ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ರೇಣುಕಾಚಾರ್ಯ ಹೇಳಿದ್ದೇನು?
ದಾವಣಗೆರೆ, ಮೇ 27: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಇದೆಲ್ಲಾ ಊಹಾಪೋಹ ಅಷ್ಟೇ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
ಹೊನ್ನಾಳಿ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಕೇಂದ್ರ ವರಿಷ್ಠರು, ರಾಜ್ಯಾಧ್ಯಕ್ಷರು, ಬಿ.ಎಲ್ ಸಂತೋಷ್ ಈ ಬಗ್ಗೆ ಹೇಳಿದ್ದಾರೆ. ಹಾಗಾಗಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲಾಗುತ್ತಿದೆ ಎಂಬುದು ಶುದ್ಧ ಸುಳ್ಳು ಎಂದಿದ್ದಾರೆ.
ಯಾರೋ ಒಬ್ಬರು ಲಾಬಿ ನಡೆಸಿದರೆ ಸಿಎಂ ಬದಲಾವಣೆ ಆಗದು. ಚನ್ನಪಟ್ಟಣದಲ್ಲಿ ಸೋತರೂ ಯಡಿಯೂರಪ್ಪ ಮಂತ್ರಿಯನ್ನಾಗಿ ಮಾಡಿದ್ದಾರೆ. ಜನರ ಸಂಕಷ್ಟ ಆಲಿಸುವುದು ಬಿಟ್ಟು ರಾಜಕಾರಣ ಮಾಡುವುದು ಸರಿಯಲ್ಲ. ಜನರೇ ತಿರಸ್ಕರಿಸಿದರೂ ಅನಾಯಾಸವಾಗಿ ಮಂತ್ರಿಗಿರಿ ಸಿಕ್ಕಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುವುದು ಬೇಡ. ಜನರ ಹಿತ ಮುಖ್ಯ. ಅದನ್ನು ಅರ್ಥಮಾಡಿಕೊಂಡು ನಡೆಯಬೇಕು ಎಂದು ಹೇಳುವ ಮೂಲಕ ಸಚಿವ ಸಿ.ಪಿ ಯೋಗೇಶ್ವರ್ಗೆ ಟಾಂಗ್ ನೀಡಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜೊತೆ ನಾನೇ ಮಾತನಾಡಿದ್ದೇನೆ. ರಾಜ್ಯ ರಾಜಕಾರಣದ ಬಗ್ಗೆ ಹೆಚ್ಚೇನೂ ಆಸಕ್ತಿ ಹೊಂದಿಲ್ಲ ಎಂದು ಅವರೇ ಹೇಳಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಸೇತುವೆಯಾಗಿ ಜೋಷಿ ಅವರು ಕೆಲಸ ಮಾಡುತ್ತಿದ್ದಾರೆ ಎಂದರು.
Recommended Video
ಹಾಗಾಗಿ ವಿನಾಕಾರಣ ಸುದ್ದಿ ಹಬ್ಬಿಸಲಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸಿಎಂ ಹಗಲಿರುಳು ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗಲ್ಲ. ಸುಳ್ಳು ಸುದ್ದಿಗೆ ಕಿವಿಗೊಡಬೇಡಿ ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು.