ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆ
ದಾವಣಗೆರೆ, ಏಪ್ರಿಲ್, 13: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್.ಎಸ್. ಮಲ್ಲಿಕಾರ್ಜುನ್ ಬುಧವಾರ (ಏಪ್ರಿಲ್ 13) ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಎಸ್.ಎಸ್.ಮಲ್ಲಿಕಾರ್ಜುನ್ ಅವರು ಮಹಾನಗರ ಪಾಲಿಕೆಯ ಮೇಯರ್ ಕಚೇರಿಯಲ್ಲಿ ಉತ್ತರ ಕ್ಷೇತ್ರದ ಚುನಾವಣಾಧಿಕಾರಿ ಶ್ರೀನಿವಾಸ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಆಗಮಿಸಿದ ಮಲ್ಲಿಕಾರ್ಜುನ್ ಅವರು, ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಅಧಿಕೃತವಾಗಿ ಕಣಕ್ಕಿಳಿದಿದ್ದಾರೆ.

ದಾವಣಗೆರೆ ಉತ್ತರದಲ್ಲಿ ಬಿಜೆಪಿಯಿಂದ ಲೋಕಿಕೆರೆ ನಾಗರಾಜ್ ಕಣಕ್ಕಿಳಿದಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಏರ್ಪಡಲಿದೆ. ಹಾಗೆಯೇ ಆಮ್ ಆದ್ಮಿ ಪಕ್ಷದಿಂದ ಶ್ರೀಧರ್ ಪಾಟೀಲ್ಗೆ ಟಿಕೆಟ್ ಘೋಷಿಸಲಾಗಿದೆ. ಆದರೆ ಜೆಡಿಎಸ್ ಅಭ್ಯರ್ಥಿ ಇನ್ನೂ ಘೋಷಣೆ ಆಗಿಲ್ಲ. ಏಪ್ರಿಲ್ 17ರ ಸೋಮವಾರದಂದು ಅಪಾರ ಬೆಂಲಿಗರೊಂದಿಗೆ ಮತ್ತೊಮ್ಮೆ ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
2018ರಲ್ಲಿ ಸೋಲನುಭವಿಸಿದ್ದ ಮಲ್ಲಿಕಾರ್ಜುನ್
2018ರ ಚುನಾವಣೆಯಲ್ಲಿ ಬಿಜೆಪಿಯ ಎಸ್.ಎ.ರವೀಂದ್ರನಾಥ್ ವಿರುದ್ಧ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ್ ಕೇವಲ ನಾಲ್ಕೂವರೆ ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದರು.
ಇಂದೇ ಒಳ್ಳೆಯ ದಿನ ಎಂಬ ಕಾರಣಕ್ಕೆ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ರ ಜೊತೆ ಆಗಮಿಸಿದ ಮಲ್ಲಿಕಾರ್ಜುನ್ ಅವರು ನಾಮಪತ್ರ ಸಲ್ಲಿಸುವ ಮೂಲಕ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗಾಗಲೇ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಡ್ಗಳಿಗೆ ತೆರಳಿ ಮತಯಾಚಿಸುತ್ತಿರುವ ಮಲ್ಲಿಕಾರ್ಜುನ್ ಅವರು ಈ ಬಾರಿಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ಪತಿ ಗೆಲುವಿಗೆ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಪುತ್ರ ಸಮರ್ಥ್ ಶಾಮನೂರು ಸಹ ಪ್ರಚಾರ ನಡೆಸಿದ್ದು, ಮನೆ ಮನೆಗೆ ಭೇಟಿ ನೀಡಿ ಮತಯಾಚಿಸುತ್ತಿದ್ದಾರೆ. ಮತ್ತೊಂದೆಡೆ ಎಲ್ಲಾ ವಾರ್ಡ್ಗಳ ಜನರನ್ನು ಸೇರಿಸಿ ಸಭೆ ನಡೆಸಿ ಅಭಿವೃದ್ಧಿಗೆ ಮತ್ತೊಮ್ಮೆ ಮತ ನೀಡಿ. ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿ ಎಂದು ಮತಯಾಚಿಸುತ್ತಿದ್ದಾರೆ.
2013ರಲ್ಲಿ ರವೀಂದ್ರನಾಥ್ ವಿರುದ್ಧ ಗೆಲುವು
ಇನ್ನು ಲೋಕಿಕೆರೆ ನಾಗರಾಜ್ ಹೊಸಮುಖ ಆಗಿದ್ದರೂ ಬಿಜೆಪಿಗೆ ಬಲಿಷ್ಠವಾಗಿರುವ ಕ್ಷೇತ್ರವಿದು. 2008ರಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಎಸ್. ಎ.ರವೀಂದ್ರನಾಥ್ ಕಣಕ್ಕಿಳಿದು ಜಯ ಗಳಿಸಿದ್ದರು. ನಂತರ 2013ರಲ್ಲಿ ಮಲ್ಲಿಕಾರ್ಜುನ್ ಅವರು ಭಾರಿ ಅಂತರದಲ್ಲಿ ರವೀಂದ್ರನಾಥ್ ಅವರನ್ನು ಮಣಿಸಿದ್ದರು. 2018ರಲ್ಲಿ ಗೆಲ್ಲುವ ಅತ್ಯುತ್ಸಾಹ ಹೊಂದಿದ್ದರೂ ಮಲ್ಲಿಕಾರ್ಜುನ್ ಸೋಲು ಅನುಭವಿಸಿದ್ದರು.
ಈ ಬಾರಿ ಗೆಲುವಿಗೆ ಕಸರತ್ತು ನಡೆಸುತ್ತಿರುವ ಮಲ್ಲಿಕಾರ್ಜುನ್ ಅವರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಜೊತೆ ತೆರಳಿ ಮತ ಕೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಪೈಪೋಟಿ ಇದ್ದು, ಉಳಿದ ಪಕ್ಷಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನುವ ವಾತಾವರಣ ನಿರ್ಮಾಣವಾಗಿದೆ.
ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ
ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ದಾವಣಗೆರೆ ಉತ್ತರಕ್ಕೆ ಲೋಕಿಕೆರೆ ನಾಗರಾಜ್, ದಾವಣಗೆರೆ ದಕ್ಷಿಣಕ್ಕೆ ಅಜಯ್ ಕುಮಾರ್, ಮಾಯಕೊಂಡ ಕ್ಷೇತ್ರಕ್ಕೆ ಬಸವರಾಜ್ ನಾಯ್ಕ್ ಹಾಗೂ ಚನ್ನಗಿರಿಗೆ ಶಿವಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್ ದಾವಣಗೆರೆ ಉತ್ತರದಿಂದ, ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪರ ವಿರುದ್ಧ ಮಹಾನಗರ ಪಾಲಿಕೆ ಮಾಜಿ ಮೇಯರ್ ಅಜಯ್ ಕುಮಾರ್ ದಾವಣಗೆರೆ ದಕ್ಷಿಣದಿಂದ, ಚನ್ನಗಿರಿಯಲ್ಲಿ ಕಾಂಗ್ರೆಸ್ನ ಶಿವಗಂಗಾ ಬಸವರಾಜ್ ವಿರುದ್ಧ ಶಿವಕುಮಾರ್, ಕಾಂಗ್ರೆಸ್ನ ಬಸವಂತಪ್ಪ ವಿರುದ್ಧ ಬಿಜೆಪಿಯ ಬಸವರಾಜ್ ನಾಯ್ಕ್ ಕಣಕ್ಕಿಳಿಯಲಿದ್ದಾರೆ.
ಹೊನ್ನಾಳಿಗೆ ಎಂ.ಪಿ. ರೇಣುಕಾಚಾರ್ಯ, ಜಗಳೂರಿಗೆ ಎಸ್. ವಿ. ರಾಮಚಂದ್ರ, ಹರಿಹರಕ್ಕೆ ಬಿ.ಪಿ. ಹರೀಶ್ಗೆ ಟಿಕೆಟ್ ಘೋಷಿಸಿದ್ದ ಬಿಜೆಪಿಯು ಈಗ ಉಳಿದ ನಾಲ್ವರ ಹೆಸರನ್ನು ಅಖೈರುಗೊಳಿಸಿದೆ. ಎರಡನೇ ಪಟ್ಟಿಯಲ್ಲಿಯೂ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪರು ಹೇಳಿದವವರಿಗೆ ಬಹುತೇಕ ಟಿಕೆಟ್ ಸಿಕ್ಕಿದೆ.
ಇನ್ನು ಮಾಯಕೊಂಡದಿಂದ ಮಾಜಿ ಸಚಿವ ಎಸ್. ಎ.ರವೀಂದ್ರನಾಥ್ ಅವರು ಸೂಚಿಸಿದ ಬಸವರಾಜ್ ನಾಯ್ಕ್ಗೆ ಕೇಸರಿ ಪಡೆಯು ಮಣೆ ಹಾಕಿದೆ. ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಂಸದ ಜಿ. ಎಂ. ಸಿದ್ದೇಶ್ವರ ಪುತ್ರ ಜಿ.ಎಸ್. ಅನಿತ್ ಕುಮಾರ್, ಎಸ್. ಟಿ. ವೀರೇಶ್ ಹೆಸರು ಕೇಳಿ ಬಂದಿತ್ತಾದರೂ ಯಡಿಯೂರಪ್ಪರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಲೋಕಿಕೆರೆ ನಾಗರಾಜ್ ಟಿಕೆಟ್ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ.












Click it and Unblock the Notifications