ದಾವಣಗೆರೆ; ಗಣೇಶ ಚತುರ್ಥಿ, ಮೊಹರಂ ಆಚರಣೆಗೆ ಮಾರ್ಗಸೂಚಿ
ದಾವಣಗೆರೆ, ಆಗಸ್ಟ್ 18; ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಗಣೇಶೋತ್ಸವ ಹಾಗೂ ಮೊಹರಂ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ದಾವಣಗೆರೆ ಜಿಲ್ಲಾಡಳಿತ ತಡೆ ಹಾಕಿದೆ. ಸರಳವಾಗಿ ಹಾಗೂ ಸೌಹಾರ್ದಯುತವಾಗಿ ಹಬ್ಬಗಳನ್ನು ಆಚರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಕೋವಿಡ್ ಸೋಂಕು ಎದುರಿಸುವ ನಿಟ್ಟಿನಲ್ಲಿ ಕಳೆದ ಎರಡು ವರ್ಷದಿಂದ ಹಬ್ಬದ ಆಚರಣೆಗಳನ್ನು ಸಾರ್ವಜನಿಕವಾಗಿ ಮಾಡಲು ಅನುಮತಿ ನೀಡಿಲ್ಲ. ಈ ಬಾರಿಯೂ ಅದು ಮುಂದುವರಿಯಲಿದ್ದು, ಮತ್ತಷ್ಟು ನಿರ್ಬಂಧ ಹೇರಲಾಗಿದೆ.
ದೇವಾಲಯ, ಮಸೀದಿ, ಚರ್ಚ್ ಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದೆ. ಯಾವುದೇ ಜಾತ್ರೆ, ವಿಶೇಷ ಪೂಜೆ, ಸಭೆ, ಸಮಾರಂಭ, ಮೆರವಣಿಗೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಇಲ್ಲಿಯವರೆಗೂ ಬಂದ ಎಲ್ಲಾ ಹಬ್ಬ, ಮಹೋತ್ಸವಗಳನ್ನು ಕೋವಿಡ್ ಮಾರ್ಗಸೂಚಿಯನ್ವಯ ಆಚರಿಸಿದ್ದು, ಮುಂಬರುವ ಗಣೇಶ ಹಾಗೂ ಮೊಹರಂ ಹಬ್ಬಗಳನ್ನು ಕೂಡ ನಿಯಮಾವಳಿಗಳನ್ವಯ ಸರಳವಾಗಿ, ಸೌಹರ್ದಯುತವಾಗಿ ಆಚರಿಸಬೇಕಿದೆ.
ದಾವಣಗೆರೆ ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಈಗಾಗಲೇ 30 ಕಡೆ ಸ್ಥಳ ನಿಗದಿಪಡಿಸಲಾಗಿದೆ. ಹೊರವಲಯದಲ್ಲಿ ಬಾತಿ ಕೆರೆ ಹಾಗೂ ಶಿರಮಗೊಂಡನಹಳ್ಳಿ ಬಳಿ ಅವಕಾಶ ಕಲ್ಪಿಸಲಾಗಿದ್ದು, ಅಲ್ಲಿಯೇ ವಿಸರ್ಜನೆ ಮಾಡಬೇಕು.

ಗಣೇಶಮೂರ್ತಿ ಪ್ರತಿಷ್ಠಾಪನೆ ನಿಷೇಧ
ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಹಬ್ಬವನ್ನು ಸರಳವಾಗಿ ದೇವಾಲಯಗಳಲ್ಲಿ ಅಥವಾ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು. ಗಣೇಶ ಹಬ್ಬ ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸ್ ಮಾಡಬೇಕು. ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಗಣೇಶ ಮೂರ್ತಿಯನ್ನು ಆದಷ್ಟು ತಮ್ಮ ಮನೆಗಳಲ್ಲೇ ವಿಸರ್ಜಿಸಿ ಇಲ್ಲದಿದ್ದಲ್ಲಿ ಪಾಲಿಕೆಯಿಂದ ನಿರ್ಮಿಸಲಾದ ತಾತ್ಕಾಲಿಕ ಕೃತಕ ವಿಸರ್ಜನಾ ಟ್ಯಾಂಕರ್ಗಳಲ್ಲಿ ವಿಸರ್ಜಿಸಬೇಕು ಎಂದು ಸೂಚನೆ ನೀಡಲಾಗಿದೆ.

ಮೊಹರಂ ಆಚರಣೆಗೆ ಸರ್ಕಾರದ ಮಾರ್ಗಸೂಚಿಗಳು
ಸಾರ್ವಜನಿಕ ಸ್ಥಳಗಳಲ್ಲಿ ಆಲಂಗಳನ್ನು ಅಥವಾ ಪಂಜಾ ಸ್ಥಾಪಿಸುವುದನ್ನು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ. ಆಗಸ್ಟ್ 12 ರಿಂದ 20 ರವರೆಗೆ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆ ನಿಷೇಧಿಸಲಾಗಿದೆ. ಸೂಕ್ತ ದೈಹಿಕ ಅಂತರ ಪಾಲಿಸಿ ಕನಿಷ್ಠ ಸಂಖ್ಯೆಯಲ್ಲಿ ಭಾಗಿಯಾಗಬಹುದು. ಪಂಜ, ಆಲಂ ಮತ್ತು ತಾಜಿಯತ್ಗಳನ್ನು ಜನರು ಮುಟ್ಟಬಾರದು. ಖಬರಸ್ಥಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಸಭೆ ಏರ್ಪಡಿಸುವುದನ್ನು ನಿರ್ಬಂಧಿಸಲಾಗಿದ್ದು, ದಫನ ಮಾಡಲು ಅನುಮತಿ ನೀಡಲಾಗಿದೆ.
60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು. ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಬೇಕು ಹಾಗೂ ಕೋವಿಡ್-19 ಸಮುಚಿತ ವರ್ತನೆಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಬೇಕು. ಒಂದು ವೇಳೆ ಹೆಚ್ಚು ಜನರು ಆಗಮಿಸಿದಲ್ಲಿ, ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಬೇಕು. ಮಸೀದಿಗಳಲ್ಲಿ ಪ್ರವೇಶಿಸುವ ಮೊದಲು ದೇಹದ ತಾಪಮಾನವನ್ನು ತಪಾಸಣೆ ಮಾಡಿಸಿಕೊಳ್ಳಬೇಕು. ತಮ್ಮ ತಮ್ಮ ಮನೆಗಳಿಂದ ಮುಸಲ್ಲಾವನ್ನು (ಜಾಯನಮಾಜ್) ಕಡ್ಡಾಯವಾಗಿ ತರಬೇಕು.

ಹಸ್ತಲಾಘವ, ಆಲಿಂಗ ಮಾಡಬಾರದು
ಮಸೀದಿಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ, ಸಭಾಂಗಣ, ಸಮುದಾಯ ಭವನ, ಶಾದಿ ಮಹಲ್ ಮತ್ತಿತರ ತೆರೆದ ಜಾಗಗಳಲ್ಲಿ ಮೊಹರಂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಆಯೋಜಿಸಬಾರದು. ಹಾಗೂ ಮೊಹರಂ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಕಾರ್ಯಕ್ರಮಗಳನ್ನು ಆಯೋಜಿಸಬಾರದು.

12 ಲಕ್ಷ ಲಸಿಕೆ ನೀಡುವ ಗುರಿ
ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಯಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 592 ಜನರು ಮರಣಹೊಂದಿದ್ದಾರೆ. ಜಿಲ್ಲೆಗೆ ಇದೀಗ 12 ಲಕ್ಷ ವ್ಯಾಕ್ಸಿನೇಷನ್ ಗುರಿ ನೀಡಲಾಗಿದೆ. ಶೇ.50 ರಷ್ಟು ಪೂರ್ಣಗೊಂಡಿದೆ. ನಗರದ ಹಳೆ ಭಾಗದಿಂದ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಎರಡು ಡೋಸ್ ವ್ಯಾಕ್ಸಿನೇಷನ್ ಮಾಡಿಸಿಕೊಂಡವರಿಗೆ ಕೋವಿಡ್ ಸೋಂಕು ಬರುವ ಸಾಧ್ಯತೆ ಕಡಿಮೆ ಇರುವುದರಿಂದ ಕಡ್ಡಾಯವಾಗಿ ವ್ಯಾಕ್ಸಿನೇಷನ್ ಮಾಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಕೋವಿಡ್ನ 3ನೇ ಅಲೆಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡಿದ್ದು, ಜಿಲ್ಲೆಯಲ್ಲಿ ಬೆಡ್, ವೆಂಟಿಲೇಟರ್ ಸಾಮಥ್ರ್ಯವನ್ನು ಹೆಚ್ಚಿಸಿ, ಹೆಚ್ಚುವರಿ ವೈದ್ಯರಿಗೆ, ದಾದಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಮಕ್ಕಳ ಸರ್ವೇ ಮಾಡಲಾಗುತ್ತಿದ್ದು, ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ ಹಾಗೂ ಅವರ ಪೋಷಕರಿಗೆ ಲಸಿಕೆ ಹಾಕಲಾಗುತ್ತಿದೆ.
Recommended Video

ಜಿಲ್ಲಾಧಿಕಾರಿಗಳ ಮನವಿ
"ಜನಜಂಗುಳಿ ಇರುವ ಕಡೆ ಹೋಗುವುದನ್ನು ತಪ್ಪಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಆಗಾಗ ಸ್ಯಾನಿಟೈಸ್ ಮಾಡಿಕೊಳ್ಳಬೇಕು. ಬೇಜವಾಬ್ದಾರಿಯಿಂದ ಕೋವಿಡ್ ಸೋಂಕನ್ನು ನಿರ್ಲಕ್ಷಿಸಿ, ಜಿಲ್ಲಾಡಳಿತಕ್ಕೂ ಹೊರೆ ಮಾಡದೆ, ನಿಮ್ಮ ಕುಟುಂಬದವರಿಗಾಗಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ" ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಮನವಿ ಮಾಡಿದ್ದಾರೆ.
"ಗಡಿ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಜಿಲ್ಲೆಗೆ ಕೋವಿಡ್ ಸೋಂಕು ಒಂದೆರೆಡು ತಿಂಗಳು ತಡವಾಗಿ ಬರುತ್ತದೆ. ಇದರಿಂದ ಕೋವಿಡ್ ವಿರುದ್ಧ ಹೋರಾಡಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲು ಹೆಚ್ಚಿನ ಸಮಯ ದೊರಕುತ್ತದೆ. ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿದರೆ ಕೊರೊನಾ ಸೋಂಕಿನಿಂದ ಆಗುವ ಸಾವು-ನೋವು ತಡೆಗಟ್ಟಬಹುದು. ಪೊಲೀಸರ ಭಯದಿಂದ ಮಾಸ್ಕ್ ಹಾಕಿಕೊಳ್ಳದೇ ನಿಮ್ಮ ಜೀವನದ ಸುರಕ್ಷತೆಗಾಗಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು" ಎಂದು ಎಸ್ಪಿ ರಿಷ್ಯಂತ್ ಸಹ
ಮನವಿ ಮಾಡಿದ್ದಾರೆ.












Click it and Unblock the Notifications