ದಾವಣಗೆರೆ: ಡಿ.5ರ ಕರ್ನಾಟಕ ಬಂದ್ಗೆ ಬೆಂಬಲ ಸೂಚನೆ
ದಾವಣಗೆರೆ, ಡಿಸೆಂಬರ್ 1: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟಣೆಗಳು ಡಿ.5 ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಬೆಂಬಲ ಸೂಚಿಸಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಒಕ್ಕೂಟದ ಉಪಾಧ್ಯಕ್ಷ ಎ.ಭದ್ರಪ್ಪ, ಡಿ.5ರ ಬಂದ್ ಬೆಂಬಲಿಸಿ 26 ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಶಾಂತಿಯುತ ಪ್ರತಿಭಟನೆ ನಡೆಸಿ, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ, ಬಂದ್ಗೆ ಸಹಕರಿಸಬೇಕೆಂದು ಮನವಿ ಮಾಡಲಾಗುವುದು ಎಂದು ಹೇಳಿದರು.
ಡಿ.5 ರಂದು ಕರ್ನಾಟಕ ಬಂದ್ ಯಶಸ್ಸಿಗೆ ಕರ್ನಾಟಕ ರಕ್ಷಣಾ ವೇದಿಕೆ ಕರೆ
ಅನೇಕರ ಹೋರಾಟ, ತ್ಯಾಗ, ಬಲಿದಾನದಿಂದ ಭಾಷಾವಾರು ಪ್ರಾಂತ್ಯಗಳು ರಚನೆಯಾಗಿದ್ದು, ಹಲವು ಜನಾಂಗದವರು ಒಂದೇ ಮನೆಯ ಮಕ್ಕಳಂತೆ ಸೌಹಾರ್ದಯುತವಾಗಿ ನಾಡಿನಲ್ಲಿ ಸಹಬಾಳ್ವೆಯ ಜೀವನ ನಡೆಸುತ್ತಿದ್ದೇವೆ. ಆದರೆ, ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮೂಲಕ ಜನಾಂಗಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿಗೊಂದು ನಿಗಮ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತಾತ್ಕಾಲಿಕವಾಗಿ ಜಯ ಸಿಗಬಹುದು. ಆದರೆ, ಮುಂದೆ ಪರಸ್ಪರ ಕಿತ್ತಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಜೆ.ಎನ್.ಶ್ರೀನಿವಾಸ್, ಜಿಲ್ಲಾಧ್ಯಕ್ಷ ಶಿವಕುಮಾರ್.ಟಿ, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಸೋಮಶೇಖರ್, ಮುಖಂಡರಾದ ಬಿ.ಪರಮೇಶ್ ಮೇಟಿ, ಕೆ.ಬಿ.ರುದ್ರೇಶ್, ಜಮನಳ್ಳಿ ನಾಗರಾಜ್, ಆದಾಪುರ ನಾಗರಾಜ್, ಸುಂಕಪುರದ ಶಿವಕುಮಾರ್, ಪಿ.ಪ್ರಕಾಶ್, ಶುಭಮಂಗಳ, ಸುವರ್ಣಮ್ಮ, ಸೀಮೆಎಣ್ಣೆ ಬಸವರಾಜ್ ಮತ್ತಿತರರಿದ್ದರು.