ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ.25ರಂದು ರಾಜ್ಯಾದ್ಯಂತ ರೈತರ ಪ್ರತಿಭಟನೆ
ದಾವಣಗೆರೆ, ಸೆಪ್ಟೆಂಬರ್ 11: ಮಳೆ ಇಲ್ಲದೇ ರೈತರು ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ಪ್ರದೇಶಗಳ ಘೋಷಿಸಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಾಗ್ದಾನದಂತೆ ಏಳು ಗಂಟೆ ವಿದ್ಯುತ್ ಪೂರೈಸಬೇಕು. ಸಾಲ ವಸೂಲಾತಿ ನಿಲ್ಲಿಸಬೇಕು.
ಕೃಷಿಗೆ ಮಾರಕವಾದ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಸೆ. 25 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ವಿಷಯ ತಿಳಿಸಿದ ಸಂಘದ ರಾಜ್ಯಾಧ್ಯಕ್ಷ ಹೆಚ್. ಆರ್. ಬಸವರಾಜಪ್ಪ, ರೈತರು ಧರಣಿ ನಡೆಸಿ ಆಯಾ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು. ಸರ್ಕಾರವು ರೈತ ಮುಖಂಡರನ್ನು ಆಹ್ವಾನಿಸಿ ಸಭೆ ನಡೆಸಿ ಸಂಕಷ್ಟ ಆಲಿಸದಿದ್ದರೆ ಎರಡನೇ ಹಂತದ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ಸಂಕಷ್ಟ ಎದುರಾಗಿದೆ. ಕರಾವಳಿ, ಮಲೆನಾಡು, ಅರೆ ಮಲೇನಾಡು, ಬಯಲುಸೀಮೆಯಲ್ಲಿಯೂ ಮಳೆಯಾಗಿಲ್ಲ. ರೈತರು ಬೆಳೆ ಬಿತ್ತಿದ ಮೇಲೆ ಮಳೆ ಸುರಿದಿಲ್ಲ. ಯಾವ ರೈತರಿಗೂ ಬೆಳೆ ಸಿಗುವ ನಂಬಿಕೆ ಇಲ್ಲ. ಸಂಪೂರ್ಣವಾಗಿ ಹಾಳಾಗಿದೆ. ಕೂಡಲೇ ಬರಗಾಲ ಘೋಷಿಸಿದರೆ ಕೇಂದ್ರ ಸರ್ಕಾರವು ಅಲ್ಪ ಸಹಾಯವನ್ನು ಮಾಡುತ್ತದೆ.ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಬೇಕು. ಒಂದು ಎಕರೆಗೆ 25 ಸಾವಿರ ರೂಪಾಯಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುವುದು. ರೈತರ ಹಿತ ಕಾಯಲು ಬದ್ಧ ಎಂದು ಹೇಳಿತ್ತು. ಈಗ ನಾಲ್ಕು ಗಂಟೆಯೂ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ನಿರಂತರವಾಗಿ ವಿದ್ಯುಚ್ಛಕ್ತಿ ನೀಡಿದರೆ ರೈತರಿಗೆ ಅನುಕೂಲವಾಗುತ್ತದೆ. ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಈ ಸಂಬಂಧ ಈಗಾಗಲೇ ಲೋಕಸಭೆ, ರಾಜ್ಯ ಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ. ತೆಲಂಗಾಣ, ತಮಿಳುನಾಡು ಹಾಗೂ ಕೇರಳ ರಾಜ್ಯಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿ ತೀರ್ಮಾನ ತೆಗೆದುಕೊಂಡಿವೆ. ರಾಜ್ಯದಲ್ಲಿಯೂ ಈ ನಿರ್ಧಾರ ಮಾಡಬೇಕು ಎಂದು ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯ ಅವರು ರೈತರಿಂದ ಬಲವಂತವಾಗಿ ಸಾಲ ವಸೂಲಾತಿ ಮಾಡಬಾರದು ಎಂದು ಬ್ಯಾಂಕ್ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆದ್ರೆ, ಬ್ಯಾಂಕ್ ನವರು ಸಾಲ ವಸೂಲಾತಿಗೆ ರೈತರಿಗೆ ನೊಟೀಸ್ ನೀಡಿದ್ದಾರೆ. ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಒಂದು ವೇಳೆ ರೈತರನ್ನು ಜೈಲಿಗೆ ಕಳುಹಿಸಿದರೆ ಅಲ್ಲಿಂದಲೇ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ರೈತರ ಆಸ್ತಿ, ಮನೆ ಸೇರಿದಂತೆ ಯಾವುದೂ ಹರಾಜು ಮಾಡಬಾರದು. ಜಪ್ತಿ ಮಾಡಬಾರದು. ಒಂದು ವೇಳೆ ಕ್ರಮಕ್ಕೆ ಮುಂದಾದರೆ ರೈತ ಸಂಘ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ದಾವಣಗೆರೆಯಲ್ಲಿ ರಾಜ್ಯ ಸಮಿತಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ 18 ಜಿಲ್ಲೆಗಳ ಪದಾಧಿಕಾರಿಗಳ ಆಹ್ವಾನ ಮಾಡಲಾಗಿತ್ತಾದರೂ, 8 ಜಿಲ್ಲೆಗಳ ಮುಖಂಡರು ಗೈರಾಗಿದ್ದರು. ಸಭೆಯಲ್ಲಿ ಸರ್ಕಾರ ರೈತ ಹಿತ ಕಾಯದಿದ್ದರೆ ಹೋರಾಟ ನಡೆಸುವ ಕುರಿತಂತೆ ಚರ್ಚೆ ನಡೆಸಲಾಯಿತು. ಬರಗಾಲದ ಇಂಥ ಸನ್ನಿವೇಶದಲ್ಲಿ ಸರ್ಕಾರ ಮೀನಾಮೇಷ ಎಣಿಸದೇ ಆದಷ್ಟು ಬೇಗ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಹೋರಾಟದ ಬಿಸಿ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.












Click it and Unblock the Notifications