ಕೊರೊನಾ ವೈರಸ್ ನಿಂದ ದಾವಣಗೆರೆಯಲ್ಲಿ ಸಾವಿನ ಸಂಖ್ಯೆ ರಾಜ್ಯದ ಸರಾಸರಿಗಿಂತ ಹೆಚ್ಚಾಗಿದೆ: ಡಿಸಿ
ದಾವಣಗೆರೆ, ಜುಲೈ 18: ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಂದ ಸಂಭವಿಸುತ್ತಿರುವ ಸಾವಿನ ಪ್ರಮಾಣ ರಾಜ್ಯದ ಸರಾಸರಿಗಿಂತ ಹೆಚ್ಚಿದ್ದು, ಈ ಪ್ರಮಾಣವನ್ನು ಕಡಿಮೆಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗೆಗೆ ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಜಿಲ್ಲಾಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಹಾಗೂ ತಜ್ಞ ವೈದ್ಯರನ್ನು ಉದ್ದೇಶಿಸಿ ಮಾತಾನಾಡಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು, ""ನಮ್ಮ ಜಿಲ್ಲೆಯ ವೈದ್ಯರು ಹಾಗೂ ಅಧಿಕಾರಿಗಳು ಕೋವಿಡ್ ಹಿನ್ನೆಲೆಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ನನಗೆ ತೃಪ್ತಿ ಇದೆ. ಆದರೆ ಎಲ್ಲೋ ಒಂದು ಕಡೆ ಸಾವಿನ ಪ್ರಮಾಣ ನಮ್ಮ ಕಾರ್ಯದಕ್ಷತೆಯನ್ನು ಪ್ರಶ್ನಿಸುವಂತಿದೆ'' ಎಂದರು.
ದಾವಣಗೆರೆ: ಗಣಿತ 100ಕ್ಕೆ 100: ಸಂಭ್ರಮಿಸಲು ಅವಳೇ ಇಲ್ಲ!
ನಮ್ಮಲ್ಲಿ ಸಾಕಷ್ಟು ತಜ್ಞ ವೈದ್ಯರು ಇದ್ದಾಗಿಯೂ ನಾವು ಎಲ್ಲಿ ಎಡವುತ್ತಿದ್ದೇವೆ, ಹಾಗೂ ಎಲ್ಲಿ ಸರಿಪಡಿಸಿಕೊಳ್ಳಬೇಕು, ಮುಂದಿನ ದಿನಗಳಲ್ಲಿ ಸಾವಿನ ಪ್ರಮಾಣ ತಗ್ಗಿಸಲು ಅನುಸರಿಸಬೇಕಾದ ಮಾರ್ಗೋಪಾಯದ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ . ಎಷ್ಟೇ ಕೇಸ್ ಬರಲಿ ನಿಭಾಯಿಸಲು ಜಿಲ್ಲಾಡಳಿತ ತಂಡ ಸಿದ್ದವಾಗಿದೆ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ನಮ್ಮ ಸರ್ವೇಕ್ಷಣ ತಂಡ ಲ್ಯಾಬ್ ಪರೀಕ್ಷಾ ಪ್ರಮಾಣ ಹೆಚ್ಚಿಸಬೇಕು ಹಾಗೂ ತಾಲ್ಲೂಕುವಾರು ನೀಡಿರುವ ಮೊಬೈಲ್ ಕೋವಿಡ್ ಟೆಸ್ಟಿಂಗ್ ವಾಹನಗಳನ್ನು ತೀವ್ರ ಅನಾರೋಗ್ಯ ವ್ಯಕ್ತಿಗಳು ಇರುವ ಮನೆಯ ಬಳಿಯೇ ಸಾಗಿ ಪರೀಕ್ಷೆಗೆ ಒಳಪಡಿಸುವ ಮೂಲಕ ಆದಷ್ಟು ಬೇಗ ಸೋಂಕಿಗೆ ಸಿಲುಕಿರುವವರನ್ನು ಪತ್ತೆ ಹಚ್ಚಬೇಕಾಗಿದೆ ಎಂದು ಸೂಚಿಸಿದರು.
ಕೇರಳ ರಾಜ್ಯದ ಮಾದರಿಯ ಸಾಮೂಹಿಕ ಸಹಭಾಗಿತ್ವದಲ್ಲಿ ಎಲ್ಲರೂ ಮುಂದೆ ಬಂದು ಕೆಲಸ ಮಾಡಬೇಕು. ನಮ್ಮ ಜನಪ್ರತಿನಿಧಿಗಳು, ಮುಖಂಡರೂ, ಈ ಕಾರ್ಯದಲ್ಲಿ ಕೈಜೋಡಿಸಬೇಕು.
ಹೊನ್ನಾಳಿ ಕ್ಷೇತ್ರದಲ್ಲಿ ಕೊರೊನಾ ಸೋಂಕಿನ ಬಗ್ಗೆ ಎಚ್ಚರಿಕೆ ನೀಡಿದ ಶಾಸಕ ಎಂಪಿಆರ್
ಈಗಾಗಲೇ ರಚಿಸಲಾಗಿರುವ ವಾರ್ಡ್ ಸಮಿತಿಗಳು ಹೆಚ್ಚು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು, ಮಹಾನಗರ ಪಾಲಿಕೆ ಆಯುಕ್ತರು ಈ ಸಮಿತಿಗಳ ತರಬೇತಿ ಕಾರ್ಯನಿರ್ವಹಣೆಯನ್ನು ಯಶಸ್ವಿಯಾಗಿ ನೋಡಿಕೊಳ್ಳಬೇಕು. ಹಾಗೂ ಮುಂದಿನ ದಿನಗಳಲ್ಲಿ ಎಷ್ಟೇ ಕೇಸ್ ಗಳು ಬಂದರೂ ನಿಭಾಯಿಸಲು ಸಿದ್ದವಾಗಿರಬೇಕು. ಮತ್ತು ಆದಷ್ಟು ಸೋಂಕಿತರು ವೆಂಟಿಲೇಟರ್ ಗೆ ಹೋಗುವುದನ್ನು ಕಡಿಮೆ ಮಾಡಲು ತಪಾಸಾಣೆ ತೀವ್ರವಾಗಬೇಕೆಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿ.ಪಂ ಸಿಇಒ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಡಿಹೆಚ್ಒ ರಾಘವೇಂದ್ರಸ್ವಾಮಿ, ಡಾ.ಸುರೇಂದ್ರ, ಡಾ.ಮಹಾಂತೇಶ್, ಡಾ. ರವಿ, ಡಾ.ಪ್ರಸಾದ್ ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಡಾ.ನಾಗರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.