ಟಿಕೆಟ್ ತಪ್ಪಿದ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಬಿಜೆಪಿ ಮತ್ತೊಂದು ಶಾಕ್: ಪಕ್ಷದಿಂದ ಉಚ್ಛಾಟನೆ!
ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಬಳಿಕ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರಿಗೆ ಬಿಜೆಪಿ ಶಾಕ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿಯಲ್ಲಿ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಶಿಸ್ತು ಸಮಿತಿಯ ಅಧ್ಯಕ್ಷ ಆದೇಶ ನೀಡಿದ್ದಾರೆ ಎಂದು ದಾವಣಗೆರೆ ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್ ತಿಳಿಸಿದ್ದಾರೆ.
ಕೆಎಸ್ಡಿಎಲ್ ನಿಗಮದ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ 40 ಲಕ್ಷ ರುಪಾಯಿ ಲಂಚ ಸ್ವೀಕರಿಸುವ ಸಮಯದಲ್ಲಿ ಸಿಕ್ಕಿಬಿದ್ದಿದ್ದರು. ಕೆಎಸ್ಡಿಎಲ್ ಕಚ್ಛಾವಸ್ತುಗಳ ಖರೀದಿಯ ಟೆಂಡರ್ ಕೊಡಿಸುವ ವಿಚಾರಕ್ಕೆ ಈ ಲಂಚ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ನಂತರ, ಮಾಡಾಳ್ ಕುಟುಂಬಸ್ಥರ ಮನೆಗಳ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತ ಇಲಾಖೆ 8 ಕೋಟಿ ರುಪಾಯಿ ನಗದು ವಶಪಡಿಸಿಕೊಂಡಿತ್ತು. ಇದು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

ಈ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿತ್ತು, ಜಾಮೀನಿನ ಮೇಲೆ ಅವರು ಬಿಡುಗಡೆಯಾಗಿದ್ದು, ಇನ್ನೂ ವಿಚಾರಣೆ ನಡೆಯುತ್ತಿದೆ. ಇಷ್ಟೆಲ್ಲಾ ವಿವಾದದ ನಂತರ ಬಿಜೆಪಿ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಟಿಕೆಟ್ ನೀಡುವುದಿಲ್ಲ ಎನ್ನುವುದು ಖಚಿತವಾಗಿತ್ತು. ಆದರೆ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಬಿಜೆಪಿಯಿಂದ ಟಿಕೆಟ್ ಪಡೆಯಲು ಭಾರಿ ಪ್ರಯತ್ನ ಪಟ್ಟಿದ್ದರು. ಆದರೂ ಪಕ್ಷದ ವರಿಷ್ಠರು ಅವರಿಗೆ ಟಿಕೆಟ್ ನೀಡಲು ನಿರಾಕರಿಸಿದ್ದರು.
ಇದರಿಂದ ಸಿಟ್ಟಿಗೆದ್ದ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಮಾಡಾಳ್ ಮಲ್ಲಿಕಾರ್ಜುನ ಕ್ಷೇತ್ರದಲ್ಲಿ ಸ್ವಾಭಿಮಾನಿ ಹೆಸರಿನಲ್ಲಿ ದೊಡ್ಡ ಮಟ್ಟದಲ್ಲಿ ರ್ಯಾಲಿ ನಡೆಸಿದ್ದರು. ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ಬಳಿಕ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಲು ನಿರ್ಧರಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ಎಲ್ಲಾ ಪಕ್ಷ ವಿರೋಧಿ ಚಟುವಟಿಕೆಗಳನ್ನು ಗಮನಿಸಿ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ.
ಆರೋಪದಿಂದ ಮುಕ್ತವಾಗುವ ವಿಶ್ವಾಸ
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ಮಾಡಾಳ್ ವಿರೂಪಾಕ್ಷಪ್ಪ ಏಪ್ರಿಲ್ 15ರಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬಿಡುಗಡೆ ಬಳಿಕ ಮಾತನಾಡಿದ್ದ ಅವರು, ಭಾರತದ ನ್ಯಾಯಾಂಗ ವ್ಯವಸ್ಥೆ ಮೇಲೆ ನನಗೆ ವಿಶ್ವಾಸವಿದೆ. ನನ್ನ ಮೇಲಿರುವ ಆರೋಪಗಳಿಂದ ಮುಕ್ತನಾಗುತ್ತೇನೆ. ನಾಲ್ಕು ಗೋಡೆಗಳ ಮಧ್ಯೆ ಇದ್ದ ಕಾರಣ ಹೊರಗಿನ ಘಟನೆಗಳ ಬಗ್ಗೆ ನನಗೆ ಮಾಹಿತಿ ಇಲ್ಲ, ಮನೆಗೆ ಹೋದ ಬಳಿಕ ಮಾಧ್ಯಮಗಳನ್ನು ನೋಡಿ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದರು.












Click it and Unblock the Notifications