ಶಿವಮೊಗ್ಗ ಮಾದರಿಯಲ್ಲಿ ದಾವಣಗೆರೆಯಲ್ಲೂ 4 ದಿನ ಸಂಪೂರ್ಣ ಲಾಕ್ಡೌನ್
ದಾವಣಗೆರೆ, ಮೇ 13: ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಮಾದರಿಯಂತೆ ನಾಲ್ಕು ದಿನ ಸಂಪೂರ್ಣ ಲಾಕ್ಡೌನ್ ಹಾಗೂ ಉಳಿದ ಮೂರು ದಿನ ಸಾಮಾನ್ಯ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದೆ.
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಸಭೆಯ ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ. ಪರಿಸ್ಥಿತಿ ಕೈ ಮೀರುವ ಮೊದಲೇ ನಾವು ಎಚ್ಚರಿಕೆ ವಹಿಸಿದ್ದೇವೆ ಎಂದರು.
ಕೋವಿಡ್ ಹರಡುವಿಕೆಯ ಸರಪಳಿಯನ್ನು ತುಂಡರಿಸುವ ಸಲುವಾಗಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಠಿಣ ಕ್ರಮ ಜರುಗಿಸಲೇಬೇಕಿದೆ. ಹೀಗಾಗಿ ದಾವಣಗೆರೆ ಜಿಲ್ಲೆಯಲ್ಲಿ ವಾರದಲ್ಲಿ 4 ದಿನ ಸಂಪೂರ್ಣ ಲಾಕ್ಡೌನ್ ಹಾಗೂ 3 ದಿನ ಈಗಿರುವಂತೆ ಸಾಮಾನ್ಯ ಲಾಕ್ಡೌನ್ ಜಾರಿಗೊಳಿಸಬೇಕು ಎಂದು ಸಚಿವ ಭೈರತಿ ಬಸವರಾಜ್ ತಿಳಿಸಿದರು.
ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಈ ರೀತಿಯ ಕ್ರಮ ಕೈಗೊಂಡಿದ್ದು, ದಾವಣಗೆರೆ ಜಿಲ್ಲೆಯಲ್ಲಿಯೂ ಇದೇ ಮಾದರಿಯನ್ನು ಅನುಸರಿಸುವುದು ಸೂಕ್ತ ಎಂಬ ಅಭಿಪ್ರಾಯ ಬಂದಿದ್ದು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ಒತ್ತಡ ಇರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ತಡೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಕೋವಿಡ್ ಪ್ರಕರಣಗಳು ಹೆಚ್ಚು ಹೆಚ್ಚು ವರದಿಯಾಗುತ್ತಿದ್ದು, ವಿವಿಧ ತಾಲ್ಲೂಕುಗಳಿಂದಲೂ ಕೋವಿಡ್ ಸೋಂಕಿತರು ಚಿಕಿತ್ಸೆಗಾಗಿ ಚಿಗಟೇರಿ ಜಿಲ್ಲಾಸ್ಪತ್ರೆಗೆ ಬರುತ್ತಿದ್ದಾರೆ.
ಸೋಂಕಿತರಿಗೆ ಬೆಡ್ ಹಾಗೂ ಚಿಕಿತ್ಸೆಗೆ ಇನ್ನಷ್ಟು ಅನುಕೂಲ ಮಾಡಿಕೊಡಬೇಕಿದೆ. ಅಲ್ಲದೆ ಆಸ್ಪತ್ರೆಯಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ಕೋವಿಡ್ ಚಿಕಿತ್ಸೆಗೆ ಸಂಪೂರ್ಣ ತೊಡಗಿಸಿಕೊಳ್ಳಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಚಿಗಟೇರಿ ಜಿಲ್ಲಾಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಆಸ್ಪತ್ರೆಯನ್ನಾಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಭೆಯ ಗಮನಕ್ಕೆ ತಂದರು.
ಸಂಸದ ಜಿ.ಎಂ ಸಿದ್ದೇಶ್ವರ್ ಮಾತನಾಡಿ, ದೇಶದ 38 ಜಿಲ್ಲೆಗಳಿಗೆ ಕೇಂದ್ರ ಸರ್ಕಾರದಿಂದ 10 ಕೆ.ಎಲ್ ಸಾಮರ್ಥ್ಯದ ವೈದ್ಯಕೀಯ ಬಳಕೆಯ ಆಕ್ಸಿಜನ್ ಘಟಕ ಸ್ಥಾಪನೆಗೆ ಮಂಜೂರಾತಿ ನೀಡಿದ್ದು, ಈ ಪೈಕಿ ದಾವಣಗೆರೆ ಜಿಲ್ಲೆಗೂ ಮಂಜೂರು ಮಾಡಲಾಗಿದೆ. 86 ಲಕ್ಷ ರೂ. ವೆಚ್ಚದಲ್ಲಿ ಈ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಈ ಕುರಿತು ಆಕ್ಸಿಜನ್ ಘಟಕ ಪೂರೈಸುವ ಕಂಪನಿಯ ಅಧಿಕಾರಿಗಳನ್ನು ಈಗಾಗಲೇ ಸಂಪರ್ಕಿಸಿ ಮಾಹಿತಿ ಪಡೆಯಲಾಗಿದೆ ಎಂದರು.
ಇನ್ನು 30 ದಿನಗಳೊಳಗೆ ಈ ಆಕ್ಸಿಜನ್ ಘಟಕ ಬಳಕೆಗೆ ಲಭ್ಯವಾಗುವಂತೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಆದಷ್ಟು ಶೀಘ್ರ ಇದನ್ನು ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳು ಪ್ರಯತ್ನ ಕೈಗೊಳ್ಳಬೇಕು. ರಾಜ್ಯದ ಗಣಿಗಾರಿಕೆ ಮತ್ತು ಭೂವಿಜ್ಞಾನ ಸಚಿವರು ಕೂಡ ಆಕ್ಸಿಜನ್ ಟ್ಯಾಂಕರ್ ಒಂದನ್ನು ಜಿಲ್ಲೆಗೆ ಒಂದು ವಾರದೊಳಗಾಗಿ ನೀಡುವ ಭರವಸೆ ನೀಡಿದ್ದಾರೆ ಎಂದು ಸಭೆಯಲ್ಲಿ ತಿಳಿಸಿದರು.