ಗಲಭೆ, ಹಿಂಸಾಚಾರ ನಡೆದರೆ ಕೇಂದ್ರ ಸರ್ಕಾರವೇ ಹೊಣೆ: ಹೆಚ್.ಬಿ. ಮಂಜಪ್ಪ ಎಚ್ಚರಿಕೆ
ದಾವಣಗೆರೆ, ಜೂ17: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿರವರಿಗೆ ಕೇಂದ್ರ ಸರ್ಕಾರವು ಇಡಿ ದುರುಪಯೋಗಪಡಿಸಿಕೊಂಡು ನೊಟೀಸ್ ನೀಡಿರುವುದು ದ್ವೇಷದ ರಾಜಕಾರಣ. ಇದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಈ ವೇಳೆ ಗಲಭೆ, ಹಿಂಸಾಚಾರ ನಡೆದರೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರೇ ಹೊಣೆಗಾರರಾಗಬೇಕಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಎಚ್ಚರಿಕೆ ನೀಡಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಹೂವು ಹಾಕುವ ಮೂಲಕ ನಮನ ಸಲ್ಲಿಸಿದ ಬಳಿಕ ಅಲ್ಲಿಂದ ಜಯದೇವ ವೃತ್ತದವರೆಗೆ ಮೆರವಣಿಗೆ ನಡೆಸಿ ಪ್ರತಿಭಟನಾ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಎಷ್ಟೇ ಕಿರುಕುಳ ನೀಡುತ್ತಾರೋ ಅಷ್ಟು ಶಕ್ತಿಯುತವಾಗಿ ಕಾಂಗ್ರೆಸ್ ಬಲಿಷ್ಠಗೊಳ್ಳುತ್ತದೆ ಎಂದರು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರ ವಿರುದ್ಧ ಉದ್ದೇಶ ಪೂರ್ವಕವಾಗಿ ಕೇಸ್ ಹಾಕಲಾಗಿದೆ. ಜೊತೆಗೆ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಪಕ್ಷ ಅಧಿಕಾರದಲ್ಲಿರುವ ರಾಜ್ಯ ಹಾಗೂ ಬಲಿಷ್ಠವಾಗಿರುವ ಕಡೆಗಳಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ನಡೆಸುವ ಮೂಲಕ ಬೆದರಿಕೆ ತಂತ್ರ ಅನುಸರಿಸಲಾಗುತ್ತಿದೆ.

ಅಚ್ಚೇ ದಿನ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ
ಗಡಿಪಾರಾದ ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಿರುವುದು ದುರಂತ. ಅಚ್ಚೇ ದಿನ್ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯು ವಿಪಕ್ಷಗಳನ್ನು ಮಟ್ಟಹಾಕಲು ಯತ್ನಿಸುತ್ತಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಸೇಡಿನ ರಾಜಕಾರಣ ಮಾಡುತ್ತಿದೆ. ಅಧಿಕಾರ ಸಿಕ್ಕಿದೆ, ಜನರಿಗೆ ಒಳ್ಳೆಯದನ್ನು ಮಾಡಲಿ. ರೈತರ ಸಮಸ್ಯೆ, ನಿರುದ್ಯೋಗ, ತೈಲ ಬೆಲೆ ಹಾಗೂ ಸಿಲಿಂಡರ್ ದರ ಕಡಿಮೆ ಮಾಡುವ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಕಿಡಿಕಾರಿದರು. ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ , ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಅವರ ಮೇಲೆ ಇಡಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ್ದಾರೆ.

ಕಾರ್ಯಕರ್ತರ ಬಂಧನ ಖಂಡನೀಯ: ಶಿವಮೂರ್ತಿ ನಾಯ್ಕ್
ಇನ್ನು ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಕಾಂಗ್ರೆಸ್ ಮಾಜಿ ಶಾಸಕ ಶಿವಮೂರ್ತಿ ನಾಯ್ಕ್ ಮಾತನಾಡಿ, ಬಿಜೆಪಿ ಸರ್ಕಾರದ ರಾಜಕೀಯದ ದುರುದ್ದೇಶ ಜನರಿಗೂ ಗೊತ್ತಾಗಿದೆ. ದೆಹಲಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇ.ಡಿ.ಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ನೀಡುತ್ತಿರುವ ಕಿರುಕುಳದ ವಿರುದ್ಧ ಕಾಂಗ್ರೆಸ್ ಸಂಸದರು ಮತ್ತು ಎಐಸಿಸಿ ನಾಯಕರು ಈಗಾಗಲೇ ಧ್ವನಿ ಎತ್ತಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದನ್ನು ಹತ್ತಿಕ್ಕುವ ಜೊತೆಗೆ ಪ್ರತಿಭಟನೆಗೆ ಅವಕಾಶವನ್ನು ನೀಡದೆ ಎಐಸಿಸಿ ಕಚೇರಿಯ ಆವರಣದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರ ಬಂಧನ ಮಾಡಿರುವುದು ಖಂಡನೀಯ. ಸಂವಿಧಾನದತ್ತವಾಗಿದ್ದ ಹಕ್ಕನ್ನೇ ಮೊಟುಕುಗೊಳಿಸುವ ಕೇಂದ್ರ ಸರ್ಕಾರ ಮತ್ತು ಪೊಲೀಸ್ ನಡೆಗೆ ತೀವ್ರ ವಿರೋಧ ಇದೆ ಎಂದು ಹೇಳಿದರು.

ನಾಯಕರ ಧ್ವನಿ ಅಡಗಿಸಲು ಕೇಂದ್ರ ಸರ್ಕಾರ ಯತ್ನ
ನಾಯಕರ ಧ್ವನಿ ಅಡಗಿಸಲು ಹಾಗೂ ಬಾಯಿ ಮುಚ್ಚಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ದೂರಿದರು. ಜಯದೇವ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿದ ಬಳಿಕ ಎ.ಸಿ.ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಈ ವೇಳೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್, ಸದಸ್ಯರಾದ ವಿನಾಯಕ್ ಪೈಲ್ವಾನ್, ಎ. ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮುಖಂಡರಾದ ಕೆ. ಜಿ. ಶಿವಕುಮಾರ್, ಆವರಗೆರೆ ಮಂಜುನಾಥ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಘಟಕದ ಜಿಲ್ಲಾಧ್ಯಕ್ಷ ಜಿ. ಕೆ. ರಾಘವೇಂದ್ರ ಗೌಡ, ಜಿಕ್ರಿಯಾ, ಆಯೂಬ್ ಪೈಲ್ವಾನ್, ಕೆ. ಎಲ್. ಹರೀಶ್ ಬಸಾಪೂರ ಮತ್ತಿತರರು ಪಾಲ್ಗೊಂಡಿದ್ದರು.

ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ , ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಅವರ ಮೇಲೆ ಇಡಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕೋಟೆ ನಾಡು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಇನ್ನು ಕಾಂಗ್ರೆಸ್ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿದ ಘಟನೆ ಕೂಡ ನಡೆಯಿತು. ಕಾಂಗ್ರೆಸ್ ಕಚೇರಿಯಿಂದ ಹೊರಟ ಕಾಂಗ್ರೆಸ್ ನಾಯಕರುಗಳ ಮೆರವಣಿಗೆ ಪ್ರಧಾನಿ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರವಾಸಿ ಮಂದಿರದ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಪ್ರವಾಸಿ ಮಂದಿರದ ಬಳಿ ತಡೆಯಲು ಮುಂದಾದರು. ಇದರಿಂದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಜಟಾಪಟಿ ಏರ್ಪಟ್ಟಿತ್ತು. ಬಂಧಿಸಲು ಮುಂದಾದ ಪೋಲಿಸರಿಂದ ತಪ್ಪಿಸಿಕೊಂಡು ನೆಲದ ಮೇಲೆ ಬಿದ್ದು ಉರುಳಾಡಿದ ಘಟನೆ ನಡೆಯಿತು. ಆದರೆ ಪಟ್ಟು ಬಿಡದೆ ಪೋಲಿಸರು ಯುವ ಕಾಂಗ್ರೆಸ್ ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.
(ಒನ್ಇಂಡಿಯಾ ಸುದ್ದಿ)












Click it and Unblock the Notifications