ದಾವಣಗೆರೆ ಜಿಲ್ಲೆಯಲ್ಲಿ ಬಿತ್ತನೆಗೆ ಸಜ್ಜಾದ ರೈತರು; ಸಚಿವರಿಂದ ಕೃಷಿ ಇಲಾಖೆ ಅಧಿಕಾರಿಗೆ ಖಡಕ್ ಸೂಚನೆ
ದಾವಣಗೆರೆ, ಮೇ, 25: ಈಗಾಗಲೇ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಮತ್ತೊಂದೆಡೆ ಕೆಲವೇ ದಿನಗಳಲ್ಲಿ ಮುಂಗಾರು ಎಂಟ್ರಿ ಕೊಡಲಿದ್ದು, ಇದಕ್ಕೂ ಮುನ್ನ ಈಗಾಗಲೇ ಬಿತ್ತನೆಗೆ ಭರ್ಜರಿ ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರು ದಾವಣಗೆರೆ ಜಿಲ್ಲಾಡಳಿತಕ್ಕೆ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ರೈತರು ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಾಗೆಯೇ ದಾವಣಗೆರೆ ಜಿಲ್ಲೆಯಲ್ಲಿನ ರೈತರು ಸಹ ಸಿದ್ಧತೆ ನಡೆಸಿದ್ದಾರೆ. ಆದ್ದರಿಂದ ಕೃಷಿ ಇಲಾಖೆಯು ಬಿತ್ತನೆ, ಬೀಜ, ಗೊಬ್ಬರಕ್ಕೆ ಯಾವುದೇ ಕೊರತೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಜಿಲ್ಲಾಡಳಿತಕ್ಕೆ ಸೂಚಿನೆ ನೀಡಿದರು.

ಜಿಲ್ಲಾಡಳಿತ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆಗಿದೆ. ರೈತರು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಬಿತ್ತನೆ ಬೀಜ, ಗೊಬ್ಬರಕ್ಕೆ ಯಾವುದೇ ಸಮಸ್ಯೆ ಆಗದಂತೆ ನಿಗಾವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ಪ್ರಾಣ ಹಾನಿ, ಆಸ್ತಿ ಹಾನಿ ಆದರೆ ಸೂಕ್ತ ಕ್ರಮ ಕೈಗೊಂಡು ಸರ್ಕಾರಕ್ಕೆ ಸಲ್ಲಿಸಬೇಕು. ಮಳೆಯಿಂದಾಗಿ ಆಗುವ ಅಪಾಯ, ಅನಾಹುತಗಳ ಬಗ್ಗೆ ಜಾಗೃತರಾಗಿರಬೇಕು. ಗುಡುಗು-ಸಿಡಿಲಿನಿಂದ ಉಂಟಾಗುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಗುಡುಗು-ಸಿಡಿಲಿನ ವೇಳೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಮಳೆ, ಗಾಳಿಯಿಂದ ಮರಗಳು, ವಿದ್ಯುತ್ ಕಂಬಗಳು ಬಿದ್ದರೆ, ತಕ್ಷಣ ತೆರವುಗೊಳಿಸಬೇಕು. ವಿದ್ಯುತ್ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಿ ಎಂದು ಹೇಳಿದರು.
ಅಲ್ಲದೆ, ಮಳೆ, ಕೊಳಚೆ ನೀರು ಕುಡಿಯುವ ನೀರಿನ ಪೈಪ್ಲೈನ್ಗಳಿಗೆ ಸೇರದಂತೆ ಕ್ರಮವಹಿಸಬೇಕು. ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು ಸಮುದಾಯ ಆರೋಗ್ಯ ಕೇಂದ್ರಗಳ ಮೂಲಕ ಜನರಿಗೆ ಸೂಕ್ತ ಮುನ್ನೆಚ್ಚರಿಕೆ ಮೂಡಿಸಬೇಕು ಎಂದರು.
ಜಿಲ್ಲಾಡಳಿತ, ತಾಲೂಕು ಆಡಳಿತ, ಮಹಾ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯತಿಗಳ ತಗ್ಗು ಪ್ರದೇಶಕ್ಕೆ ನೀರು ನುಗ್ಗದಂತೆ ಕ್ರಮ ಕೈಗೊಳ್ಳಬೇಕು. ದಾವಣಗೆರೆ, ಹರಿಹರ, ಹೊನ್ನಾಳಿ, ಚನ್ನಗಿರಿ ಸೇರಿದಂತೆ ಇತರ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಗೆ ಭತ್ತ ಬೆಳೆಗಳಿಗೆ ತೊಂದರೆ ಆಗುತ್ತಿದೆ. ರೈತರ ನೆರವಿಗೆ ಕೃಷಿ ಇಲಾಖೆಗೆ ಮುಂದಾಗಬೇಕೆಂದು ಖಡಕ್ ಸೂಚನೆ ನೀಡಿದರು.
ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದೆ. ಇದರ ಬೆನ್ನಲ್ಲೇ ರೈತರು ಬಿತ್ತನೆಗೆ ಮುಂದಾಗಿದ್ದಾರೆ. ಆದ್ದರಿಂದ ಬಿತ್ತನೆ ಬೀಜ ಕೊರತೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ದಾವಣಗೆರೆ ಅಷ್ಟೇ ಅಲ್ಲದೆ, ಬೇರೆ ಜಿಲ್ಲೆಗಳಲ್ಲೂ ಸಹ ಉತ್ತಮ ಮಳೆಯಾಗಿದ್ದು, ರೈತರು ಬಿತ್ತನೆ ಕಾರ್ಯಗಳಿಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.












Click it and Unblock the Notifications