ಮಗನ ಬಳಿಕ ತಂದೆಗೂ ಶಾಕ್ ನೀಡುತ್ತಾ ಬಿಜೆಪಿ: ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ ಬಗ್ಗೆ ಸದ್ಯದಲ್ಲೇ ತೀರ್ಮಾನ
ದಾವಣಗೆರೆ, ಏಪ್ರಿಲ್ 22: ಲಂಚ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಉಚ್ಚಾಟನೆ ಮಾಡುವ ಕುರಿತಂತೆ ರಾಜ್ಯದ ನಾಯಕರು ಇನ್ನು ಒಂದೆರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷ ಹೇಳಿದರೂ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಡಾಳ್ ಮಲ್ಲಿಕಾರ್ಜುನ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷೇತರನಾಗಿ ಕಣಕ್ಕಿಳಿದರುವ ಮಲ್ಲಿಕಾರ್ಜುನ್ ಪರ ಮಾಡಾಳ್ ವಿರೂಪಾಕ್ಷಪ್ಪ ಪ್ರಚಾರ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

ಮಾಡಾಳ್ ಮಲ್ಲಿಕಾರ್ಜುನ್ ಅವರಿಗೆ ಪಕ್ಷೇತರರಾಗಿ ಕಣಕ್ಕಿಳಿಯದಂತೆ ಸೂಚನೆ ನೀಡಲಾಗಿತ್ತು. ಚನ್ನಗಿರಿಯಲ್ಲಿ ಶಿವಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಹರಿಹರದಲ್ಲಿ ನಾನು ಸಹ ಆಕಾಂಕ್ಷಿಯಾಗಿದ್ದೆ. ಇದೇ ರೀತಿಯಲ್ಲಿ ಹಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳಿದ್ದರು. ಪಕ್ಷದ ವರಿಷ್ಠರು ತೆಗೆದುಕೊಂಡ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಹಾಗಾಗಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
ಮಾಯಕೊಂಡ ಕ್ಷೇತ್ರದಲ್ಲಿ ಬಿಜೆಪಿಯಿಂದ ಹತ್ತಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದರು. ಮಾನದಂಡ ಹಾಗೂ ಸರ್ವೇ ವರದಿ ಆಧರಿಸಿ ಬಸವರಾಜ್ ನಾಯ್ಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ಸಿಗದಿದ್ದರೆ ಅಸಮಾಧಾನ ಆಗುವುದು ಸಹಜ. ಆದರೆ, ಪಕ್ಷವೇ ಮುಖ್ಯ. ಯಾವ ನಿರ್ಧಾರ ತೆಗೆದುಕೊಂಡರೂ ತಲೆಬಾಗಲೇಬೇಕು. ಆರ್. ಎಲ್. ಶಿವಪ್ರಕಾಶ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಿಚಾರ ಗೊತ್ತಿದೆ. ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ಎರಡು ದಿನಗಳ ಕಾಲ ಕಾಲಾವಕಾಶ ಇದೆ. ನಾವೆಲ್ಲರೂ ಚರ್ಚಿಸಿ ನಾಮಪತ್ರ ವಾಪಸ್ ಪಡೆಯುವಂತೆ ಮಾಡುತ್ತೇವೆ. ಶಿವಪ್ರಕಾಶ್ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂಬ ವಿಶ್ವಾಸ ಇದೆ ವೀರೇಶ್ ಹನಗವಾಡಿ ಹೇಳಿದರು.
ಒಂದು ವೇಳೆ ನಾಮಪತ್ರ ವಾಪಸ್ ಪಡೆಯದೇ ಮಾಯಕೊಂಡ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಶಿವಪ್ರಕಾಶ್ ಕಣಕ್ಕಿಳಿದರೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಮಾತು ಮುಂದುವರಿಸಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಎಂದುಕೊಂಡಿರಲಿಲ್ಲ. ಬಿಜೆಪಿ ಪಕ್ಷವು ಯಾವಾಗಲೂ ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ. ಕಳೆದ 35 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಯಾವ ಲಿಂಗಾಯತ ನಾಯಕರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ? ಬಿಜೆಪಿ ಪಕ್ಷವು ಬಿ. ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಮಾಡಿದೆ. ಕಾಂಗ್ರೆಸ್ನವರ ಕುತಂತ್ರಕ್ಕೆ ಲಿಂಗಾಯತ ಸಮುದಾಯ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ಹೇಳಿದರು.












Click it and Unblock the Notifications