ಬೆಣ್ಣೆನಗರಿಯಲ್ಲಿ ವರುಣಾರ್ಭಟ: ಮತ್ತೆ ಶುರುವಾಯ್ತು ಪ್ರವಾಹ ಭೀತಿ!
ದಾವಣಗೆರೆ, ಆಗಸ್ಟ್, 02: ಬೆಣ್ಣೆನಗರಿ ದಾವಣಗೆರೆಯಲ್ಲಿ ವರುಣನ ಆರ್ಭಟಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲೂಕಿನಲ್ಲಿ ಭಾರಿ ಹಾನಿ ಸಂಭವಿಸಿದೆ. ಅಲ್ಲಲ್ಲಿ ಮನೆಗಳು ಕುಸಿದು ಬಿದ್ದಿದ್ದು, ಕೆಲವೆಡೆ ಮನೆಗಳು ಜಲಾವೃತವಾಗಿವೆ.
ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಹಿರೇಕಲ್ಮಠ ಕೆರೆ ಭರ್ತಿಯಾಗಿದ್ದು, ಕೆರೆಗೆ ಮೀನು ಬಿಟ್ಟ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇನ್ನು ದಾನಿಹಳ್ಳಿ ಬಳಿ ರಸ್ತೆ ಕೊಚ್ಚಿ ಹೋಗಿದ್ದು, ಸೇತುವೆ ಸಹ ನೀರಿನಲ್ಲಿ ಮುಳುಗಡೆಯಾಗಿದೆ. ಇದರ ಪರಿಣಾಮ ಹೊನ್ನಾಳಿ ಹಾಗೂ ನ್ಯಾಮತಿ ಸಂಪರ್ಕಿಸುವ ರಸ್ತೆಯಲ್ಲಿ ಸಂಚಾರ ವ್ಯತ್ಯಯ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ. ರಸ್ತೆ ಕಡಿತ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದರು.
ಜಲಾವೃತವಾದ ಮನೆಗಳು:
ಹೊನ್ನಾಳಿ ತಾಲೂಕಿನ ದೊಡ್ಡೇರಹಳ್ಳಿ ಗ್ರಾಮದಲ್ಲಿ ಮನೆಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದ್ದು, ಕೂಡಲೇ ಗ್ರಾಮದಲ್ಲಿ ಕಾಳಜಿ ಕೇಂದ್ರ ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ, ಕೆರೆಗಳು ಉಕ್ಕಿ ಹರಿಯುತ್ತಿದ್ದು, ಪಕ್ಕದಲ್ಲಿರುವ ರಸ್ತೆಗಳು ಮುಳುಗಡೆಯಾಗುತ್ತಿವೆ. ಇನ್ನು ಕೆಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿದಿದ್ದು, ಆಹಾರ ಪದಾರ್ಥಗಳು ನೀರಿಗಾಹುತಿಯಾಗಿವೆ.
ರೇಣುಕಾಚಾರ್ಯ ಭೇಟಿ ಪರಿಶೀಲನೆ:
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ಕಾಳಜಿ ಕೇಂದ್ರ ತೆರೆಯುವಂತೆ ಸೂಚಿಸಿದರು. ಗ್ರಾಮದ ಕರಿಯಮ್ಮ ದೇವಾಲಯದಲ್ಲಿ ಕಾಳಜಿ ಕೇಂದ್ರವನ್ನು ತೆರೆದಿದ್ದು, ಅಲ್ಲಿ ಜನರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಗುಡಿಸಲುಗಳಿಗೆ ನುಗ್ಗಿದ ಮಳೆ ನೀರು:
ನ್ಯಾಮತಿ ತಾಲೂಕಿನ ಸೋಮನಮಲ್ಲಾಪುರ ಗ್ರಾಮದಲ್ಲಿ ವಸಂತಪ್ಪ ಎಂಬುವವರಿಗೆ ಸೇರಿದ ಮೆಕ್ಕೆಜೋಳ ಬೆಳೆ ಸಂಪೂರ್ಣ ನೆಲಕಚ್ಚಿದೆ. ಇನ್ನು ಚನ್ನಗಿರಿ ತಾಲೂಕು ಸಂತೇಬೆನ್ನೂರಿನ 5ನೇ ವಾರ್ಡ್ನ ಮೂರು ಗುಡಿಸಲುಗಳಿಗೆ ನೀರು ನುಗ್ಗಿದೆ. ಇಲ್ಲಿ ಯಾವುದೇ ಚರಂಡಿ ವ್ಯವಸ್ಥೆ ಮಾಡದ ಕಾರಣ ಮಳೆ ಬಂದಾಗಲೆಲ್ಲಾ ಇದೇ ಸಮಸ್ಯೆ ಎಂದು ಜನರು ಆಕ್ರೋಶ ಹೊರಹಾಕಿದರು. ಈ ಬಗ್ಗೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹಾಗೂ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಇತ್ತ ಕಡೆ ಅವರು ತಲೆ ಹಾಕಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಪರದಾಟ:
ಸಂತೇಬೆನ್ನೂರಿನ ಪದವಿ ಕಾಲೇಜು ಆವರಣದಲ್ಲಿ ನೀರು ನಿಂತಿದ್ದು, ವಿದ್ಯಾರ್ಥಿಗಳು ಪರದಾಡಿದ್ದಾರೆ. ಇಲ್ಲೂ ಕೂಡ ಸೀಪೇಜ್ ನೀರು ಹರಿಯದೇ ಕಾಲುವೆ ತುಂಬಿ ನೀರು ಒಂದೆಡೆ ಸಂಗ್ರಹವಾಗಿಬಿಡುತ್ತದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದರು.