Lokayukta Raid: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ದಾವಣಗೆರೆ ಜಿಲ್ಲೆಯಾದ್ಯಂತ ಕಾಂಗ್ರೆಸ್ ರಣಕಹಳೆ
ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮಾಡಾಳ್ ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆಯಾಗಿದ್ದು, ಶಾಸಕ ಮತ್ತು ಪುತ್ರರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪಕ್ಷವು ದಾವಣಗೆರೆಯಲ್ಲಿ ಹೋರಾಟದ ರಣಕಹಳೆಯನ್ನೇ ಮೊಳಗಿಸಿದೆ.
ದಾವಣಗೆರೆ, ಮಾರ್ಚ್, 03: ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮಾಡಾಳ್ ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆಯಾಗಿದ್ದು, ಶಾಸಕ ಮತ್ತು ಪುತ್ರರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪಕ್ಷವು ದಾವಣಗೆರೆಯಲ್ಲಿ ಹೋರಾಟದ ರಣಕಹಳೆಯನ್ನೇ ಮೊಳಗಿಸಿದೆ.
ಶಾಸಕರ ವಿರುದ್ಧ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ಮುಂದುವರೆದಿವೆ. ದಾವಣಗೆರೆ ಹಾಗೂ ಚನ್ನಗಿರಿಯಲ್ಲಿ ಮಾಡಾಳ್ ವಿರೂಪಾಕ್ಷಪ್ಪನವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಬಿಜೆಪಿ ಶೇಕಡಾ 40ರಷ್ಟು ಕಮೀಷನ್ ಸರ್ಕಾರವಾಗಿದೆ. ಇದಕ್ಕಿಂತ ಸಾಕ್ಷಿ ಬೇಕಾ?. ಬಿಜೆಪಿಯೆಂದರೆ ಭ್ರಷ್ಟಾಚಾರ, 40 ಪರ್ಸಂಟೇಸ್ ಸರ್ಕಾರ. ಕೂಡಲೇ ಶಾಸಕ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಬೇಕು. ಹಾಗೆಯೇ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆಗ್ರಹಿಸಿದರು.
ದಾವಣಗೆರೆಯಲ್ಲಿ ಪ್ರತಿಭಟನೆ
ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ರನ ಲಂಚಾವತಾರ ಬಟಾಬಯಲಾಗಿದ್ದು, ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಂತಹ ಭ್ರಷ್ಟರನ್ನು ರಕ್ಷಿಸಲು ಮಧ್ಯ ಪ್ರವೇಶಿಸಬಾರದು. ತಕ್ಕ ಶಿಕ್ಷೆಯಾಗಬೇಕು. ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು. ಮಾಡಾಳ್ ವಿರೂಪಾಕ್ಷಪ್ಪ, ಪುತ್ರರಾದ ಮಲ್ಲಿಕಾರ್ಜುನ್ ಹಾಗೂ ಪ್ರಶಾಂತ್ ಮಾಡಾಳ್ ಅವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಎಲ್ಲೆಡೆ ಆಸ್ತಿ ಹೊಂದಿದ್ದಾರೆ ಎಂದು ಬಯಲಾಗಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನಿಂದ ತಪ್ಪಿಸಿಕೊಳ್ಳುವಂತೆ ಆಗಬಾರದು
ಇದಕ್ಕೆಲ್ಲಾ ಎಲ್ಲಿಂದ ಹಣ ಬಂತು? ಕೋಟ್ಯಂತರ ರೂಪಾಯಿ ಲೂಟಿ ಹೊಡೆದು, ನೂರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಇವರು ಕಾನೂನಿಂದ ತಪ್ಪಿಸಿಕೊಳ್ಳುವಂತೆ ಆಗಬಾರದು ಎಂದು ಆಗ್ರಹಿಸಿದರು.
ಲಂಚ ಸ್ಪೀಕರಿಸುವಾಗ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ ದಾಳಿ ವೇಳೆ 40 ಲಕ್ಷ ಲಂಚ ಸ್ಪೀಕರಿಸುವಾಗ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಸಿಕ್ಕಿಹಾಕಿಕೊಂಡಿದ್ದಾರೆ. ಈ ವೇಳೆ ಕಚೇರಿಯಲ್ಲಿ 1.62 ಕೋಟಿ ರೂ., ಮನೆಯಲ್ಲಿ ಸುಮಾರು 6 ಕೋಟಿ ರೂ. ಸಿಕ್ಕಿದೆ. ಆದರೂ ಈ ಪ್ರಕರಣದಲ್ಲಿ ಶಾಸಕರನ್ನು ಬಂಧಿಸದೇ ಮೀನಾಮೇಷ ಎಣಿಸಲಾಗುತ್ತಿದೆ. ಇದು ಸರಿಯಲ್ಲ. ಎಲ್ಲೇ ಆಸ್ತಿ ಮಾಡಿದ್ದರೂ ಜಫ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಶಾಸಕರು ಜನರಿಗೆ ಟೋಪಿ ಹಾಕಿದ್ದಾರೆ
ಇಂತಹವರಿಂದ ರಾಜಕಾರಣಕ್ಕೆ ಕೆಟ್ಟ ಹೆಸರು. ಶಾಸಕರು ಜನರಿಗೆ ಟೋಪಿ ಹಾಕಿದ್ದಾರೆ. ಭ್ರಷ್ಟ ಕುಟುಂಬ ಇದು. ತನ್ನ ಪುತ್ರ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸರ್ಕಾರ ಭ್ರಷ್ಟ ಎನ್ನುವುದಕ್ಕೆ ಇದಕ್ಕಿಂತ ಮತ್ತೊಂದು ಉದಾಹರಣೆ ಇಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯಿಂದ ಭ್ರಷ್ಟರ ರಕ್ಷಣೆ
ಪ್ರತಿಭಟನೆಯಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಶೇಕಡಾ 40ರಷ್ಟು ಕಮಿಷನ್ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆಲವೇ ದಿನಗಳಲ್ಲಿ ಸರ್ಕಾರ ಅವರಿಗೆ ಕ್ಲೀನ್ ಚಿಟ್ ನೀಡಿತು. ಭ್ರಷ್ಟರನ್ನು ರಕ್ಷಿಸುವ ಸರ್ಕಾರ ಎಂದರೆ ಅದು ಬಿಜೆಪಿ ಮಾತ್ರ ಎಂದು ಗುಡುಗಿದರು.
ಈಗ ಪ್ರಶಾಂತ್ ಮಾಡಾಳ್ರನ್ನು ಯಾವುದೇ ಕಾರಣಕ್ಕೂ ರಕ್ಷಿಸಬಾರದು. ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಜೊತೆಗೆ ಮಾಡಾಳ್ ವಿರೂಪಾಕ್ಷಪ್ಪನವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಲೋಕಾಯುಕ್ತ ಪೊಲೀಸರು ಬಂಧಿಸಿ, ಭ್ರಷ್ಟಾಚಾರದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಹಾಗೆಯೇ ಉನ್ನತ ಮಟ್ಟದ ವಿಚಾರಣೆ ಆಗಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಲ್ಲಿ ಪಾಲಿಕೆ ಸದಸ್ಯರಾದ ಪಾಮೇನಹಳ್ಳಿ ನಾಗರಾಜ್, ಕಲ್ಲಹಳ್ಳಿ ನಾಗರಾಜ್, ಎ. ನಾಗರಾಜ್, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಜಿ. ಶಿವಕುಮಾರ್, ಮೊಹಮ್ಮದ್ ಜಿಕ್ರಿಯಾ, ಮೊಯಿನುದ್ದೀನ್, ಮನು, ಭರತ್ ಮೈಲಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಚನ್ನಗಿರಿಯಲ್ಲೂ ಕಾಂಗ್ರೆಸ್ನಿಂದ ಪ್ರತಿಭಟನೆ
ಇನ್ನು ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮಾಡಾಳ್ ಲಂಚಬಾಕತನದ ವಿರುದ್ಧ ಚನ್ನಗಿರಿ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತು. ಮಾಜಿ ಶಾಸಕ ವಡ್ನಾಳ್ ರಾಜಣ್ಣರ ನೇತೃತ್ವದಲ್ಲಿ ಚನ್ನಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಸಕರನ್ನು ಬಂಧಿಸುವಂತೆ ಪಟ್ಟುಹಿಡಿದಿದ್ದರು.
ಮಿತಿ ಮೀರಿದ ಭ್ರಷ್ಟಾಚಾರ
ಚನ್ನಗಿರಿ ಕ್ಷೇತ್ರದಲ್ಲಿ ಭ್ರಷ್ಟಾಚಾರ ಮಿತಿ ಮೀರಿತ್ತು. ಟೆಂಡರ್ ಕರೆಯಲು ಲಂಚ ಕೇಳಲಾಗುತ್ತಿತ್ತು. ನಾವು ಆರೋಪ ಮಾಡಿದಾಗ ರಾಜಕೀಯ ಪ್ರೇರಿತ ಆರೋಪ ಎನ್ನುತ್ತಿದ್ದರು. ಈಗ ಅವರ ಪುತ್ರ ಪ್ರಶಾಂತ್ ಕಚೇರಿಯಲ್ಲಿ 1. 62 ಕೋಟಿ ರೂಪಾಯಿ ಹಾಗೂ ಮನೆಯಲ್ಲಿ ಆರು ಕೋಟಿ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿದೆ. ಇದು ಎಲ್ಲಿಂದ ಬಂತು? ಯಾರ್ಯಾರಿಂದ ಪಡೆದಿದ್ದಾರೆ? ಇನ್ನು ಕ್ಷೇತ್ರದಲ್ಲಿ ನಡೆದಿರುವ ಕಾಮಗಾರಿಗಳ ಕುರಿತಂತೆಯೂ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಶಾಸಕರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಕುಟುಂಬದವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಇಂತಹವರಿಂದ ಉತ್ತಮ ಆಡಳಿತ ಸಾಧ್ಯವೇ? ಕೂಡಲೇ ಮಾಡಾಳ್ ವಿರೂಪಾಕ್ಷಪ್ಪರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಲೋಕಾಯುಕ್ತ ಪೊಲೀಸರು ಬಂಧಿಸಿ, ಇನ್ನು ಯಾವೆಲ್ಲಾ ಅಕ್ರಮ ಮಾಡಿದ್ದಾರೆ ಎಂಬ ಕುರಿತಂತೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.












Click it and Unblock the Notifications