ಬೆಣ್ಣೆ ನಗರಿ ದಾವಣಗೆರೆಯಲ್ಲೀಗ ಸಚಿವ ಸ್ಥಾನಕ್ಕೆ ಪೈಪೋಟಿ
ದಾವಣಗೆರೆ, ಸೆಪ್ಟೆಂಬರ್ 29: ಸಚಿವ ಸಂಪುಟಕ್ಕೆ ಹೊಸದಾಗಿ ಯಾರನ್ನು ಸೇರಿಸಿಕೊಳ್ಳಬೇಕು, ಬಿಡಬೇಕು ಎಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
Recommended Video
ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್ ಅವರ ನಿವಾಸದಲ್ಲಿ ಇಂದು ಸುದ್ದಿಗಾರರ ಜತೆಗೆ ಮಾತನಾಡಿದ ಅವರು, 'ಮಧ್ಯ ಕರ್ನಾಟಕದ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ. ನಾನು ಪ್ರಬಲ ಆಕಾಂಕ್ಷಿಯಲ್ಲ. ರವೀಂದ್ರನಾಥ್ ಅವರಂಥ ಹಿರಿಯರು ಇದ್ದಾರೆ. ಜಿಲ್ಲೆಯ ಯಾರಿಗಾದರೂ ಕೊಡಲಿ' ಎಂದರು ಎಂದರು.

"ಕಾಂಗ್ರೆಸ್ ರೈತರನ್ನು ಎತ್ತಿಕಟ್ಟುತ್ತಿದೆ"
'ರೈತರ ಹಿತದೃಷ್ಟಿಯಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲಾಗುತ್ತಿದೆ. ರೈತರು ಸಂತೋಷವಾಗಿದ್ದಾರೆ. ಕಾಂಗ್ರೆಸ್ಗೆ ಸರ್ಕಾರದ ವಿರುದ್ಧ ಮಾತನಾಡಲು ಬೇರೆ ವಿಷಯವಿಲ್ಲ. ಹಾಗಾಗಿ ಅವರು ದುಃಖದಲ್ಲಿದ್ದಾರೆ. ಅದಕ್ಕಾಗಿ ರೈತರನ್ನು ಎತ್ತಿಕಟ್ಟುತ್ತಿದ್ದಾರೆ' ಎಂದು ಆರೋಪಿಸಿದರು.

"ಒತ್ತಾಯಪೂರ್ವಕವಾಗಿ ಬಿಲ್ ಪಾಸ್ ಆಗಿಲ್ಲ"
'ಅಧಿವೇಶನದಲ್ಲಿ ಅಧಿಕೃತವಾಗಿ ಕೃಷಿ ಸಂಬಂಧಿತ ಮಸೂದೆ ಮಂಡನೆಯಾಗಿ ಪಾಸಾಗಿದೆ. ಒತ್ತಾಯ ಪೂರ್ವಕವಾಗಿ ನಾವು ಬಿಲ್ ಪಾಸ್ ಮಾಡಿಲ್ಲ. ಕಾಂಗ್ರೆಸ್ ಕಾರಣವಿಲ್ಲದೇ ಟೀಕೆ ಮಾಡಿ ಜನರ ದಿಕ್ಕು ತಪ್ಪಿಸುತ್ತಿದೆ' ಎಂದು ಹೇಳಿದರು.

ಸಚಿವ ಸ್ಥಾನದ ರೇಸ್ ನಲ್ಲಿ ಶಾಸಕರು
ಉತ್ತರ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಚಿವ ಸ್ಥಾನದ ರೇಸ್ ನಲ್ಲಿದ್ದಾರೆ. ಜಿಲ್ಲೆಗೆ ಒಂದು ಸಚಿವ ಸ್ಥಾನ ಬೇಕು ಎಂದು ಜಿಲ್ಲೆಯ ಶಾಸಕರು ಪಟ್ಟು ಹಿಡಿದಿದ್ದಾರೆ. ಈ ಕುರಿತು ನಾಲ್ಕೈದು ಬಾರಿ ಸಭೆಯನ್ನೂ ನಡೆಸಿದ್ದಾರೆ.

ರೇಣುಕಾಚಾರ್ಯಗೆ ಸಚಿವ ಸ್ಥಾನ?
ಈಗ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ಬಹುತೇಕ ಖಚಿತವಾಗಿದೆ. ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನು ಈ ವಿಚಾರವಾಗಿ ಭೇಟಿ ಮಾಡಿ ರೇಣುಕಾಚಾರ್ಯ ಲಾಬಿ ನಡೆಸಿರುವುದಾಗಿಯೂ ತಿಳಿದುಬಂದಿದೆ.












Click it and Unblock the Notifications