ಜ.26 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪರ್ಯಾಯ ಪರೇಡ್
ದಾವಣಗೆರೆ, ಜನವರಿ 19: ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ನಡೆಸುತ್ತಿರುವ ಹೋರಾಟ ಬೆಂಬಲಿಸಿ ರೈತ, ಕಾರ್ಮಿಕ, ದಲಿತ ಜನಪರ ಸಂಘಟನೆಗಳ ಐಕ್ಯ ಹೋರಾಟ ವೇದಿಕೆ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಇದೇ ಜ.26 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪರ್ಯಾಯ ಪರೇಡ್ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ಗಣರಾಜ್ಯೋತ್ಸವದ ದಿನವಾದ ಜನವರಿ 26ರಂದು ಬೆಂಗಳೂರಿನಲ್ಲಿ ದೊಡ್ಡಮಟ್ಟದ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಒಂದು ಸಾವಿರ ಟ್ರ್ಯಾಕ್ಟರ್ಗಳು, ಮೂರು ಸಾವಿರ ಕಾರು ಮತ್ತು ದ್ವಿಚಕ್ರ ವಾಹನಗಳು, ಹದಿನೈದು ಸಾವಿರಕ್ಕೂ ಹೆಚ್ಚು ರೈತರು, ದಲಿತರು, ಕಾರ್ಮಿಕರು, ವಿದ್ಯಾರ್ಥಿಗಳು ಪರೇಡ್ ನಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ರಿಂದ ಬೆಂಗಳೂರಿನ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದ ತನಕ ಪರೇಡ್ ನಡೆಯಲಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಕರಾಳ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಇಡೀ ರೈತರ ಕುಲವನ್ನು ನಾಶ ಮಾಡಲು ಹೊರಟಿದ್ದು, ಇದನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ 64ಕ್ಕೂ ಅಧಿಕ ರೈತರು ಸಾವನ್ನಪ್ಪಿದರೂ ಸಹ ಕೇಂದ್ರ ಈ ಬಗ್ಗೆ ಸ್ಪಂದಿಸುತ್ತಿಲ್ಲ ಎಂದು ಕುರಬೂರು ಶಾಂತಕುಮಾರ್ ಕಿಡಿಕಾರಿದರು.
ಕೊರೊನಾ ಸಂಕಷ್ಟದ ಸಮಯದಲ್ಲಿ ಲಾಕ್ಡೌನ್ ಮಾಡಿ ರೈತರು, ಜನರನ್ನು ಬೀದಿಗೆ ಬರದಂತೆ ಭೀತಿ ಹುಟ್ಟಿಸಿ, ಆ ಸಮಯದಲ್ಲಿ ರೈತರಿಗೆ ಮಾರಕ ಆಗುವಂತಹ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವ ಮೂಲಕ ರೈತರಿಗೆ ಮರಣ ಶಾಸನ ಬರೆಯಲಾಗಿದೆ ಎಂದು ಆರೋಪಿಸಿದ ಅವರು, ಜ.26 ರ ನಂತರ ರೈತರಿಗೆ ಈ ಕಾಯ್ದೆಗಳಿಂದಾಗುವ ಅನಾನೂಕೂಲಗಳ ಬಗ್ಗೆ ರಾಜ್ಯಾದ್ಯಂತ ಜಾಗೃತಿ ಕಾರ್ಯಾಗಾರಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

ರೈತ ಮುಖಂಡ ತೇಜಸ್ವಿ ಪಟೇಲ್ ಮಾತನಾಡಿ, ಕ್ರಿಮಿನಲ್ಸ್ಗಳಿಗೆ ಬ್ರೈನ್ ಮ್ಯಾಪಿಂಗ್ ಮಾಡುತ್ತಾರೆ. ಅದೇ ರೀತಿ ಬಿಜೆಪಿಯ ಸಂಸದರಿಗೆ ಮಾಡಿದರೆ ಅವರೂ ಕೂಡ ಈ ಕಾಯ್ದೆಗಳನ್ನು ವಿರೋಧ ಮಾಡುತ್ತಾರೆ. ಆದರೆ, ಈ ಸುಗ್ರೀವಾಜ್ಞೆ ಮೂಲಕ ಕಾಯ್ದೆಗಳನ್ನು ಹೊರಡಿಸಿರುವುದರಿಂದ ಪಕ್ಷದ ಒಳಗೂ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಇರುವುದಿಲ್ಲ ಎಂದು ಹೇಳಿದರು.
ಸಭೆಯಲ್ಲಿ ರೈತ ಮುಖಂಡರಾದ ತೇಜಸ್ವಿ ಪಟೇಲ್, ಹೊನ್ನೂರು ಮುನಿಯಪ್ಪ, ಹುಚ್ಚವ್ವನಹಳ್ಳಿ ಮಂಜುನಾಥ್, ಐರಣಿ ಚಂದ್ರು, ಆವರಗೆರೆ ಉಮೇಶ್, ಬಲ್ಲೂರು ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications