ದಾವಣಗೆರೆ: ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿನಯ್ ಕುಮಾರ್, ರಘು ದೀಕ್ಷಿತ್ ಬೆಂಬಲ
ದಾವಣಗೆರೆ, ಜುಲೈ 15: ಶಿಷ್ಯ ವೇತನಕ್ಕಾಗಿ 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ದಾವಣಗೆರೆಯ ಜೆಜೆಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ಕರ್ನಾಟಕ ರಣಜಿ ತಂಡದ ಮಾಜಿ ನಾಯಕ ವಿನಯ್ ಕುಮಾರ್ ಹಾಗೂ ಗಾಯಕ ರಘು ದೀಕ್ಷಿತ್ ಬೆಂಬಲ ಸೂಚಿಸಿದ್ದಾರೆ.
Recommended Video
'ಜೆ.ಜೆ.ಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ 16 ತಿಂಗಳಿನಿಂದ ಶಿಷ್ಯ ವೇತನ ದೊರೆಕಿಲ್ಲ ಎಂಬ ಮಾಹಿತಿಯನ್ನು ಮಾಧ್ಯಮಗಳಿಂದ ತಿಳಿದುಕೊಂಡಿದ್ದೇನೆ. ನಾನು ಒಬ್ಬ ಭಾರತೀಯ ಪ್ರಜೆಯಾಗಿ ಸಂಬಂಧಪಟ್ಟವರಿಗೆ ಮನವಿ ಮಾಡಿಕೊಳ್ಳುತ್ತೇನೆ. ವೈದ್ಯರು, ಪೊಲೀಸರು ಹಾಗೂ ನರ್ಸ್ಗಳೂ ಸೇರಿ ಅನೇಕರು ಕೋವಿಡ್ ಸಂದರ್ಭಗಳಲ್ಲಿ ಮುಂಚೂಣಿಯಲ್ಲಿ ನಿಂತು ಸೈನಿಕರಂತೆ ಹೋರಾಟ ಮಾಡುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮೆಲ್ಲರ ಜವಾಬ್ದಾರಿ, ಆಡಳಿತ ಮಂಡಳಿ ಅವರ ಸಮಸ್ಯೆಯನ್ನು ಬಗೆಹರಿಸಬೇಕು' ಎಂದು ಇನ್ಸ್ಟಾಗ್ರಾಂನಲ್ಲಿ ಆರ್.ವಿನಯ್ ಕುಮಾರ್ ಮನವಿ ಮಾಡಿದ್ದಾರೆ.

ಶಿಷ್ಯ ವೇತನ ವಂಚಿತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿರುವ ಗಾಯಕ ರಘು ದೀಕ್ಷಿತ್, 'ಸರ್ಕಾರ ಮತ್ತು ಆಡಳಿತ ಮಂಡಳಿಯ ನಡುವಿನ ಟೆನ್ನಿಸ್ ಪಂದ್ಯದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಬೀದಿಗೆ ಬಿದ್ದಿದ್ದಾರೆ. 15 ದಿನಗಳಿಂದ ಹೋರಾಟ ಮಾಡುತ್ತಿರುವ ವಿದ್ಯಾರ್ಥಿಗಳು, ಶಿಷ್ಯವೇತನ ನೀಡದೇ ಇದ್ದರೂ ಮುಂಚೂಣಿಯಲ್ಲಿ ಇದ್ದುಕೊಂಡು ಕೆಲಸ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಹೃದಯವಂತಿಕೆ ಇರಲಿ' ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದಾರೆ.

'ಎವೈಎಫ್ಐ ಸಂಘಟನೆ ಸೋಮವಾರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದೆ. ಒಪಿಡಿ ಹಾಗೂ ತುರ್ತುಸೇವೆ ಬಹಿಷ್ಕರಿಸಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಅವು ಸ್ಥಗಿತಗೊಂಡಿಲ್ಲ. ಆಡಳಿತ ಮಂಡಳಿಯಿಂದ ಆಯ್ಕೆಯಾದ ವಿದ್ಯಾರ್ಥಿಗಳು ಅವುಗಳನ್ನು ನಡೆಸಿದ್ದಾರೆ. ಪ್ರತಿಭಟನೆ ನಡೆಸಿದ್ದರೂ ಕೋವಿಡ್ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇವೆ' ಎಂದು ಡಾ. ಹರೀಶ್ ತಿಳಿಸಿದರು.











Click it and Unblock the Notifications