ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ ಫೈಟ್; ಕಾಂಗ್ರೆಸ್ ಹಾದಿ ಸುಗಮ
ದಾವಣಗೆರೆ, ನವೆಂಬರ್ 14; ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯ ಫೈಟ್ ಇವತ್ತಿಗೆ ತೆರೆಕಂಡಿದೆ. 208 ಅಭ್ಯರ್ಥಿಗಳ ಪೈಕಿ 45 ಅಭ್ಯರ್ಥಿಗಳು ಜಯಶಾಲಿಗಳಾಗಿದ್ದು, ಪಾಲಿಕೆ ಗದ್ದುಗೆ ಹಿಡಿಯಲು ಸೆಣಸಾಡುತ್ತಿದ್ದಾರೆ.
ಪಾಲಿಕೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿತ್ತು. ಕೊನೆಗೆ ಕಾಂಗ್ರೆಸ್ 22, ಬಿಜೆಪಿ 17, ಜೆಡಿಎಸ್ 1 ಹಾಗೂ 5 ಮಂದಿ ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಪಾಲಿಕೆ ಅಧಿಕಾರ ಹಿಡಿಯಲು 23 ಸ್ಥಾನಗಳು ಬೇಕಾಗಿದ್ದು, ಕಾಂಗ್ರೆಸ್ ಅಧಿಕಾರವನ್ನು ವಹಿಸಿಕೊಳ್ಳಲು ಎಲ್ಲಾ ಅವಕಾಶಗಳು ಇವೆ.
ಬಂಡಾಯ ಅಭ್ಯರ್ಥಿಗೆ ಗೆಲುವು
ಬಂಡಾಯ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ 45ನೇ ವಾರ್ಡ್ ನ ಅಭ್ಯರ್ಥಿ ಉದಯ್ ಕುಮಾರ್ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಗೆ ಬೆಂಬಲ ನೀಡಿದರೆ ಅಧಿಕಾರ ಹಿಡಿಯಲು ಕಾಂಗ್ರೆಸ್ ಗೆ ಸುಲಭದ ದಾರಿಯಾಗಲಿದೆ. ಕೇವಲ 17 ಸ್ಥಾನಗಳನ್ನು ಗೆಲ್ಲಿಸಿಕೊಂಡ ಬಿಜೆಪಿ ವಿರೋಧ ಪಕ್ಷವಾಗಲಿದೆ. ಘಟಾನುಘಟಿಗಳೂ ಕಣಕ್ಕಿಳಿದಿದ್ದು, ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪನವರ ಬಂಟ ದಿನೇಶ್ ಕೆ ಶೆಟ್ಟಿ 17ನೇ ವಾರ್ಡ್ ನಿಂದ ಸೋಲು ಅನುಭವಿಸಿದ್ದು, ಬಿಜೆಪಿಯ ಅಜಯ್ ಕುಮಾರ್ ಗೆಲುವಿನ ನಗೆ ಬೀರಿದ್ದಾರೆ.
14 ನಗರ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ
ಪತಿ ಪತ್ನಿ ಇಬ್ಬರಿಗೂ ಒಲಿದ ಗೆಲುವು
ಬಿಜೆಪಿಯ ಮಾಜಿ ಸಚಿವ ಹಾಗೂ ಶಾಸಕ ಎಸ್ ಎ ರವೀಂದ್ರನಾಥ್ ಪುತ್ರಿ ವೀಣಾ ನಂಜಪ್ಪ 40ನೇ ವಾರ್ಡ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಂತಿದ್ದ ಪತಿ-ಪತ್ನಿ ಇಬ್ಬರೂ ಗೆಲುವು ಸಾಧಿಸಿದ್ದು, ಪತಿ 28ನೇ ವಾರ್ಡ್ ಜೆ.ಎನ್.ಶ್ರೀನಿವಾಸ್ ಜಯ ಗಳಿಸಿದ್ದರೆ, ಪತ್ನಿ ಶ್ವೇತಾ ಶ್ರೀನಿವಾಸ್ 37ನೇ ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದಾರೆ.
ಅತಿ ಚಿಕ್ಕ ವಯಸ್ಸಿನ ಪಾಲಿಕೆ ಸದಸ್ಯ ರಾಕೇಶ್
ಬಿಜೆಪಿ ಜಿಲ್ಲಾಧ್ಯಕ್ಷರ ಪುತ್ರ 26 ವರ್ಷದ ರಾಕೇಶ್ ಜಾಧವ್ ಜಯಗಳಿಸಿದ್ದು, 10ನೇ ವಾರ್ಡ್ ನಲ್ಲಿ ಮಾಜಿ ಮೇಯರ್ ಅನಿತಾಬಾಯಿ ಪತಿ ಮಾಲತೇಶ್ ರಾವ್ ಜಾಧವ್ ವಿರುದ್ಧ ಗೆಲುವು ಸಾಧಿಸಿ ಅತಿ ಚಿಕ್ಕ ವಯಸ್ಸಿನ ಪಾಲಿಕೆ ಸದಸ್ಯರಾಗಿದ್ದಾರೆ.
ಕನಕಪುರ, ಮಾಗಡಿ ಸ್ಥಳೀಯ ಸಂಸ್ಥೆ ಚುನಾವಣೆ; ಖಾತೆ ತೆರೆದ ಕಮಲ
ಮೇಯರ್ ಪಟ್ಟಕ್ಕಾಗಿ ಕಸರತ್ತು
ಇನ್ನು ಮೇಯರ್ ಪಟ್ಟಕ್ಕಾಗಿ ಎರಡು ಪಕ್ಷಗಳು ಕಸರತ್ತು ನಡೆಸುತ್ತಿವೆ. ಅಲ್ಲದೆ 17ನೇ ವಾರ್ಡ್ ನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಜಿ. ರವಿ ಎನ್ನುವರು ಕೇವಲ ಎರಡು ಮತಗಳನ್ನು ಪಡೆದ ಅಭ್ಯರ್ಥಿಯಾಗಿದ್ದು, ಪಕ್ಷೇತರ ಅಭ್ಯರ್ಥಿಗಳಲ್ಲಿ ಕೇವಲ ಎರಡು ಮತಗಳು ಪಡೆದು ಇಡೀ ಪಾಲಿಕೆ ಚುನಾವಣೆಯಲ್ಲಿ ಅತಿ ಕಡಿಮೆ ಮತ ಪಡೆದ ಅಭ್ಯರ್ಥಿಯಾಗಿದ್ದಾರೆ.