ಹರಪನಹಳ್ಳಿಯನ್ನು ಬಳ್ಳಾರಿಗೆ ಸೇರಿಸಲು ಒಪ್ಪಿಗೆ
ದಾವಣಗೆರೆ, ಮಾರ್ಚ್ 04 : ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕನ್ನು ಪುನಃ ಬಳ್ಳಾರಿ ಜಿಲ್ಲೆಗೆ ಸೇರಿಸಲಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದಾಗಿ ಹರಪನಹಳ್ಳಿ ಹೈದರಾಬಾದ್-ಕರ್ನಾಟಕ ಭಾಗಕ್ಕೆ ಸೇರಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಹರಪನಹಳ್ಳಿ ತಾಲೂಕನ್ನು ಬಳ್ಳಾರಿಗೆ ಸೇರಿಸಲು ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ಹೈದರಾಬಾದ್-ಕರ್ನಾಟಕ ಭಾಗಕ್ಕೆ ತಾಲೂಕು ಸೇಲಿದ್ದು, 371 (ಜೆ) ವಿಶೇಷ ಸ್ಥಾನಮಾನ ಸಿಗಲಿದೆ.

ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕನ್ನು 371 (ಜೆ) ವ್ಯಾಪ್ತಿಗೆ ಸೇರಿಸಬೇಕೆಂಬುದು ಬಹು ವರ್ಷಗಳ ಬೇಡಿಕೆಯಾಗಿತ್ತು. ಸಾಮಾಜಿಕವಾಗಿ, ಸಾಂಸ್ಕೃತಿಕಾವಾಗಿ, ಭೌಗೋಳಿಕವಾಗಿ ಬಳ್ಳಾರಿ ಜಿಲ್ಲೆಯ ಅವಿಭಾಜ್ಯ ಅಂಗವಾಗಿದ್ದ ಹರಪನಹಳ್ಳಿ ತಾಲೂಕು 1957 ರಿಂದ 1996 ರವರಗೆ ಬಳ್ಳಾರಿ ಜಿಲ್ಲೆಯಲ್ಲಿತ್ತು.
1997 ರಲ್ಲಿ ಜೆ.ಎಚ್.ಪಟೇಲ್ ಮುಖ್ಯಮಂತ್ರಿಯಾದ ಬಳಿಕ ಹರಪನಹಳ್ಳಿ ತಾಲೂಕನ್ನು ಬಳ್ಳಾರಿಯಿಂದ ಬೇರ್ಪಡಿಸಿ ದಾವಣಗೆರೆಗೆ ಸೇರಿಸಲಾಗಿತ್ತು. ಪ್ರೊ.ನಂಜುಂಡಪ್ಪ ವರದಿ ಪ್ರಕಾರ ಹರಪನಹಳ್ಳಿ ತಾಲೂಕು ರಾಜ್ಯದ 3ನೇ ಅತಿ ಹಿಂದುಳಿದ ತಾಲೂಕಾಗಿದೆ.
ಹರಪನಹಳ್ಳಿ ತಾಲೂಕನ್ನ ಹೈದರಾಬಾದ್-ಕರ್ನಾಟಕದ ವಿಶೇಷ ಸ್ಥಾನಮಾನಕ್ಕೆ ಸೇರಿಸುವಂತೆ ಆಗ್ರಹಿಸಿ ಅನೇಕ ಹೋರಾಟಗಳು ನಡೆದ್ದವು. 2016ರ ಡಿ.26ರಂದು ತಾಲೂಕಿನಲ್ಲಿ ಸಾಧನಾ ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಸ್ಥಾನಮಾನಕ್ಕೆ ಕಲ್ಪಿಸಲು ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದ್ದರು.












Click it and Unblock the Notifications