ಗೆದ್ದ ದಿನವೇ ಚುನಾವಣಾ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ!
Recommended Video
ದಾವಣಗೆರೆ, ಮೇ 24 : 'ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ' ಎಂದು ದಾವಣಗೆರೆ ಕ್ಷೇತ್ರದ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಘೋಷಣೆ ಮಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಗೆದ್ದ ದಿನವೇ ಜಿ.ಎಂ.ಸಿದ್ದೇಶ್ವರ (66) ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ದಾವಣಗೆರೆ ಕ್ಷೇತ್ರದಿಂದ ಮೂರು ಬಾರಿ ಗೆಲುವು ಸಾಧಿಸಿದ್ದ ಅವರು, 2019ರ ಚುನಾವಣೆಯಲ್ಲಿಯೂ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ.
'ನಾನು ಚುನಾವಣೆಗೂ ಮುನ್ನ ಇದನ್ನು ಹೇಳಿದ್ದೆ. ಗೆದ್ದ ಮೇಲೆಯೂ ಹೇಳುತ್ತಿದ್ದೇನೆ. ಇನ್ನು ಮುಂದೆ ಯಾವ ಚುನಾವಣೆಗೂ ನಾನು ಸ್ಪರ್ಧೆ ಮಾಡುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿಯೂ ಕಣಕ್ಕಿಳಿಯುವುದಿಲ್ಲ' ಎಂದು ಜಿ.ಎಂ.ಸಿದ್ದೇಶ್ವರ ಸ್ಪಷ್ಟಪಡಿಸಿದರು.
2019ರ ಚುನಾವಣೆಯಲ್ಲಿ ಜಿ.ಎಂ.ಸಿದ್ದೇಶ್ವರ ಅವರು 6,52,996 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಎದುರಾಳಿಯಾಗಿದ್ದ ಕಾಂಗ್ರೆಸ್-ಜೆಡಿಎಸ್ನ ಎಚ್.ಬಿ.ಮಂಜಪ್ಪ ಅವರು 4,83,294 ಮತಗಳನ್ನು ಪಡೆದು 1,69,702 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.

ಸಕ್ರಿಯ ರಾಜಕಾರಣದಲ್ಲಿರುವೆ
66 ವರ್ಷದ ಜಿ.ಎಂ.ಸಿದ್ದೇಶ್ವರ ಅವರು, 'ಸಕ್ರಿಯ ರಾಜಕಾರಣದಲ್ಲಿರುವೆ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು ಎಂಬ ಆಸೆ ಇದೆ. ಅದಕ್ಕಾಗಿ ಪ್ರಯತ್ನ ಮಾಡುತ್ತೇನೆ' ಎಂದು ಹೇಳಿದ್ದಾರೆ.

ಯುವಕರನ್ನು ನಿಲ್ಲಿಸಿ ಗೆಲ್ಲಿಸುವೆ
'ಚುನಾವಣಾ ರಾಜಕೀಯಕ್ಕೆ ಮಾತ್ರ ಗುಡ್ ಬೈ ಹೇಳುತ್ತಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಗೆ ಯುವಕರನ್ನು ನಿಲ್ಲಿಸಿ ಗೆಲ್ಲಿಸುತ್ತೇನೆ. ಐದು ವರ್ಷ ಸಂಸದನಾಗಿ ಜಿಲ್ಲೆಯ ಜ್ವಲಂತ ಸಮಸ್ಯೆ ಬಗೆಹರಿಸಲು ಕೆಲಸ ಮಾಡುತ್ತೇನೆ' ಎಂದು ಜಿ.ಎಂ.ಸಿದ್ದೇಶ್ವರ ಹೇಳಿದ್ದಾರೆ.

ಇತಿಹಾಸ ನಿರ್ಮಿಸಿದ್ದೇನೆ
'ಈ ನೆಲದ ಇತಿಹಾಸದ ಪ್ರಕಾರ 4 ಬಾರಿ ಗೆದ್ದು ಇತಿಹಾಸ ನಿರ್ಮಿಸಿದ್ದೇನೆ. ಇದುವರೆಗೂ ಇಲ್ಲಿ ನಾಲ್ಕು ಬಾರಿ ಯಾರೂ ಗೆದ್ದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿದೆ' ಎಂದು ಸಿದ್ದೇಶ್ವರ ತಿಳಿಸಿದ್ದಾರೆ.

ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು
ಜಿ.ಎಂ.ಸಿದ್ದೇಶ್ವರ ಅವರು 2004, 2009, 2014 ಮತ್ತು 2019ರ ಚುನಾವಣೆಯಲ್ಲಿ ಸತತವಾಗಿ ದಾವಣಗೆರೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. 2014ರ ಚುನಾವಣೆಯಲ್ಲಿ ಗೆದ್ದ ಬಳಿಕ ಕೆಲವು ಕಾಲ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಭಾರಿ ಕೈಗಾರಿಕೆ ಖಾತೆ ರಾಜ್ಯ ಸಚಿವರಾಗಿದ್ದರು. 2016ರಲ್ಲಿ ಸಂಪುಟ ಪುನರ್ ರಚನೆ ವೇಳೆ ಸಚಿವ ಸ್ಥಾನ ಕಳೆದುಕೊಂಡರು.











Click it and Unblock the Notifications