ದಾವಣಗೆರೆ:7 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ, ಪಾಲಿಕೆ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ
ದಾವಣಗೆರೆ, ನವೆಂಬರ್, 07: ಮೂರು ಲಕ್ಷ ರೂಪಾಯಿ ಪಡೆಯುವಾಗ ದಾವಣಗೆರೆ ಮಹಾನಗರ ಪಾಲಿಕೆ ವ್ಯವಸ್ಥಾಪಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿ ಆಗಿದ್ದಾರೆ. ಜಕಾತಿ ಟೆಂಡರ್ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷ್ಣಪ್ಪ ಎಂಬುವವರಿಗೆ ವೆಂಕಟೇಶ್ ಅವರು ಏಳು ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ರಾಮ್ ಅಂಡ್ ಕೋ ಸರ್ಕಲ್ನ ತನ್ನ ಕೊಠಡಿಯಲ್ಲಿ ಮೂರು ಲಕ್ಷ ರೂಪಾಯಿ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ವೆಂಕಟೇಶ್ ಬಳಿ ಇದ್ದ ಮೂರು ಲಕ್ಷ ರೂಪಾಯಿ ಲಂಚದ ಹಣವವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ಆಂಜನೇಯ ಹಾಗೂ ರಾಷ್ಟ್ರಪತಿ ದಾಳಿ ನಡೆಸಿದ್ದರು. ವೆಂಕಟೇಶ್ ಪಡೆದ ಲಂಚದ ಹಣ ಪಾಲಿಕೆಯ ಹಿರಿಯ ಅಧಿಕಾರಿಗಳಿಗೆ ಸಂದಾಯವಾಗುತಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಶ್ರೀರಾಮಸೇನೆಯ ಆರೋಪ ಏನು?
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಈ ಟೆಂಡರ್ ನೀಡುವಲ್ಲಿ ಲಕ್ಷಾಂತರ ರೂಪಾಯಿ ಲಂಚ ವಸೂಲಿ ಮಾಡಿರುವ ಪಾಲಿಕೆ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಮಣಿ ಸರ್ಕಾರ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ನಡೆದಿರುವ ಅಥವಾ ಜಿಲ್ಲೆಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಬೆಂಗಳೂರು ಹೈಕೋರ್ಟ್ ಮತ್ತು ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಸದ್ಯ ಲೋಕಾಯುಕ್ತರಿಗೆ ಈ ಬಗ್ಗೆ ದೂರು ನೀಡಲಾಗಿದೆ. ನಂತರ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಾಲಿಕೆ ಆಯುಕ್ತರಿಂದ 7 ಲಕ್ಷ ರೂ. ಬೇಡಿಕೆ
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಕಾತಿ ವಸೂಲಿಗೆ ಸಂಬಂಧಪಟ್ಟಂತೆ 6ತಿಂಗಳ ನವೀಕರಣಕ್ಕೆ ಪಾಲಿಕೆ ಆಯುಕ್ತರು 7 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ರೂಪಾಯಿ ಕೇಳಿದ್ದು, ಉಳಿದ 5 ಲಕ್ಷ ರೂಪಾಯಿಯನ್ನುಆದೇಶಕ್ಕೆ ಸಹಿ ಮಾಡಿದ ನಂತರ ನೀಡುವುದಾಗಿ ಒಪ್ಪಂದ ಮಾಡಿಕೊಂಡು ಮಾತುಕತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೆಂಕಟೇಶ್ ಅವರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಭಾನುವಾರ ರಾತ್ರಿ ನಗರದ ರಾಮ್ ಅಂಡ್ ಕೋ ವೃತ್ತದ ಸಮೀಪ ಇರುವ ವೆಂಕಟೇಶ್ 3 ಲಕ್ಷ ರೂಪಾಯಿ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದು, ಅವರನ್ನು ಇದೀಗ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇದೇ ರೀತಿ ಪಾಲಿಕೆಯಲ್ಲಿ ಎಲ್ಲಾ ಹಂತದಲ್ಲೂ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಕುರಿತಂತೆ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಮಣಿ ಸರ್ಕಾರ್ ಒತ್ತಾಯಿಸಿದರು.

ಸಚಿವ ಬೈರತಿ ಬಸವರಾಜ್ ಹೆಸರು ಪ್ರಸ್ತಾಪ
ಅಲ್ಲದೇ ಪಾಲಿಕೆಯಲ್ಲಿ ಕರ್ತವ್ಯನಿರತ ವೆಂಕಟೇಶ್ ಅವರು ಕೃಷ್ಣ ಅವರೊಂದಿಗೆ ಮಾತುಕತೆ ನಡೆಸುವಾಗ ದಾವಣಗೆರೆ ಜಿಲ್ಲಾ ಉಸ್ತುವರಿ ಸಚಿವ ಬೈರತಿ ಬಸವರಾಜ್ ಹೆಸರು ಪ್ರಸ್ತಾಪವಾಗಿತ್ತು. ಇತ್ತೀಚೆಗಷ್ಟೇ 15 ಲಕ್ಷ ರೂಪಾಯಿಯನ್ನು ನೀಡಿರುವ ವಿಚಾರವೂ ಪ್ರಸ್ತಾಪವಾಗಿದೆ. ಈ ಹಿನ್ನೆಲೆ ಉಸ್ತುವಾರಿ ಸಚಿವರ ವಿರುದ್ಧವೂ ಲೋಕಾಯುಕ್ತರು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ವೆಂಕಟೇಶ್ ಅವರು ಮಾತನಾಡಿರುವ ಆಡಿಯೋಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಪೊಲೀಸರು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬೆಂಗಳೂರಿನಲ್ಲೂ ಲೋಕಾಯುಕ್ತ ದಾಳಿ
ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಮಧ್ಯವರ್ತಿಗಳ ವಿರುದ್ಧವೂ ಮೂರು ಪ್ರತ್ಯೇಕ ಎಫ್ಐರ್ಗಳು ದಾಖಲಾಗಿವೆ. ಮಧ್ಯವರ್ತಿಗಳು ಮತ್ತು ಏಜೆಂಟ್ಗಳ ಬಳಿಯಿದ್ದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಪತ್ತೆಯಾದ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸಿದ್ದಾರೆ. ದಾಖಲೆಗಳು ಮಧ್ಯವರ್ತಿಗಳ ಕೈಸೇರಿದ್ದು ಹೇಗೆ ಎಂದೂ ತನಿಖೆ ಮುಂದುವರೆದಿದೆ.
ಇದರಿಂದ ಸಬ್ ರಿಜಿಸ್ಟ್ರಾರ್ ಕಚೇರಿಯ ಕೆಲ ಅಧಿಕಾರಿಗಳಿಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ನಿವೇಶನ, ರಿಯಲ್ ಎಸ್ಟೇಟ್ ವ್ಯವಹಾರ ಸಂಬಂಧ ಕಡತ ಪತ್ತೆ ಆಗಿದೆ. ಸೇಲ್ ಡೀಡ್ ಪ್ರತಿಗಳು, ಜಿಪಿಎ ಪತ್ರ, ಟ್ಯಾಕ್ಸ್ ರಸೀದಿ ಜಪ್ತಿ ಮಾಡಲಾಗಿದೆ. ಲೋಕಾಯುಕ್ತ ತನಿಖಾಧಿಕಾರಿಗಳು ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿಗಳ ಜೊತೆಗಿನ ನಂಟನ್ನು ಪತ್ತೆ ಹಚ್ಚಲಿದ್ದಾರೆ. ಸದ್ಯ ಕಡತಗಳ ಪರಿಶೀಲನೆ ನಡೆಸಿ, ಇಂಚಿಂಚೂ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.
ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಭ್ರಷ್ಟಾಚಾರದ ಆರೋಪದ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ಕಳೆದ ವಾರ ಬೆಂಗಳೂರು ಮತ್ತು ಸುತ್ತಮುತ್ತಲಿನ 20ಕ್ಕೂ ಹೆಚ್ಚು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದದರು. ಸುಮಾರು 150 ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ 15, ಬೆಂಗಳೂರು ಗ್ರಾಮಾಂತರದಲ್ಲಿ 4 ಮತ್ತು ರಾಮನಗರದ 2 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದರು.












Click it and Unblock the Notifications