"ದಾವಣಗೆರೆ ಗ್ಲಾಸ್ ಹೌಸ್ ನಲ್ಲಿ 5 ಕೋಟಿ ವೆಚ್ಚದ ಫೌಂಟೇನ್ ನಿರ್ಮಾಣ"
ದಾವಣಗೆರೆ, ಮೇ 27; ಕುಂದುವಾಡ ಕೆರೆಯಲ್ಲಿ ಸೇತುವೆ ನಿರ್ಮಾಣ ಕಾರ್ಯವು ಅತಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ. ಅದರೊಂದಿಗೆ ಸಮೀಪದಲ್ಲೇ ಇರುವ ಗ್ಲಾಸ್ ಹೌಸ್ ನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 5 ಕೋಟಿ ರೂಪಾಯಿಯ ವೆಚ್ಚದಲ್ಲಿ ಫೌಂಟೇನ್ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಸಂಪೂರ್ಣಗೊಂಡಿದ್ದು ಕಾಮಗಾರಿ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.
ಇಂದು ಬೆಳಗ್ಗೆ ನಗರದ ಕುಂದುವಾಡ ಕೆರೆ ಹಾಗೂ ಗ್ಲಾಸ್ ಹೌಸ್ ಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. "ನಗರದ ಕುಂದುವಾಡ ಕೆರೆ ಅಭಿವೃದ್ಧಿ ಹಾಗೂ ಅಲ್ಲಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಕುಂದುವಾಡ ಕೆರೆಗೆ ಬರುವ ನಾಗರಿಕರಿಗೆ ಮಳೆ ಬಂದರೆ ತೊಂದರೆಯಾಗುತ್ತಿತ್ತು. ಅನಾಹುತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸೇತುವೆ ಮಾಡಲಾಗುತ್ತಿದೆ. ಆದರೆ ಲಾಕ್ ಡೌನ್ ನಿಂದಾಗಿ ಸೇತುವೆ ನಿರ್ಮಾಣದ ಕಾಮಗಾರಿ ಸ್ಥಗಿತಗೊಂಡಿತ್ತು. ಇದೀಗ ಕಾಮಗಾರಿ ಪ್ರಗತಿಯ ಹಂತದಲ್ಲಿದೆ. ಶೀಘ್ರದಲ್ಲಿ ಸೇತುವೆ ಕಾರ್ಯ ಪೂರೈಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಹೇಳಿದರು.
ದಾವಣಗೆರೆಯ ಸುಂದರ ಗ್ಲಾಸ್ ಹೌಸ್ ವಿಶೇಷತೆಗಳು
"ಗ್ಲಾಸ್ ಹೌಸ್ ಅತ್ಯಾಕರ್ಷಕವಾಗಿ ಕಾಣಲು ಸ್ಮಾರ್ಟ್ ಸಿಟಿ ಅನುದಾನದಿಂದ ಸುಮಾರು 5 ಕೋಟಿ ವೆಚ್ಚದಲ್ಲಿ ಫೌಂಟೇನ್ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ. ದಾವಣಗೆರೆ ಸುತ್ತಮುತ್ತ ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಳ್ಳಲಾಗಿದೆ. ಖಾತೆ ಮತ್ತು ತೆರಿಗೆ ಪಾವತಿಯಾಗುತ್ತಿಲ್ಲ. ಕಳೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಿಡಿಎದಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಯಾರು ಅಕ್ರಮವಾಗಿ ಮನೆ ನಿರ್ಮಾಣ ಮಾಡಿಕೊಂಡು ವಾಸ ಮಾಡುತ್ತಿದ್ದಾರೋ ಅವರಿಗೆ ದಂಡ ವಿಧಿಸಿ ನಂತರ ಸಕ್ರಮ ಮಾಡಿಕೊಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅದೇ ಮಾದರಿಯಲ್ಲಿ 10 ಮಹಾನಗರ ಪಾಲಿಕೆ, ಪುರಸಭೆ, ನಗರಸಭೆಯಲ್ಲಿ ಮಾಡಲು ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಮುಂದಿನ ಸಚಿವ ಸಂಪುಟದ ಮುಂದೆ ಈ ವಿಷಯವಾಗಿ ಚರ್ಚಿಸಲಾಗುವುದು" ಎಂದರು.
ಸಾರ್ವಜನಿಕರಿಗೆ ದಾವಣಗೆರೆಯ ಗ್ಲಾಸ್ ಹೌಸ್ ಬಂದ್
"ಪೌರ ಕಾರ್ಮಿಕರು ನಗರವನ್ನು ಸ್ವಚ್ಛವಾಗಿಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ವಸತಿ ಇಲ್ಲ ಆದ್ದರಿಂದ ಸರ್ಕಾರದ ವತಿಯಿಂದ ಪೌರ ಕಾರ್ಮಿಕರ ಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಮಾಡಲಾಗುವುದು. ದಾವಣಗೆರೆಯಲ್ಲಿಯೂ ಪೌರ ಕಾರ್ಮಿಕರಿಗೆ ಮನೆ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪೌರ ಕಾರ್ಮಿಕರಿಗೆ ಮನೆಗಳನ್ನು ಹಸ್ತಾಂತರ ಮಾಡಲಾಗುವುದು. ರಾಜ್ಯದಲ್ಲಿ ಮತ್ತೆ 4 ಸ್ಮಾರ್ಟ್ ಸಿಟಿ ನಿರ್ಮಾಣ ಮಾಡಲು ಅನುಮತಿಗೆ ಮನವಿ ಮಾಡಲಾಗಿದೆ, ಈ ಬಗ್ಗೆ ಪತ್ರ ಬರೆದಿದ್ದೇನೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಸಚಿವರನ್ನು ಭೇಟಿಯಾಗಿ ಈ ಕುರಿತು ಚರ್ಚೆ ಮಾಡಲಾಗುವುದು" ಎಂದು ತಿಳಿಸಿದರು.