ಲಂಚ ಪ್ರಕರಣದಲ್ಲಿ ಪ್ರಶಾಂತ್ ಮಾಡಾಳ್ಗೆ ಜಾಮೀನು, ಷರತ್ತುಗಳೇನು?
ಬೆಂಗಳೂರು, ಏಪ್ರಿಲ್ 22; ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್) ಟೆಂಡರ್ ಕಾರ್ಯಾದೇಶ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಪ್ರಶಾಂತ್ ಮಾಡಾಳ್ಗೆ ಜಾಮೀನು ಸಿಕ್ಕಿದೆ. ಈ ಪ್ರಕರಣ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿತ್ತು. ಲೋಕಾಯುಕ್ತ ಪೊಲೀಸರು 40 ಲಕ್ಷ ರೂ. ಲಂಚ ಪಡೆಯುವಾಗ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಎಂ. ವಿ. ಪ್ರಶಾಂತ್ ಕುಮಾರ್ ಮಾಡಾಳ್ರನ್ನು ಮಾರ್ಚ್ ತಿಂಗಳಿನಲ್ಲಿ ಬಂಧಿಸಿದ್ದರು.
ಲಂಚ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿಯೂ ಆಗಿರುವ ಎಂ. ವಿ. ಪ್ರಶಾಂತ್ ಕುಮಾರ್ ಮಾಡಾಳ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಮಾನ್ಯ ಮಾಡಿರುವ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಇದೇ ಪ್ರಕರಣದಲ್ಲಿ ಕೆಎಸ್ಡಿಎಲ್ ಮಾಜಿ ಅಧ್ಯಕ್ಷರೂ ಆದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಲಾಗಿತ್ತು. ಕಳೆದ ವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಪ್ರಕರಣದ ಹಿನ್ನಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಕುಟುಂಬ ಸದಸ್ಯರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ.
ಷರತ್ತುಗಳು ಏನೇನು?; ಕರ್ನಾಟಕ ಹೈಕೋರ್ಟ್ ಜಾಮೀನು ನೀಡುವಾಗ ಅರ್ಜಿದಾರ 5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಇದೇ ಮಾದರಿ ಪ್ರಕರಣದಲ್ಲಿ ಮತ್ತೆ ಭಾಗಿಯಾಗಬಾರದು. ಪ್ರಕರಣದ ಸಾಕ್ಷ್ಯಾಧಾರ ನಾಶಪಡಿಸಲು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು ಎಂದು ನ್ಯಾಯಾಲಯ ಷರತ್ತು ಹಾಕಿದೆ.
ಅಲ್ಲದೇ, ಪೂರ್ವಾನಮತಿ ಇಲ್ಲದೆ ನ್ಯಾಯಾಲಯದ ವ್ಯಾಪ್ತಿಬಿಟ್ಟು ಎಲ್ಲಿಗೂ ತೆರಳಬಾರದು. ಪಾರ್ಸ್ಪೋರ್ಟ್ ಅನ್ನು ತನಿಖಾಧಿಕಾರಿಯ ಸುಪರ್ದಿಗೆ ನೀಡಬೇಕು ಎಂದು ಜಾಮೀನು ಮಂಜೂರಾತಿ ವೇಳೆ ಹೈಕೋರ್ಟ್ ಷರತ್ತು ವಿಧಿಸಿದೆ. ಹೈಕೋರ್ಟ್ ಜಾಮೀನು ನೀಡಿದ್ದರಿಂದ ಸುಮಾರು 1 ತಿಂಗಳ ಕಾಲದ ಜೈಲುವಾಸ ಮುಗಿಸಿ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ಬಿಡುಗಡೆಯಾಗಲಿದ್ದಾರೆ.

ಪ್ರಕರಣದ ಹಿನ್ನೆಲೆ; ಪ್ರಕರಣದಲ್ಲಿ ದೂರುದಾರ ಶ್ರೇಯಾಸ್ ಕಶ್ಯಪ್ ನಿರ್ದೇಶಕರಾಗಿರುವ ಮೆರ್ಸೆಸ್ ಡಿಲಿಸಿಯಾ ಕೆಮಿಕಲ್ಸ್ ಕಂಪನಿಯಿಂದ ಕೆಮಿಕಲ್ ಆಯಿಲ್ (ಕಚ್ಚಾವಸ್ತು) ಖರೀದಿಯ ಕುರಿತ ಕೆಎಸ್ಡಿಎಲ್ ಟೆಂಡರ್ ಕಾರ್ಯಾದೇಶ ನೀಡಲು ಪ್ರತಿಯಾಗಿ 40 ಲಕ್ಷ ಲಂಚ ಪಡೆದಿದ್ದಾರೆ ಎಂಬ ಆರೋಪ ಪ್ರಶಾಂತ್ ವಿರುದ್ಧವಿದೆ.
ಈ ಆರೋಪ ಸಂಬಂಧ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು, ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಮಾ.2ರಂದು ಎಫ್ಐಆರ್ ದಾಖಲಿಸಿದ್ದರು. ಲಂಚದ ಹಣದ ಭಾಗವಾಗಿ 40 ಲಕ್ಷ ಸ್ವೀಕರಿಸುವಾಗಲೇ ಪ್ರಶಾಂತ್ ಮಾಡಾಳ್ರನ್ನು ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಖಾಸಗಿ ಕಚೇರಿಯಲ್ಲಿ ಬಂಧಿಸಲಾಗಿತ್ತು. ಬಳಿಕ ಪ್ರಶಾಂತ್ ಮಾಡಾಳ್ ನಿವಾಸದ ಮೇಲೆ ದಾಳಿ ಮಾಡಿದಾಗ 6 ಕೋಟಿ ರೂ. ದಾಖಲೆ ಇಲ್ಲದ ಹಣ ಪತ್ತೆಯಾಗಿತ್ತು.
ಈ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿಯಾದರೆ, ಅವರ ಪುತ್ರ ಪ್ರಶಾಂತ್ ಎರಡನೇ ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಜಾಮೀನು ಕೋರಿ ಪ್ರಶಾಂತ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ವಿಚಾರಣಾ ನ್ಯಾಯಾಲಯ 2023ರ ಏ.10ರಂದು ಆದೇಶಿಸಿತ್ತು. ಇದರಿಂದ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ನಡುವೆ ಮಾ.27ರಂದು ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಗುರಿಯಾಗಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ವಿಚಾರಣಾ ನ್ಯಾಯಾಲಯ ಏ.15ರಂದು ಜಾಮೀನು ಮಂಜೂರು ಮಾಡಿತ್ತು.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಈ ಬಾರಿಯ ಚುನಾವಣೆ ಟಿಕೆಟ್ ಕೈ ತಪ್ಪುವುದು ಖಾತ್ರಿಯಾಗಿತ್ತು. ಆದರೆ ಮಾಡಾಳ್ ವಿರೂಪಾಕ್ಷಪ್ಪ ಮತ್ತೊಬ್ಬ ಪುತ್ರ ಮಲ್ಲಿಕಾರ್ಜುನ ಮಾಡಾಳ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ತುಮ್ಕೋಸ್ ಮಾಜಿ ಅಧ್ಯಕ್ಷ ಶಿವಕುಮಾರ್ಗೆ ಟಿಕೆಟ್ ನೀಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಲ್ಲಿಕಾರ್ಜುನ ಮಾಡಾಳ್ರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಿದೆ.












Click it and Unblock the Notifications