ದಾವಣಗೆರೆಯಲ್ಲಿ ಧಾರಾಕಾರ ಮಳೆ: ನದಿ ತೀರದ ಜನರಿಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ
ದಾವಣಗೆರೆ, ಅಕ್ಟೋಬರ್ 22: ದಾವಣಗೆರೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮಂಗಳವಾರ ಸಂಜೆಯಿಂದ ರಾತ್ರಿವರೆಗೂ ಸುಮಾರು 2 ತಾಸು ಭಾರಿ ಸಿಡಿಲು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ.
ಭಾರೀ ಮಳೆಗೆ ದಾವಣಗೆರೆಯಲ್ಲಿ ಕೆಲ ಮನೆಗಳು ಕುಸಿದಿರುವ ಬಗ್ಗೆ ವರದಿಯಾಗಿದೆ. ಬುಧವಾರವೂ ಸಹ ವರುಣ ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತಗೊಳಿಸಿದೆ. ತುಂಗಭದ್ರಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಹರಿಹರ ಹಾಗೂ ಹೊನ್ನಾಳಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಇನ್ನು ಕೆಲವೆಡೆ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಹೊನ್ನಾಳಿ ತಾಲೂಕಿನ ಸಾರಥಿ ಗ್ರಾಮದಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಭತ್ತ ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದಾರೆ
ಲೋಕಿಕೆರೆ, ಕೈದಾಳೆ, ಚನ್ನಗಿರಿ ತಾಲೂಕಿನ ಸೂಳೆಕೆರೆ, ಮಾಗೇನಹಳ್ಳಿ ಸೇರಿದಂತೆ ಹಲವೆಡೆ ಭಾರಿ ವರ್ಷಧಾರೆ ಸುರಿದಿದ್ದು, ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಮಾಗೇನಹಳ್ಳಿಯಲ್ಲಿ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ಭತ್ತ ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ಮಳೆಯಾಗುವ ಸೂಚನೆ ಇದ್ದು, ನದಿ ತೀರದ ಜನರು ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ
ದಾವಣಗೆರೆ ಜಿಲ್ಲೆಯಲ್ಲಿ ಅ.20 ರಂದು 36.0 ಮಿ.ಮೀ ಸರಾಸರಿ ಉತ್ತಮ ಮಳೆಯಾಗಿದ್ದು, ಮನೆ, ಬೆಳೆ ಸೇರಿದಂತೆ ಒಟ್ಟು 23.55 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 60 ಮಿ.ಮೀ. ಸರಾಸರಿ ಮಳೆಯಾಗಿದೆ.
ಯಾವ ತಾಲ್ಲೂಕಿನಲ್ಲಿ ಎಷ್ಟು ಮಳೆ
ಚನ್ನಗಿರಿ ತಾಲ್ಲೂಕಿನಲ್ಲಿ 34.0 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 60.0 ಮಿ.ಮೀ. ಹರಿಹರ ತಾಲ್ಲೂಕಿನಲ್ಲಿ 20.0 ಮಿ.ಮೀ. ಹೊನ್ನಾಳಿ ತಾಲ್ಲೂಕಿನಲ್ಲಿ 13.0 ಮಿ.ಮೀ. ಜಗಳೂರು ತಾಲ್ಲೂಕಿನಲ್ಲಿ 46.0 ಮಿ.ಮೀ, ನ್ಯಾಮತಿ ತಾಲ್ಲೂಕಿನಲ್ಲಿ 7.0 ಮಿ.ಮೀ. ವಾಸ್ತವ ಮಳೆಯಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಸರಾಸರಿ 3.0 ಮಿ.ಮೀ ವಾಡಿಕೆಗೆ 36.0 ಮಿ.ಮೀ ವಾಸ್ತವ ಮಳೆಯಾಗಿದೆ.
ದಾವಣಗೆರೆ ತಾಲ್ಲೂಕಿನಲ್ಲಿ 35 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, 8.75 ಲಕ್ಷ ರೂ. ನಷ್ಟ ಮತ್ತು 30 ಎಕರೆ ಭತ್ತ ಮತ್ತು ಮೆಕ್ಕೆಜೋಳದ ಬೆಳೆ ಹಾನಿಯಾಗಿದ್ದು, 1.30 ಲಕ್ಷ ರೂ. ಸೇರಿದಂತೆ ಒಟ್ಟು 10.05 ಲಕ್ಷ ನಷ್ಟದ ಅಂದಾಜು ಮಾಡಲಾಗಿದೆ.
ಒಟ್ಟು 9.20 ಲಕ್ಷ ರೂ. ಅಂದಾಜು ನಷ್ಟ
ಹರಿಹರ ತಾಲ್ಲೂಕಿನಲ್ಲಿ 50.00 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, 1.30 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿರುತ್ತದೆ. ಹೊನ್ನಾಳಿ ತಾಲ್ಲೂಕಿನಲ್ಲಿ 6 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, 60 ಸಾವಿರ ರೂ. ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 14 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, 6 ಲಕ್ಷ ರೂ. 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, 1.00 ಲಕ್ಷ ರೂ. ಹಾಗೂ 6 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, 2.20 ಲಕ್ಷ ರೂ. ಸೇರಿದಂತೆ ಒಟ್ಟು 9.20 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿರುತ್ತದೆ.
ದಾವಣಗೆರೆ ಜಿಲ್ಲೆಯಲ್ಲಿ ಒಟ್ಟಾರೆ 23.55 ಲಕ್ಷ ರೂ. ನಷ್ಟ
ಜಗಳೂರು ತಾಲ್ಲೂಕಿನಲ್ಲಿ 8 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, 1.50 ಲಕ್ಷ ರೂ.,1 ಎಕರೆ ಅಡಿಕೆ ಮತ್ತು 1 ಎಕರೆ ಬಾಳೆ ಬೆಳೆ ಹಾನಿಯಾಗಿದ್ದು, 90 ಸಾವಿರ ರೂ. ಸೇರಿ ಒಟ್ಟು 2.40 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿರುತ್ತದೆ.
ದಾವಣಗೆರೆ ಜಿಲ್ಲೆಯಲ್ಲಿ ಒಟ್ಟಾರೆ 23.55 ಲಕ್ಷ ರೂ. ನಷ್ಟ ಸಂಭವಿಸಿರುವ ಅಂದಾಜು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿಯನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Recommended Video