Lok Sabha Election 2024; ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಯಾರು?
ದಾವಣಗೆರೆ, ಜನವರಿ 17: ಲೋಕಸಭೆ ಚುನಾವಣೆಯ ತಯಾರಿಯನ್ನು ಎಲ್ಲಾ ಪಕ್ಷಗಳು ಆರಂಭಿಸಿವೆ. ಯಾವ ಕ್ಷೇತ್ರದಿಂದ ಯಾರು ಅಭ್ಯರ್ಥಿಯಾಗಲಿದ್ದಾರೆ? ಎಂಬ ಚರ್ಚೆಗಳು ನಡೆಯುತ್ತಿವೆ. ದಾವಣಗೆರೆ ಕ್ಷೇತ್ರದಿಂದ ಶಾಮನೂರು ಶಿವಶಂಕರಪ್ಪ ಕುಟುಂಬದವರು ಕಣಕ್ಕಿಳಿಯಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಬುಧವಾರ ದಾವಣಗೆರೆ ನಗರದ ಕೆಬಿ ಬಡಾವಣೆಯಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಸಮಾಲೋಚನೆ ಕಾರ್ಯಕ್ರಮದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ಪಾಲ್ಗೊಂಡಿದ್ದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಲೋಕಸಭಾ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ನಾನು ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುವ ಕುರಿತಂತೆ ಮನೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ" ಎಂದು ಸ್ಪಷ್ಟಪಡಿಸಿದರು.
"ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಇನ್ನೊಂದು ತಿಂಗಳಿನಲ್ಲಿ ಘೋಷಿಸಲಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿನಿಂದಲೂ ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ಮಾತು ಕೇಳಿ ಬರುತ್ತಿವೆ" ಎಂದರು.
"ಕಾರ್ಯಕರ್ತರು, ಮುಖಂಡರ ಅಪೇಕ್ಷೆ ಇದೆ. ಹಾಗೆಂದ ಮಾತ್ರಕ್ಕೆ ನಾನು ತೀರ್ಮಾನಿಸಲು ಆಗುವುದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ದಾವಣಗೆರೆ ಕಾಂಗ್ರೆಸ್ ಸಂಯೋಜಕರಾದ ಎಸ್. ಎಸ್. ಮಲ್ಲಿಕಾರ್ಜುನ್ ಅವರು ತೀರ್ಮಾನಿಸುತ್ತಾರೆ" ಎಂದು ಹೇಳಿದರು.
ಟಿಕೆಟ್ಗೆ ತಲೆಕೆಡಿಸಿಕೊಂಡಿಲ್ಲ: "ಮನೆ ಮನೆಗೆ ಆರೋಗ್ಯ ಸೇವೆ ನೀಡಬೇಕು ಎಂಬ ಕಲ್ಪನೆಯೊಂದಿಗೆ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಲೋಕಸಭಾ ಚುನಾವಣೆಯ ಅಜೆಂಡಾ ಇಟ್ಟುಕೊಂಡು ಈ ಕೆಲಸ ಮಾಡುತ್ತಿಲ್ಲ. 2019ರಿಂದಲೂ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ" ಎಂದು ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
"5 ವರ್ಷಕ್ಕೊಮ್ಮೆ ಚುನಾವಣೆ ಬರುತ್ತದೆ. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ್ರ ಪ್ರಚಾರ ಕಾರ್ಯದಲ್ಲಿ ಓಡಾಡಿದ್ದೆ. ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ, ಜವಾಬ್ದಾರಿ ಜಾಸ್ತಿಯಾಗಿದೆ. ನಾನು ಟಿಕೆಟ್ ಬಗ್ಗೆ ತಲೆಕೆಡಿಸಿಕೊಂಡಿಲ್ಲ" ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
"ಒಂದು ನನಗೆ ಬಿ ಫಾರಂ ಕೊಟ್ಟಾಗ ನೋಡೋಣ. ಎಸ್. ಎಸ್. ಮಲ್ಲಿಕಾರ್ಜುನ್ ಅವರು ಸಚಿವರಾಗಿದ್ದಾರೆ. ಬಾಪೂಜಿ ಆಸ್ಪತ್ರೆ, ಎಸ್ಎಸ್ ಆಸ್ಪತ್ರೆ ಸೇರಿದಂತೆ ಬೇರೆ ಬೇರೆ ಸಭೆಗಳಿರುತ್ತವೆ. ಕಾರ್ಯಕ್ರಮಗಳಿರುತ್ತವೆ. ಪ್ರಭಾ ಮಲ್ಲಿಕಾರ್ಜುನ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಕಾರ್ಯಕರ್ತರು, ಮುಖಂಡರ ಆಸೆ ವ್ಯಕ್ತಪಡಿಸುವುದು ತಪ್ಪಲ್ಲ. ಸಮಯ ಬಂದಾಗ ನೋಡೋಣ. ಈಗ ಯಾಕೆ ಚರ್ಚೆ?" ಎಂದರು.
ಜನವರಿ 22ಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, "ರಾಮನಿಗೆ ಎಲ್ಲರೂ ಭಕ್ತರು. ನಾವು ರಾಮನ ಭಕ್ತರು. ಶ್ರೀರಾಮ ಯಾವುದೋ ಒಂದು ಪಕ್ಷಕ್ಕೆ ಸೀಮಿತ ಅಲ್ಲ. ನಮಗೂ ಶ್ರದ್ಧೆ ಇದೆ, ನಾವು ಪೂಜೆ ಸಲ್ಲಿಸುತ್ತೇವೆ" ಎಂದರು.












Click it and Unblock the Notifications