KSRTC Fare Hike: ಸರ್ಕಾರಿ ಬಸ್ ದರ ಏರಿಕೆ, ಸಮರ್ಥನೆ ಕೊಟ್ಟ ಸಿದ್ದರಾಮಯ್ಯ
ದಾವಣಗೆರೆ, ಜನವರಿ 05: ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದಂತೆ ಜನವರಿ 5 ರಿಂದಲೇ ಜಾರಿಗೆ ಬರುವಂತೆ ರಾಜ್ಯದ 4 ಸಾರಿಗೆ ನಿಗಮಗಳ ಪ್ರಯಾಣ ದರ ಶೇ 15ರಷ್ಟು ಏರಿಕೆಯಾಗಿದೆ. ಬಸ್ ದರ ಹೆಚ್ಚಳ ಮುಂದಿಟ್ಟುಕೊಂಡು ಪ್ರತಿಪಕ್ಷಗಳು, ಜನರು ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದಾರೆ. ಸಚಿವರು, ಶಾಸಕರು ಬಸ್ ದರ ಏರಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ.
ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆ ಪ್ರವಾಸದಲ್ಲಿದ್ದಾರೆ. ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಬಸ್ಗಳ ಪ್ರಯಾಣ ದರವನ್ನು ಏರಿಕೆ ಮಾಡಿರುವ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಸಿದ್ದರಾಮಯ್ಯ ಹೇಳಿದ್ದೇನು?; ಮುಖ್ಯಮಂತ್ರಿಗಳು ಮಾತನಾಡಿ, "ರಸ್ತೆ ಸಾರಿಗೆ ಸಂಸ್ಥೆಗಳ ಬಸ್ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ" ಎಂದು ಹೇಳಿದರು.
"ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬರವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆ ಏರಿಸಲಾಗಿದೆ" ಎಂದು ತಿಳಿಸಿದರು.
"ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ?, ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ?" ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯ ಪ್ರತಿಪಕ್ಷಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಬಸ್ಗಳ ಪ್ರಯಾಣ ದರ ಏರಿಕೆ ಕುರಿತು ಶನಿವಾರ ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿತ್ತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಪರಿಷ್ಕರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿತ್ತು.
ಪುಷ್ಪ ವಿ. ಎಸ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಾರಿಗೆ ಇಲಾಖೆ ಆದೇಶದಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಿ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ ಎಂದು ತಿಳಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ದಿನಾಂಕ 02.01.2025ರಲ್ಲಿ ನೀಡಿರುವ ಅನುಮೋದನೆಯನ್ವಯ ಶನಿವಾರ ಕರ್ನಾಟಕ ಸರ್ಕಾರ ಸರ್ಕಾರಿ ಬಸ್ ಪ್ರಯಾಣ ದರ ಪರಿಷ್ಕರಣೆ ಮಾಡಿ ಆದೇಶವನ್ನು ಹೊರಡಿಸಿತ್ತು.
ಕುಮಾರಸ್ವಾಮಿ ಹೇಳಿದ್ದೇನು?; ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ, ಮಂಡ್ಯ ಸಂಸದ ಎಚ್. ಡಿ. ಕುಮಾರಸ್ವಾಮಿ ಸರ್ಕಾರಿ ಬಸ್ ದರಗಳ ಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಸರ್ಕಾರಿ ಬಸ್ಗಳ ದರ ಹೆಚ್ಚಳ ಮಾಡಿ ಬಡವರ ಮತ್ತು ಮಧ್ಯಮ ವರ್ಗದ ಜನರ ಬದುಕಿನ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ" ಎಂದು ಆರೋಪಿಸಿದರು.
"ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸಲು ಕಾರಣ ಹುಡುಕುತ್ತಿದೆ. ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ನೆಪ ಹುಡುಕುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ 5 ಗ್ಯಾರಂಟಿಗಳನ್ನು ನಿಲ್ಲಿಸಬೇಡಿ ಜನ ಹೇಳುತ್ತಿದ್ದಾರೆ" ಎಂದರು.
"ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ. ದಯವಿಟ್ಟು ನಿಲ್ಲಿಸಬೇಡಿ, ಮುಂದುವರೆಸಿ" ಎಂದು ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದರು.












Click it and Unblock the Notifications