ಶಾಸಕ ರೇಣುಕಾಚಾರ್ಯಗೆ 500 ರೂ. ದಂಡ ವಿಧಿಸಿದ ನ್ಯಾಯಾಲಯ
ದಾವಣಗೆರೆ, ಜೂನ್ 1: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ 500 ರೂ. ದಂಡ ವಿಧಿಸಿದೆ.
ಅಲ್ಲದೆ, ಅವರನ್ನು ನಾಲ್ಕು ಗಂಟೆಗೂ ಹೆಚ್ಚು ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಯಿತು. ಚುನಾವಣೆ ನೀತಿ ಸಂಹಿತೆಗೆ ಸಂಬಂಧಿಸಿದ್ದ ಪ್ರಕರಣದಲ್ಲಿ ಅವರು ವಿಚಾರಣೆಗೆ ಗೈರು ಹಾಜರಾಗಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ. ಜತೆಗೆ ನ್ಯಾಯಾಧೀಶರು ರೇಣುಕಾಚಾರ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.
2016ರಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ, ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ರೇಣುಕಾಚಾರ್ಯ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ರೇಣುಕಾಚಾರ್ಯ ಅವರನ್ನು ಸಂಜೆವರೆಗೂ ಪೊಲೀಸ್ ವಶಕ್ಕೆ ನೀಡಲಾಗಿತ್ತು.

ವಾರಂಟ್ ರೀಕಾಲ್ ಮಾಡಿಸಿಕೊಳ್ಳಲು ರೇಣುಕಾಚಾರ್ಯ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಬೆಳಿಗ್ಗೆ 11 ಗಂಟೆಗೆ ನ್ಯಾಯಾಧೀಧ ರಾಮಚಂದ್ರ ಡಿ. ಹುದ್ದಾರ ಅವರ ಎದುರು ರೇಣುಕಾಚಾರ್ಯ ಹಾಜರಾದರು. ಸಮನ್ಸ್ ನೀಡಿದ್ದರೂ ವಿಚಾರಣೆಗೆ ಬಾರದಿದ್ದ ರೇಣುಕಾಚಾರ್ಯ ಅವರನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡರು.
'ಶಾಸಕರಾದ ನೀವು ಹೀಗೆ ಬೇಕಾಬಿಟ್ಟಿ ನಡೆದುಕೊಳ್ಳಬಾರದು. ನೀವು ಸಾರ್ವಜನಿಕರಿಗೆ ಮಾದರಿಯಾಗಿರಬೇಕು' ಎಂದು ಸಲಹೆ ನೀಡಿದರು. ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿ ಮಧ್ಯಾಹ್ನ ನಾಲ್ಕು ಗಂಟೆಯ ಬಳಿಕ ಬಿಡುಗಡೆಗೆ ಆದೇಶಿಸಿದರು. ಈ ಸಂದರ್ಭದಲ್ಲಿ ರೇಣುಕಾಚಾರ್ಯ ಅವರಿಗೆ 500 ರೂ. ದಂಡ ವಿಧಿಸಾಯಿತು. ವಿಚಾರಣೆಯನ್ನು ಜೂನ್ 13ಕ್ಕೆ ಮುಂದೂಡಲಾಯಿತು.












Click it and Unblock the Notifications