ದಾವಣಗೆರೆ; ಮಾರ್ಕೆಟ್ನಲ್ಲಿ ಕೋವಿಡ್ ನಿಯಮ ಮರೆತ ಜನ!
ದಾವಣಗೆರೆ, ಏಪ್ರಿಲ್ 25; ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ. ಇನ್ನು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಮಾಸ್ಕ್ ಧರಿಸಿ ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೀಡಿದೆಯಾದರೂ ಯಾರೂ ಕ್ಯಾರೇ ಎನ್ನುತ್ತಿಲ್ಲ.
ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ತರಕಾರಿ ಸೇರಿದಂತೆ ಇತರೆ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. ಆದರೆ, ಖರೀದಿ ವೇಳೆ ಜನರು ಮಾತ್ರ ಕೋವಿಡ್ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ.
ದಾವಣಗೆರೆ ನಗರದ ಚಾಮರಾಜಪೇಟೆ ವೃತ್ತದ ಬಳಿಯಿರುವ ಮಾರ್ಕೆಟ್ ನಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದೇ ಉಲ್ಲಂಘಿಸಲಾಗುತ್ತಿದೆ. ತರಕಾರಿ ಸೇರಿದಂತೆ ಇತರೆ ವಸ್ತುಗಳನ್ನು ಖರೀದಿ ಮಾಡಲು ಜನರು ನಾ ಮುಂದು ತಾ ಮುಂದು ಅಂತಾ ಮುಗಿಬೀಳುತ್ತಿದ್ದು, ಎಲ್ಲಿ ನೋಡಿದರೂ ಜನವೋ ಜನ.
ಯಾವ ವ್ಯಾಪಾರಿಯಾಗಲೀ, ಜನಸಾಮಾನ್ಯರಾಗಲೀ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುತ್ತಿಲ್ಲ. ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ತರಕಾರಿ ಖರೀದಿಗೆ ಅವಕಾಶ ಕೊಟ್ಟಿರುವುದು ಒಳ್ಳೆಯದೇ. ಆದರೆ, ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದೇ ನಿರ್ಲಕ್ಷ್ಯ ವಹಿಸಿರುವುದು ಯಾಕೆ?.
ತರಕಾರಿ ಖರೀದಿಗೆ ಮಾರುಕಟ್ಟೆಯಲ್ಲಿ ಅವಕಾಶ ಕೊಡುವಾಗಲೇ ವ್ಯಾಪಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವ ಕಾರಣ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬಹುದಿತ್ತು. ಸ್ಯಾನಿಟೈಸರ್, ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ ಎಂಬುದಾಗಿ ಹೇಳಿದ್ದರೂ ಇದನ್ನು ಅನುಷ್ಠಾನಕ್ಕೆ ತರಬೇಕಿತ್ತು ಎಂದು ತರಕಾರಿ ಖರೀದಿಸಲು ಬಂದಿದ್ದ ಬಸಪ್ಪ ಹೇಳಿದ್ದಾರೆ.
ಬಹುತೇಕ ವ್ಯಾಪಾರಿಗಳು, ಜನರು ಅರ್ಧಂಬರ್ಧ ಮಾಸ್ಕ್ ಧರಿಸಿರುವುದು ಕಂಡು ಬಂದರೆ, ಮತ್ತೆ ಕೆಲವರಂತೂ ಮುಖಗವಸು ಧರಿಸಿರಲಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದಿರಲಿ, ಜನಜಂಗುಳಿಯೇ ನೆರೆದಿತ್ತು.
ಮಹಾನಗರ ಪಾಲಿಕೆಯ ಅಧಿಕಾರಿಗಳಾಗಲೀ, ಪೊಲೀಸರಾಗಲೀ, ಜಿಲ್ಲಾಡಳಿತವಾಗಲೀ ಇತ್ತ ಗಮನವನ್ನೇ ಹರಿಸಿಲ್ಲ. ಧ್ವನಿವರ್ಧಕದ ಮೂಲಕ ಜನರಲ್ಲಿ ಅರಿವು ಮೂಡಿಸಲು ಮುಂದಾಗಿಲ್ಲ. ಪೊಲೀಸ್ ಇಲಾಖೆಯ ಒಬ್ಬ ಸಿಬ್ಬಂದಿಯೂ ಇಲ್ಲ.
Recommended Video
ಪರಿಸ್ಥಿತಿ ಹೀಗಾದರೆ ನಗರ ಪ್ರದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುವ ಭೀತಿ ಎದುರಾಗಿರುವುದಂತೂ ಸತ್ಯ. ಜನರು ಜಿಲ್ಲಾಡಳಿತ ನಿರ್ಲಕ್ಷ್ಯದ ವಿರುದ್ಧವೂ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.