ಉಪ ಚುನಾವಣೆ ಪ್ರಚಾರಕ್ಕೆ ಬರುವುದಾಗಿ ಬಿಎಸ್ವೈ ನನಗೆ ಹೇಳಿದ್ದಾರೆ: ಸಿಎಂ ಬೊಮ್ಮಾಯಿ
ದಾವಣಗೆರೆ, ಅಕ್ಟೋಬರ್ 16: "ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪನವರು ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯ ಪ್ರಚಾರಕ್ಕೆ ಬರುವ ದಿನ ನಿಗದಿಯಾಗಿದೆ. ನಾನೇ ಪ್ರಚಾರಕ್ಕೆ ಖುದ್ದಾಗಿ ಆಹ್ವಾನಿಸಿದ್ದೇನೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
"ಯಡಿಯೂರಪ್ಪನವರು ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಯಲ್ಲಿ ತಲಾ ಎರಡು ದಿನಗಳ ಕಾಲ ಬಿಜೆಪಿ ಪರವಾಗಿ ಪ್ರಚಾರ ನಡೆಸಲಿದ್ದಾರೆ," ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, "ರಾಜ್ಯದಲ್ಲಿ ನಡೆಯುವ ಎರಡು ಉಪ ಚುನಾವಣೆಯ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಂದೇ ಬರುತ್ತಾರೆ. ಈ ಎರಡೂ ಕ್ಷೇತ್ರಗಳಲ್ಲಿ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ನಾವೇ ಗೆಲ್ಲುತ್ತೇವೆ," ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ನನ್ನ ಆತ್ಮೀಯ ಸ್ನೇಹಿತರು. ಅವರಿಗೆ ಯಾವ್ಯಾವಾಗೋ ಏನೇನೋ ಜ್ಞಾನೋದಯ ಆಗುತ್ತದೆ. ಯಾಕೆ ನನ್ನ ಬಗ್ಗೆ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಯಾಕೆ ಆ ರೀತಿ ಮಾತನಾಡಿದ್ದೀಯಾ ಎಂದು ನಾನೇ ಕೇಳುತ್ತೇನೆ ಎಂಬುದಾಗಿ," ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
"ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವಿಟಿ ಕಡಿಮೆಯಾಗುತ್ತಿದೆ. ಗಡಿಭಾಗದಲ್ಲಿ ಶೇಕಡಾ 1ರೊಳಗೆ ಕೊರೊನಾ ಪಾಸಿಟಿವಿಟಿ ದರ ಇದೆ. ಆದರೂ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಶಾಲೆ ಆರಂಭ, ಗಡಿಯಲ್ಲಿ ಓಡಾಟಕ್ಕೆ ಅನುಮತಿ, ನೈಟ್ ಕರ್ಫ್ಯೂ ಸಡಿಲಿಕೆ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆಯೂ ತಜ್ಞರ ಜೊತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಸಂಬಂಧ ನಾಳೆ ಸಭೆ ಕರೆದಿದ್ದು, ಸಭೆಯಲ್ಲಿ ಚರ್ಚಿಸಿದ ಬಳಿಕ ತೀರ್ಮಾನ ಪ್ರಕಟಿಸಲಾಗುವುದು. ತಜ್ಞರ ಅಭಿಪ್ರಾಯ ಸಂಗ್ರಹಿಸಿಯೇ ಕ್ರಮ ತೆಗೆದುಕೊಳ್ಳುತ್ತೇವೆ," ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅದ್ಧೂರಿ ಸ್ವಾಗತ
ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ 'ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ' ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಮುಖ್ಯಮಂತ್ರಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ವೇಳೆ ಕಂದಾಯ ಸಚಿವ ಆರ್. ಅಶೋಕ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್, ಶಾಸಕ ಎಂ.ಪಿ. ರೇಣುಕಾಚಾರ್ಯ, ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್. ಆರ್. ಬೀಳಗಿ ಮತ್ತಿತರರು ಹಾಜರಿದ್ದರು.
ಕಂದಾಯ ಸಚಿವರು ಈಗಾಗಲೇ ಎರಡು ಕಡೆ ಗ್ರಾಮ ವಾಸ್ತವ್ಯ ಮಾಡಿದ್ದು, ಕೋವಿಡ್ ನಂತರ ಇದೇ ಮೊದಲ ಬಾರಿಗೆ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಶನಿವಾರ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಸಚಿವರನ್ನು ವಿಶೇಷ ಅಲಂಕೃತ ಚಕ್ಕಡಿಗಳಲ್ಲಿ ಸ್ಥಳೀಯ ಜಾನಪದ ಕಲಾವಿದರು ಹಾಗೂ ವಿವಿಧ ಕಲಾತಂಡಗಳೊಂದಿಗೆ ಅದ್ಧೂರಿ ಪೂರ್ಣಕುಂಭ ಸ್ವಾಗತ ನೀಡಿ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.

ಕಂದಾಯ ಸಚಿವ ಆರ್. ಅಶೋಕ್ರನ್ನು ಬೆಳಗ್ಗೆ ಮಲ್ಲಿಕಾರ್ಜುನ ದೇವಾಲಯದಿಂದ ವಿಶೇಷ ಅಲಂಕೃತ ಎತ್ತಿನ ಬಂಡಿಯ ಮೂಲಕ ಕಾರ್ಯಕ್ರಮಕ್ಕೆ ಕರೆತರಲಾಯಿತು. ಸ್ವತಃ ಶಾಸಕ ರೇಣುಕಾಚಾರ್ಯನವರೇ ಎತ್ತಿನ ಬಂಡಿ ಓಡಿಸಿದ್ದು ವಿಶೇಷವಾಗಿತ್ತು.
ಸುರಹೊನ್ನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಸಕ್ತ ಸರ್ಕಾರ ರೈತರು, ಕಾರ್ಮಿಕರು, ಮಹಿಳೆಯರಿಗೆ ಹಾಕಿಕೊಂಡಿರುವ ಕಾರ್ಯಕ್ರಮಗಳು ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿವಿಧ ಇಲಾಖೆಗಳಿಂದ ಏರ್ಪಡಿಸಿರುವ ಮಾಹಿತಿ ಮಳಿಗೆಗಳನ್ನು ಉದ್ಘಾಟಿಸಿದರು. 27 ಗಣರಾಜ್ಯ ಘಟಕಗಳ ಆಟೋಗಳನ್ನು ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಿದರು. ವಿವಿಧ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ಸಾಂಕೇತಿಕವಾಗಿ ವಿತರಣೆ ಮಾಡಿದರು.












Click it and Unblock the Notifications