ವಿಡಿಯೋ: ಹಿಂದಿ ಶಿಕ್ಷಕನಿಗೆ ಕುಚೇಷ್ಟೆ ಮಾಡಿ ವಿಕೃತಿ ಮೆರೆದ ಹೈಸ್ಕೂಲ್ ವಿದ್ಯಾರ್ಥಿಗಳು!
ದಾವಣಗೆರೆ, ಡಿಸೆಂಬರ್ 10: ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರಾ... ಎಂಬ ಮಾತು ಈಗಲೂ ಚಾಲ್ತಿಯಲ್ಲಿದೆ. ಸಮಾಜದಲ್ಲಿ ಶಿಕ್ಷಕರಿಗೆ ಕೊಡುವ ಗೌರವ ಅಷ್ಟು ಮಹತ್ವದ್ದು. ಆದರೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರಿನ ಹೈಸ್ಕೂಲ್ ವಿದ್ಯಾರ್ಥಿಗಳು ಹಿಂದಿ ಶಿಕ್ಷಕರಿಗೆ ಪಾಠ ಮಾಡುವಾಗ ಕುಚೇಷ್ಟೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಕಾಶ್ ಬೋಗಾರ್ಗೆ ಶಾಲೆಯ ಐದಾರು ವಿದ್ಯಾರ್ಥಿಗಳು ಕುಚೇಷ್ಟೆ ಮೂಲಕ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲ ಜೊತೆಗೆ ಶಿಕ್ಷಕರ ತಲೆ ಮೇಲೆ ಬಕೆಟ್ ಇಟ್ಟು ವಿಕೃತಿ ಪ್ರದರ್ಶಿಸಿ ಸಂತೋಷಪಟ್ಟಿದ್ದಾರೆ.
ಅಷ್ಟೇ ಅಲ್ಲದೆ ಶಿಕ್ಷಕರಿಗೆ ಅವಮಾನ ಮಾಡುವ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಮಾತ್ರವಲ್ಲ, ಈ ವಿಡಿಯೋ ಮಾಡಿ ಖುಷಿಪಡುತ್ತಾ ಮನಸ್ಸಿಗೆ ಬಂದಂತ ರೀತಿಯಲ್ಲಿ ಮಾತನಾಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಮಾಡಿದ್ದ ವಿಡಿಯೋ ಗುರುವಾರ ವೈರಲ್ ಆಗಿದ್ದು, ವಿದ್ಯಾರ್ಥಿಗಳ ನಡೆಡಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಸೌಮ್ಯ ಸ್ವಭಾವದ ಶಿಕ್ಷಕರು
ಪ್ರಕಾಶ್ ಬೋಗಾರ್ ಅತ್ಯಂತ ಸರಳ, ಸೌಮ್ಯ ಸ್ವಭಾವದ ಶಿಕ್ಷಕರು. ಮಾತ್ರವಲ್ಲ, ಹೃದಯ ಸಂಬಂಧಿ ಕಾಯಿಲೆಯಿಂದಲೂ ಬಳಲುತ್ತಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು, ಏನಾದರೂ ದೂರು ಕೊಟ್ಟರೆ ಭವಿಷ್ಯ ಹಾಳಾಗುತ್ತದೆ ಎಂದುಕೊಂಡು ಸುಮ್ಮನಾಗಿದ್ದಾರೆ. ಇನ್ನು ನಲ್ಲೂರು ಸೇರಿದಂತೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇಲ್ಲಿಗೆ ಓದಲು ಬರುತ್ತಾರೆ. ಮೊದಲಿನಿಂದಲೂ ಶಿಕ್ಷಕರ ಬಗ್ಗೆ ಒಳ್ಳೆಯ ಅಭಿಪ್ರಾಯ ಇತ್ತು. ಇಲ್ಲಿ ಓದಿದ ಎಷ್ಟೋ ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿದ್ದಾರೆ. ಈಗ ವಿದ್ಯಾರ್ಥಿಗಳು ಮಾಡಿರುವ ಕುಚೇಷ್ಟೆಯಿಂದ ಕಾಲೇಜಿಗೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಲೇಜಿಗೆ ಶಾಸಕ ಮಾಡಾಳ್ ಭೇಟಿ
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ನಲ್ಲೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಶಾಲೆಯ ಶಿಕ್ಷಕರು, ಪ್ರಾಂಶುಪಾಲರು, ಗ್ರಾಮಸ್ಥರ ಜೊತೆ ಚರ್ಚೆ ನಡೆಸಿದ್ದಾರೆ. ಶಿಕ್ಷಕ ಪ್ರಕಾಶ್ ಬೋಗಾರ್ಗೆ ಅವಮಾನ ಮಾಡಿರುವ ವಿದ್ಯಾರ್ಥಿಗಳು ಯಾರು? ಎಲ್ಲಿಯವರು? ಹೆಸರೇನು? ಎಂಬ ಕುರಿತು ವಿಚಾರಿಸಿದ್ದಾರೆ.
ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ
"ಗ್ರಾಮಸ್ಥರ ಜೊತೆ ಈ ವಿದ್ಯಾರ್ಥಿಗಳು ಬೇರೆ ಯಾವುದಾದರೂ ಈ ರೀತಿಯ ಕುಚೇಷ್ಟೆ ಮಾಡಿದ್ದಾರಾ ಎಂಬ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡೋಣ ಎಂದು ಹೇಳಿದ್ದಾರೆ. ಈ ವೇಳೆ ಈ ಘಟನೆಯಿಂದ ನಲ್ಲೂರು ಹಾಗೂ ಕಾಲೇಜಿಗೆ ಕೆಟ್ಟ ಹೆಸರು ಬಂದಂತಾಗಿದೆ. ತಪ್ಪು ಮಾಡಿರುವವರಿಗೆ ಶಿಕ್ಷೆಯಾಗಬೇಕು. ಮುಂಬರುವ ದಿನಗಳಲ್ಲಿ ಇಂಥ ಪ್ರಕರಣ ಮರು ಕಳಿಸದಂತೆ ಎಚ್ಚರ ವಹಿಸಬೇಕು," ಎಂದು ಸೂಚನೆ ನೀಡಿದ್ದಾರೆ.
ವರದಿ ನೀಡುವಂತೆ ಡಿಡಿಪಿಐಗೆ ಸೂಚನೆ
ಇನ್ನು ದಾವಣಗೆರೆಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಮಹಾಂತೇಶ್. ಆರ್. ಬೀಳಗಿ, "ನಲ್ಲೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಶಿಕ್ಷಕರಿಗೆ ಕುಚೇಷ್ಟೆ, ಅವಮಾನ ಮಾಡಿರುವ ವಿಡಿಯೋ ವೈರಲ್ ಆಗಿರುವುದು ಗಮನಕ್ಕೆ ಬಂದಿದೆ. ಯಾರೇ ತಪ್ಪು ಮಾಡಿದ್ದರೂ ಕ್ರಮ ತೆಗೆದುಕೊಳ್ಳುತ್ತೇವೆ. ಶಿಕ್ಷಕರ ಕಡೆಯಿಂದ ತಪ್ಪಿದ್ದರೂ ಸಹ ಕ್ರಮ ಆಗುತ್ತದೆ. ವಿದ್ಯಾರ್ಥಿಗಳು ಈ ರೀತಿಯಾದ ಅವಮಾನ ಮಾಡಿರುವುದಕ್ಕೆ ಕಾರಣವೇನು ಎಂಬ ಬಗ್ಗೆ ವರದಿ ನೀಡುವಂತೆ ದಾವಣಗೆರೆ ಡಿಡಿಪಿಐಗೆ ಸೂಚನೆ ನೀಡಲಾಗುವುದು," ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ವಿದ್ಯಾರ್ಥಿಗಳು ತಮಾಷೆಗೆ ಮಾಡಿದ್ದಾರೋ ಅಥವಾ ಉದ್ದೇಶಪೂರ್ವಕವಾಗಿ ಮಾಡಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ. ತಾಲೂಕು ಶಿಕ್ಷಣಾಧಿಕಾರಿ, ಡಿಡಿಪಿಐ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಾಲೇಜಿಗೆ ಭೇಟಿ ನೀಡಿ ಆಗಿರುವ ಘಟನೆ ಬಗ್ಗೆ ಸಮಗ್ರ ಮಾಹಿತಿ ಪಡೆಯಲಿದ್ದಾರೆ ಎಂದು ನಲ್ಲೂರು ಗ್ರಾಮಸ್ಥರು ತಿಳಿಸಿದ್ದಾರೆ.