ಶಾಸಕ ಶಾಮನೂರು ಪುತ್ರ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ಬೀದಿಗಿಳಿದು ಹೋರಾಟ
ದಾವಣಗೆರೆ, ಜನವರಿ 19: ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿರುವ ಶಾಸಕ ಶಾಮನೂರು ಶಿವಶಂಕರಪ್ಪನವರ ಮಗ ಎಸ್. ಎಸ್. ಗಣೇಶ್ ಒಡೆತನದ ದಾವಣಗೆರೆ ಸಕ್ಕರೆ ಕಂಪನಿ ಪ್ರತಿ ದಿನ ಹೊರ ಸೂಸುವ ಬೂದಿ ಸಂಪೂರ್ಣವಾಗಿ ನಿಯಂತ್ರಿಸಬೇಕು ಎಂದು ಆಗ್ರಹಿಸಿ ಕುಕ್ಕುವಾಡ ಗ್ರಾಮದಲ್ಲಿ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಸುತ್ತಮುತ್ತಲಿನ ಗ್ರಾಮಗಳ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ತ್ಯಾಜ್ಯ ನೀರನ್ನು ಹಳ್ಳಕ್ಕೆ ಬಿಡಬಾರದು. ಕಾರ್ಖಾನೆ ಆವರಣದಲ್ಲಿ ಇದನ್ನು ಸಂಗ್ರಹಿಸಿ, ಸಂಸ್ಕರಿಸಬೇಕು. ಕಬ್ಬು ಕಟಾವು ಮಾಡಲು ನಿಗದಿತ ಸಮಯದಲ್ಲಿ ಪರ್ಮಿಟ್ ಕೊಡುತ್ತಿಲ್ಲ. ಇದರಿಂದ ಕಬ್ಬಿನ ತೂಕ ಕಡಿಮೆಯಾಗಿ, ರೈತನಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ 10 ರಿಂದ 11 ತಿಂಗಳೊಳಗೆ ಪರ್ಮಿಟ್ ಕೊಡಬೇಕು. ಕಬ್ಬು ಕಟಾವು ಮಾಡಿ ಕಾರ್ಖಾನೆಗೆ ಸಾಗಿಸುವ ಕಾರ್ಮಿಕರ ಕೂಲಿ ವೆಚ್ಚ ಹೆಚ್ಚಳವಾಗಿದೆ. ಈ ವೆಚ್ಚ ಕಬ್ಬಿನ ಬೆಲೆಯ ಅರ್ಧದಷ್ಟು ಆಗಿದೆ. ಇದರಿಂದ ಕಬ್ಬು ಬೆಳೆದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. ಆದ್ದರಿಂದ ಯಂತ್ರಗಳ ಮೂಲಕ ಕಬ್ಬು ಕಟಾವು ಮಾಡಿ, ಕಾರ್ಖಾನೆಗೆ ಸಾಗಿಸುವ ಜವಾಬ್ದಾರಿಯನ್ನು ಕಾರ್ಖಾನೆಯವರೆ ವಹಿಸಿಕೊಳ್ಳಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು.
ಒಂದು ಟನ್ ಕಬ್ಬಿಗೆ ರೂಪಾಯಿ 3100 ಕೊಡಬೇಕು ಎಂದು ರಾಜ್ಯ ಸರ್ಕಾರ ನಿಗದಿಪಡಿಸಿದೆ. ಆದರೆ ಈ ಕಾರ್ಖಾನೆಯಲ್ಲಿ ಟನ್ ಒಂದಕ್ಕೆ 1825 ರೂ ಮಾತ್ರ ಕೊಡಲಾಗುತ್ತಿದೆ. ಇದರಿಂದ ರೈತರಿಗೆ ಬಹಳ ಅನ್ಯಾಯವಾಗುತ್ತಿದೆ. ಈ ಹಂಗಾಮಿನಲ್ಲಿ ಸರ್ಕಾರ ನಿಗದಿಪಡಿಸಿರುವ ಬೆಲೆ 3100 ತಕ್ಷಣದಿಂದ ಕೊಡಬೇಕು. ಈಗಾಗಲೇ ಕಬ್ಬು ಸರಬರಾಜು ಮಾಡಿರುವ ರೈತರಿಗೂ ಉಳಿದ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಎಸ್. ಗಣೇಶ್ ಒಡೆತನದ ದಾವಣಗೆರೆ ಸಕ್ಕರೆ ಕಂಪನಿಯಿಂದ ಜನರಿಗೆ ತೊಂದರೆ
ಕಬ್ಬು ಸರಬರಾಜು ಮಾಡಿ, 2 ತಿಂಗಳಾದರೂ ಅಂತಿಮ ಬಿಲ್ ಪಾವತಿಸಿಲ್ಲ. ಕಬ್ಬು ಸರಬರಾಜು ಮಾಡಿ, 14 ದಿನಗಳೊಳಗೆ ಬಿಲ್ ಪಾವತಿಸಬೇಕು. ಕಾರ್ಖಾನೆಯಲ್ಲಿ ಷೇರು ಹೊಂದಿರುವ ರೈತರಿಗೆ ಲಾಭಾಂಶ ಕೊಡಬೇಕು ಮತ್ತು ಷೇರು ವರ್ಗಾವಣೆ ನಿಯಮಗಳನ್ನು ಸಡಿಲಗೊಳಿಸಿ, ಕಾರ್ಖಾನೆ ಆವರಣದ ಕಚೇರಿಯಲ್ಲಿ ಈ ವರ್ಗಾವಣೆ ಪ್ರಕ್ರಿಯೆ ನಡೆಯಬೇಕು. ಕಾರ್ಖಾನೆಯಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆ ಅನ್ವಯ ವೇತನವನ್ನು ಸಮಯಕ್ಕೆ ಸರಿಯಾಗಿ ಕೊಡಬೇಕು ಎಂದು ರೈತರು ಒತ್ತಾಯಿಸಿದರು.

ಊಟಕ್ಕೂ ಸೇರುವ ಫ್ಯಾಕ್ಟರಿ ಬೂದಿ: ಜನರಲ್ಲಿ ಆತಂಕ
ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಜನರು ಬದುಕುವುದು ಕಷ್ಟಕರವಾಗಿದೆ. ಪ್ರತಿ ನಿತ್ಯ ಈ ಶುಗರ್ ಫ್ಯಾಕ್ಟರಿಯ ಚಿಮಣಿಯಿಂದ ಬೂದಿ ಹೊರಸೂಸುತ್ತಿದೆ. ಇದರಿಂದ ಹಂಚಿನ ಮನೆಗಳ ಮೇಲೆ ಈ ಬೂದಿ ಬಿದ್ದು ಶೇಖರವಾಗಿ ಗಾಳಿಯಲ್ಲಿ ಎಲ್ಲಾ ಕಡೆ ಪ್ರಸರಿಸುತ್ತದೆ. ಊಟ ಮಾಡುವಾಗ ತಟ್ಟೆಯಲ್ಲಿ ಬೀಳುವುದರಿಂದ ಇದನ್ನೇ ಊಟ ಮಾಡಿದ ಜನರು ರೋಗ ರುಜೀನಗಳಿಂದ ಬಳಲುತ್ತಿದ್ದಾರೆ. ಮನೆ ಅಂಗಳದಲ್ಲಿ ಒಣ ಹಾಕಿದ ಬಟ್ಟೆಗಳ ಮೇಲೆ ಈ ಬೂದಿ ಬೀಳುವುದರಿಂದ ಬಟ್ಟೆ ಬಿಳಿ ಬಣ್ಣದಿಂದ ಬೂದು ಬಣ್ಣಕ್ಕೆ ತಿರುಗಿವೆ. ಬಯಲಿನಲ್ಲಿ ಬೆಳೆದಿರುವ ಹುಲ್ಲು, ಗಿಡ ಗಂಟೆಗಳ ಮೇಲೆ ಈ ಬೂದಿ ಬೀಳುತ್ತದೆ. ಈ ಹುಲ್ಲನ್ನೇ ದನ ಕರುಗಳು, ಕುರಿ ಮೇಕೆಗಳು ಮೇಯುವುದರಿಂದ ಇವುಗಳು ಸಹ ಸರಿಯಾದ ಬೆಳವಣಿಗೆ ಇಲ್ಲದೆ ರೋಗಗ್ರಸ್ತವಾಗಿವೆ. ಇದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಮಾಡುತ್ತಿರುವ ರೈತರು ನಷ್ಟದ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಎಸ್. ಗಣೇಶರವರ ಒಡೆತನದ ದಾವಣಗೆರೆ ಸಕ್ಕರೆ ಕಂಪನಿ ವಿರುದ್ಧ ಆರೋಪಿಸಿದರು.

ಹಳ್ಳ ಸೇರುವ ಸಕ್ಕರೆ ಕಾರ್ಖಾನೆಯ ವಿಷಯುಕ್ತ ತ್ಯಾಜ್ಯ
ನಿತ್ಯ ಜನರು ಸೇರಿದಂತೆ ಪಶುಗಳು ಹೊಗೆಯಿಂದ ಬರುವ ಬೂದಿ ತಿಂದು ಬದುಕಬೇಕಾಗಿದೆ. ಒಂದು ದಿನವೂ ಬಿಳಿ ಅಥವಾ ಸ್ವಚ್ಛ ಬಟ್ಟೆ ಧರಿಸುವಂತಿಲ್ಲ. ಈ ಭಾಗದ ರೈತರು ಬೆಳೆದಿರುವ ಭತ್ತ ಪೂರ್ಣ ಕಪ್ಪು ಆಗುತ್ತದೆ. ಇದರಿಂದ ಮಾರುಕಟ್ಟೆಯಲ್ಲಿ ಭತ್ತದ ಬೆಲೆ ಕಡಿಮೆಯಾಗುತ್ತದೆ. ಈ ಸಕ್ಕರೆ ಕಾರ್ಖಾನೆಯಿಂದ ಹೊರಸೂಸುವ ವಿಷಯುಕ್ತ ತ್ಯಾಜ್ಯ ನೀರನ್ನು ಸಹ ಹಳ್ಳಕ್ಕೆ ಬಿಡಲಾಗುತ್ತಿದೆ. ಈ ನೀರಿನಲ್ಲಿ ಆಸಿಡ್ ಇದ್ದು, ಬಹಳ ಅಪಾಯಕಾರಿ ಆಗಿದೆ. ಹಳ್ಳದಲ್ಲಿರುವ ಮೀನು ಮತ್ತು ಇತರೆ ಜಲಚರ ಜೀವಿಗಳು ಸತ್ತಿವೆ. ಇದೇ ನೀರನ್ನು ಸುತ್ತ ಮುತ್ತಲ ಗ್ರಾಮಗಳ ರೈತರು ಈ ನೀರನ್ನು ಪಂಪ್ ಸೆಟ್ ಗಳ ಮೂಲಕಜಮೀನುಗಳಿಗೆ ನೀರು ಪೂರೈಕೆ ಮಾಡುತ್ತಾರೆ. ಇದರಿಂದ ಎಲ್ಲಾ ರೈತರ ಜಮೀನುಗಳು ವಿಷಯುಕ್ತವಾಗಿವೆ. ರೈತರ ಹೊಲಗಳೆಲ್ಲಾ ಬೂದಿಮಾಯವಾಗಿ ಮತ್ತು ವಿಷಯುಕ್ತವಾಗಿ ಬೆಳೆಗಳೆಲ್ಲಾ ನಾಶವಾಗುತ್ತಿವೆ. ದನ ಕರುಗಳು ಕುರಿ ಮೇಕೆಗಳು ಇದೆ ನೀರನ್ನೇ ಕುಡಿದು ಬದುಕಬೇಕಾಗಿದೆ ಎಂದು ತಿಳಿಸಿದರು.

ಆರ್ಥಿಕ ಸಂಕಷ್ಟದಲ್ಲಿ ರೈತರು
ಈ ಹಳ್ಳಿಗಳ ಜಮೀನು ಕೆಂಗಲು ಜಮೀನು. ಆದರೆ ಈ ಜಮೀನುಗಳ ಮಣ್ಣು ಕೆಂಪಾಗಿ ಕಾಣುತ್ತಿಲ್ಲ. ಎರೆ ಮಣ್ಣಿನ ರೀತಿ ಕಪ್ಪಾಗಿ ಕಾಣಿಸುತ್ತದೆ. ಜೀವಾಣುಗಳು ನಾಶವಾಗಿದ್ದು, ಯಾರ ಜಮೀನಿನಲ್ಲಿಯೂ ಎರೆ ಹುಳು ಕಾಣಿಸುವುದಿಲ್ಲ. ಈ ಜಮೀನಿನಲ್ಲಿ ಬೆಳೆ ಇಳುವರಿ ಬಹಳ ಕಡಿಮೆ ಆಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಳ್ಳಿಗಳ ಜನರ ಬದುಕು ಬೂದಿಮಯವಾಗಿ ಬರ್ಬಾದಾಗಿದೆ. ವಿಷಯುಕ್ತ ಬೂದಿ ಮಿಶ್ರಿತ ಗಾಳಿ ಮತ್ತು ವಿಷ ಮಿಶ್ರಿತ ನೀರಿನಿಂದ ಜನರ ಪಶುಗಳ ಉಸಿರಾಟ ಕಷ್ಟಕರವಾಗಿದೆ ಎಂದರು.
ದಾವಣಗೆರೆ ತಹಶೀಲ್ದಾರ್ ಅಶ್ವಥ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಮನವಿ ಪತ್ರ ಸ್ವೀಕರಿಸಿದರು. ರೈತರ ಈ ಸಮಸ್ಯೆಗಳನ್ನು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದು, ರೈತರ ಮತ್ತು ಸಕ್ಕರೆ ಕಂಪನಿ ಮಾಲೀಕರ ಸಭೆ ಕರೆದು ಸಮಸ್ಯೆಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಕೊಳೇನಹಳ್ಳಿ ಬಿ. ಎಂ. ಸತೀಶ್, ಹದಡಿ ಹಾಲಪ್ಪ, ದೂಡಾ ಮಾಜಿ ಅಧ್ಯಕ್ಷರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್, ಅಣಬೇರು ಜೀವನಮೂರ್ತಿ, ಬಲ್ಲೂರು ಬಸವರಾಜಪ್ಪ, ಕುಕ್ಕುವಾಡದ ರುದ್ರೇಗೌಡ, ಸುತ್ತೂರು ನಿಂಗಜ್ಜ, ಕೊಳೇನಹಳ್ಳಿ ಅಮಟಿ ನಾಗರಾಜ, ಶರಣಪ್ಪ, ಬೇತೂರು ಬಸವರಾಜು, ಜಡಗನಹಳ್ಳಿ ವಿರೂಪಾಕ್ಷಪ್ಪ, ಕನಗೊಂಡನಹಳ್ಳಿ ತಿಪ್ಪೇಸ್ವಾಮಿ, ಮಲ್ಲಿಕಾರ್ಜುನ, ಕೆ.ಎಸ್. ಶಿವಣ್ಣ, ಶಿರನಳ್ಳಿ ನಾಗರಾಜ್, ದ್ಯಾಮಣ್ಣ, ನಾಗರಸನಹಳ್ಳಿ ಬಾಬಜ್ಜಿ ಮುಂತಾದವರು ಭಾಗಿಯಾಗಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications