳ್ಳು ಹೇಳಿದ್ದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಮಂಡಕ್ಕಿ ಭಟ್ಟಿಗಳನ್ನು ಬಂದ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮುಂದಿನ ಆದೇಶದವರೆಗೂ ಸಹ ಮಂಡಕ್ಕಿ ಭಟ್ಟಿಗಳು ಬಂದ್ ಇರಲಿವೆ. ಎಲ್ಲಾ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗಿದ್ದು, ಮೈಕ್ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಜನರೂ ಸಹ ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು ಎಂದು ಹೇಳಿದರು.
ನಗರದಲ್ಲಿರುವ ಭವಾನಿ ಲಿಕ್ಕರ್ ಶಾಪ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.
ಸುಮಾರು 3, 89,020 ರೂ. ಬೆಲೆಯ 74 ಬಾಕ್ಸ್ (689 ಲೀ) ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದರು.