ಗ್ರಾಮ-ಒನ್; 750 ಸರ್ಕಾರಿ ಸೇವೆ ಒಂದೇ ಸೂರಿನಲ್ಲಿ
ದಾವಣಗೆರೆ, ನವೆಂಬರ್ 20; ಗ್ರಾಮೀಣ ಭಾಗದ ಜನರಿಗೆ ಹಲವು ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ 'ಗ್ರಾಮ-ಒನ್' ಸೇವಾ ವೇದಿಕೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಇದರ ಅನ್ವಯ 750 ಸೇವೆಗಳು ಒಂದೇ ಸೂರಿನಡಿ ಸಿಗಲಿವೆ.
ಇಡಿಸಿಎಸ್ ನಿರ್ದೇಶನಾಲಯ, ಇ-ಆಡಳಿತ ಇಲಾಖೆ ವತಿಯಿಂದ ಆಯೋಜಿಸಿದ್ದ ಗ್ರಾಮ ಒನ್ ವರ್ಚುಯಲ್ ಕಾರ್ಯಕ್ರಮವನ್ನು ಬೆಂಗಳೂರಿನಿಂದಲೇ ಯಡಿಯೂರಪ್ಪ ಉದ್ಘಾಟಿಸಿದರು. "ಸರ್ಕಾರದ ಮಹಾತ್ವಾಕಾಂಕ್ಷಿ ಕಾರ್ಯಕ್ರಮದಿಂದಾಗಿ ಜನರು ತಮ್ಮ ಕೆಲಸಗಳಿಗೆ ನಗರಕ್ಕೆ ಅಲೆಯುವುದು ತಪ್ಪುತ್ತದೆ" ಎಂದರು.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು-ಒನ್ ಕರ್ನಾಟಕ-ಒನ್ ರೀತಿಯಲ್ಲಿ ಹಲವು ಸೇವೆಗಳು ಈ ಯೋಜನೆಯಡಿ ಸಿಗಲಿವೆ. ಮಾಹಿತಿ ಹಕ್ಕು ಕಾಯ್ದೆ ಸೇವೆ, ಮುಖ್ಯಮಂತ್ರಿಗಳ ಪರಿಹಾರ ಸೇವೆಗಳು, ಕೃಷಿ ಇಲಾಖೆ ಸೇವೆಗಳು, ಕಾರ್ಮಿಕ ಇಲಾಖೆ ಸೇವೆಗಳು, ವೃದ್ದಪ್ಯಾ ವೇತನ, ಅಂಗವಿಕಲರ ವೇತನ ಒಳಗೊಂಡಂತೆ ಹಲವು ಸೇವೆಗಳು ಲಭ್ಯವಿದೆ.

ಈ ಕೇಂದ್ರಗಳು ಬೆಳಗ್ಗೆ 8 ರಿಂದ ರಾತ್ರಿ 8ರ ತನಕ ಸೇವೆಗಳನ್ನು ನೀಡಲಿವೆ. ಈಗಾಗಲೇ ಸಕಾಲ ಯೋಜನೆಯಡಿ ಸಕಾಲದಲ್ಲಿ ಹಲವು ಸೇವೆಗಳನ್ನು ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲಾ ಗ್ರಾಮಗಳಲ್ಲಿ ಇಂತಹ ಕೇಂದ್ರ ಆರಂಭವಾಗಲಿದೆ.
5000ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಗ್ರಾಮಗಳಲ್ಲಿ ಕೇಂದ್ರ ಆರಂಭಿಸಲಾಗುತ್ತಿದ್ದು ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಪ್ರಾಯೋಗಿಕವಾಗಿ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.












Click it and Unblock the Notifications