ಪಂಚಾಯಿತಿ ಚುನಾವಣೆ; ಗೆಲುವಿಗೆ ತಂತ್ರ ರೂಪಿಸಿದ ರೇಣುಕಾಚಾರ್ಯ!
ದಾವಣಗೆರೆ, ಡಿಸೆಂಬರ್ 16: ಹೊನ್ನಾಳಿ ಕ್ಷೇತ್ರದ ಶಾಸಕ ಎಂ. ಪಿ. ರೇಣುಕಾಚಾರ್ಯ ಗ್ರಾ ಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ತಂತ್ರ ರೂಪಿಸಿದ್ದಾರೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ 45 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದ್ದು, 88 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.
ಗ್ರಾಮ ಪಂಚಾಯಿತಿ ಚುನಾವಣಾ ಕಣ ರಂಗೇರಿದೆ. ಶಾಸಕ ಎಂ. ಪಿ. ರೇಣುಕಾಚಾರ್ಯ ಅಖಾಡಕ್ಕೆ ಇಳಿದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಸರತ್ತು ನಡೆಸುತ್ತಿದ್ದಾರೆ. ತಾಲೂಕಿನ ಕಮ್ಮಾರಗಟ್ಟೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಹಲವಾರು ಮುಖಂಡರು ರೇಣುಕಾಚಾರ್ಯ ಸಮ್ಮುಖದಲ್ಲಿ ಬುಧವಾರ ಬಿಜೆಪಿ ಸೇರಿದರು.
ದಾವಣಗೆರೆ ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ ಡಿಸೆಂಬರ್ 22ರಂದು ನಡೆಯಲಿದೆ. ಒಟ್ಟು 211 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 1087 ಸದಸ್ಯ ಸ್ಥಾನಗಳಿಗೆ ಮತದಾನ ನಡೆಯಲಿದೆ.

ಜಿಲ್ಲೆಯ ಹೊನ್ನಾಳಿ, ದಾವಣಗೆರೆ ಹಾಗೂ ಜಗಳೂರು ತಾಲೂಕಿನಲ್ಲಿ ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದೆ. ಒಟ್ಟು 88 ಗ್ರಾಮ ಪಂಚಾಯತಿಗಳಿಗೆ ಸದಸ್ಯರ ಆಯ್ಕೆಯಾಗಬೇಕಿದೆ.
ಮೊದಲ ಹಂತದ ಚುನಾವಣೆ ನಡೆಯುವ ದಾವಣಗೆರೆ, ಹೊನ್ನಾಳಿ ಮತ್ತು ಜಗಳೂರು ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಡಿ. 20 ರಂದು ಸಂಜೆ 5 ಗಂಟೆಯಿಂದ ಡಿ. 22 ರಂದು ಸಂಜೆ 5 ಗಂಟೆಯವರೆಗೆ ಶುಷ್ಕ ದಿನವೆಂದು ಘೋಷಣೆ ಮಾಡಲಾಗಿದೆ.
ಎರಡನೆ ಹಂತದಲ್ಲಿ ಹರಿಹರ, ಚನ್ನಗಿರಿ ಮತ್ತು ನ್ಯಾಮತಿ ತಾಲೂಕುಗಳ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. ಡಿಸೆಂಬರ್ 25 ರ ಸಂಜೆ 5 ಗಂಟೆಯಿಂದ ಡಿ. 27 ರ ಸಂಜೆ 5 ಗಂಟೆಯವರೆಗೆ ಶುಷ್ಕ ದಿನವೆಂದು ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಶುಷ್ಕ ದಿನಗಳಂದು ಎಲ್ಲ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚಬೇಕು ಎಂದು ಸೂಚನೆ ನೀಡಲಾಗಿದೆ.












Click it and Unblock the Notifications