ಹಿಜಾಬ್; ಹರಿಹರದಲ್ಲಿ ವಿದ್ಯಾರ್ಥಿಗಳನ್ನು ಚದುರಿಸಲು ಅಶ್ರುವಾಯು ಪ್ರಯೋಗ
ದಾವಣಗೆರೆ, ಫೆಬ್ರವರಿ 08; ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಈಗ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಹಬ್ಬಿದೆ. ಸಮವಸ್ತ್ರದ ಜೊತೆಗೆ ಹಿಜಾಬ್ ಬೇಕು, ಬೇಡ ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಹಿಜಾಬ್ಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ಗೆ ಸಹ ಅರ್ಜಿ ಸಲ್ಲಿಕೆಯಾಗಿದೆ.
ಮಂಗಳವಾರ ಹಿಜಾಬ್ ವಿವಾದ ದಾವಣಗೆರೆ ಜಿಲ್ಲೆಗೆ ಹಬ್ಬಿದೆ. ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಬಾಬ್ ಮತ್ತು ಕೇಸರಿ ಶಾಲು ವಿವಾದ ಗಲಾಟೆಗೆ ಕಾರಣವಾಯಿತು. ಇದರಿಂದಾಗಿ ಕಾಲೇಜಿಗೆ ಒಂದು ದಿನ ರಜೆ ಘೋಷಿಸಲಾಯಿತು.
ಕೇಸರಿ ಶಾಲು, ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಆಗಮಿಸಿದ್ದರು. ಕಾಲೇಜಿಗೆ ರಜೆ ಘೋಷಣೆ ಮಾಡಲಾಯಿತು. ಪೊಲೀಸರು ಮೈಕ್ಗಳಲ್ಲಿ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪಾಲಕರ ಸಲಹೆ ಪಡೆದು ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಕಾಲೇಜು ಸಿಬ್ಬಂದಿ ವಿದ್ಯಾರ್ಥಿಗಳಿಗೆ ಹೇಳಿದರು. ಮತ್ತೊಂದು ಕಡೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿಜಾಬ್ಗೆ ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಯುತ್ತಿದೆ.
ಹರಿಹರದಲ್ಲಿ ವಾಗ್ವಾದ; ದಾವಣಗೆರೆ ಜಿಲ್ಲೆಯ ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಿಜಾಬ್ ಮತ್ತು ಕೇಸರಿ ಶಾಲು ತೊಟ್ಟ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.
ಕೇಸರಿ ಶಾಲು ತೊಟ್ಟು ಬಂದಿದ್ದ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಹಿಜಾಬ್ ಧರಿಸಿದವರು ನ್ಯಾಯ ಬೇಕು ಎಂದು ಘೋಷಣೆ ಕೂಗಿದರು. ಇದರಿಂದಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ವಿದ್ಯಾರ್ಥಿಗಳ ಜೊತೆಗೆ ಹಲವಾರು ಜನರು ಸಹ ಕಾಲೇಜಿಗೆ ಬಂದು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಆಗ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಪೊಲೀಸರು ಲಾಠಿ ತೋರಿಸಿ ವಿದ್ಯಾರ್ಥಿಗಳನ್ನು ಚದುರಿಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಅಶ್ರುವಾಯು ಸಹ ಪ್ರಯೋಗ ಮಾಡಲಾಯಿತು.
ಸೋಮವಾರ ದಾವಣಗೆರೆ ನಗರದ ಜಯವೃತ್ತದಲ್ಲಿ ಹಿಜಾಬ್ ಪರ, ವಿರೋಧ ಪ್ರತಿಭಟನೆಗಳು ನಡೆದಿದ್ದವು. ಹಿಂದೂ ಜಾಗರಣ ವೇದಿಕೆ, ಹಿಂದೂ ಯುವ ವಾಹಿನಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಮಹಿಳಾ ಹಕ್ಕುಗಳ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಹಿಜಾಬ್ ಪರವಾಗಿ ಪ್ರತಿಭಟಿಸಿದ್ದರು. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿದ ಕಾಲೇಜು ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು.
ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ತೆರಳಲು ನಮಗೆ ಅವಕಾಶ ನೀಡುವಂತೆ ಆಗ್ರಹಿಸಿ ಮಹಿಳಾ ಹಕ್ಕುಗಳ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಇಂದು ನಗರದಲ್ಲಿ ಹಿಜಾಬ್ ವಿವಾದ ತೀವ್ರವಾಗಿದೆ.
ಶಿವಮೊಗ್ಗದಲ್ಲಿ ನಿಷೇಧಾಜ್ಞೆ; ಹಿಜಾಬ್, ಕೇಸರಿ ಶಾಲು ವಿವಾದ ತಾರಕ್ಕೇರಿದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಳೆದ ಎರಡು ದಿನದಿಂದ ಶಿವಮೊಗ್ಗ ನಗರದಲ್ಲಿ ವಿವಾದ ಭುಗಿಲೆದ್ದಿದ್ದು, ಇವತ್ತು ತಾರಕಕ್ಕೇರಿತ್ತು.
ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ಎರಡು ದಿನ ಸಿಆರ್ಪಿಸಿ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಫೆಬ್ರವರಿ 8 ಮತ್ತು 9ರಂದು ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಇಲಾಖೆ ಹೇಳಿದೆ.
ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 3 ಅರ್ಜಿಗಳು ಕರ್ನಾಟಕ ಹೈಕೋರ್ಟ್ಗೆ ಸಲ್ಲಿಕೆಯಾಗಿವೆ. ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಇಂದು ಮಧ್ಯಂತರ ಆದೇಶ ನೀಡುವ ನಿರೀಕ್ಷೆ ಇದೆ.











Click it and Unblock the Notifications