ದಾವಣಗೆರೆ: ಶಿವಶಂಕರಪ್ಪ ಸೇರಿ ಹಲವು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ
ದಾವಣಗೆರೆ, ನವೆಂಬರ್ 17: ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಪ್ರದೇಶ ಕಾಂಗ್ರೆಸ್ ಸಮಿತಿ ಆಕಾಂಕ್ಷಿಗಳಿಗೆ ಆಹ್ವಾನ ನೀಡಿದ್ದು, ಜಿಲ್ಲೆಯಿಂದಲೂ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಹಿರಿಯ ಡಾ. ಶಾಮನೂರು ಶಿವಶಂಕರಪ್ಪ, ಹರಿಹರ ಕ್ಷೇತ್ರದಿಂದ ಸ್ಪರ್ಧೆಗೆ ಎಸ್.ರಾಮಪ್ಪ 2 ಲಕ್ಷ ರೂಪಾಯಿ ಡಿಡಿ ಸಮೇತ ಅರ್ಜಿ ಗುರುವಾರ ಸಲ್ಲಿಸಿದ್ದಾರೆ.
ಸಿಎಂ ರಾಜೀನಾಮೆ ಕೇಳುವ ಕಾಂಗ್ರೆಸ್ ಮುಖಂಡರದ್ದು ಹುಡುಗಾಟಿಕೆಯ ವರ್ತನೆ: ಎನ್.ರವಿಕುಮಾರ್
ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿ ಕೆಪಿಸಿಸಿ ಸುತ್ತೋಲೆಯ ಮೇರೆಗೆ ಅಗತ್ಯ ದಾಖಲೆಗಳೊಂದಿಗೆ ಸವಿತಾ ಬಾಯಿ, ಮಲ್ಲೇಶ್ ನಾಯ್ಕ್, ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಸೇರಿದಂತೆ ಕೆಲವರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಹೊನ್ನಾಳಿ, ಚನ್ನಗಿರಿ, ಜಗಳೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದು, ಕೆಲವರು ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಇದೆ. ಆದ್ರೆ, ಕೆಪಿಸಿಸಿಗೆ ಹೋಗಿ ಅರ್ಜಿ ಸಲ್ಲಿಸಿ ಬಂದಿರುವ ಕಾರಣ ಸ್ಪಷ್ಟವಾಗಿ ಯಾರೆಂದು ಸ್ಪಷ್ಟತೆಯಿಲ್ಲ.
ಮಾಯಕೊಂಡ ಕ್ಷೇತ್ರದಲ್ಲಿ ಹೆಚ್ಚು ಆಕಾಂಕ್ಷಿಗಳಿದ್ದು, ಈ ಕ್ಷೇತ್ರದಿಂದ ಕಣಕ್ಕಿಳಿಯಲು 15 ಮಂದಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇನ್ನು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಅರ್ಜಿ ಸಲ್ಲಿಸಿದ್ದಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಜಗಳೂರಿನಲ್ಲಿ ಹೆಚ್. ಪಿ. ರಾಜೇಶ್ ಸಹಿತ ಕೆಲ ಮುಖಂಡರಿದ್ದರೆ, ಹೊನ್ನಾಳಿಯಿಂದ ಶಾಂತನಗೌಡ, ಹೆಚ್. ಮಂಜಪ್ಪ ಪ್ರಬಲ ಆಕಾಂಕ್ಷಿಗಳು. ಚನ್ನಗಿರಿಯಿಂದ ವಡ್ನಾಳ್ ರಾಜಣ್ಣ, ಶಿವಗಂಗಾ ಬಸವರಾಜ್ ಸೇರಿ ಕೆಲ ಕಾಂಗ್ರೆಸ್ ಮುಖಂಡರಿದ್ದು, ಇವರು ಅರ್ಜಿ ಸಲ್ಲಿಸಿರುವ ಕುರಿತಂತೆ ಮಾಹಿತಿ ಲಭ್ಯವಾಗಿಲ್ಲ.
ಮಾಯಕೊಂಡ ಕ್ಷೇತ್ರಕ್ಕೆ ಸ್ಪರ್ಧಿಸಲು ಅರ್ಜಿ
ಕೆಪಿಸಿಸಿ ಸದಸ್ಯನಾಗಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ಹಾಲಿ ಕೆಪಿಸಿಸಿ ವಕ್ತಾರನಾಗಿ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಹತ್ತು ಹಲವಾರು ಜವಾಬ್ದಾರಿ ನಿರ್ವಹಿಸಿದ ಅನುಭವ ಹೊಂದಿದ್ದೇನೆ. ಆದ್ದರಿಂದ ದಾವಣಗೆರೆ ಜಿಲ್ಲೆಯ ಮಾಯಕೊಂಡ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಅಭ್ಯರ್ಥಿಯಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಾರಾಯಣ್ ಅವರಿಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಡಿ.ಬಸವರಾಜ್ ಹೇಳಿದರು.
ಮಾಯಕೊಂಡ ಕ್ಷೇತ್ರದ ಹಾಗೂ ಜಿಲ್ಲೆಯ ಹಲವು ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಮಾಯಕೊಂಡ ಕ್ಷೇತ್ರದ ಅಭ್ಯರ್ಥಿಯಾಗಿ ಅರ್ಜಿ ಸಲ್ಲಿಸಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಕಳೆದ ನಾಲ್ಕು ದಶಕಗಳಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಸತತ ಎಂಟು ಬಾರಿ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದೇನೆ ಎಂದರು.
1984 ರಲ್ಲಿ ಸರ್ಕಾರದ ಬ್ಯಾಂಕ್ ಉದ್ಯೋಗಕ್ಕೆ ರಾಜೀನಾಮೆ ನೀಡಿ ರಾಜಕಾರಣಕ್ಕೆ ಬಂದಿದ್ದೇನೆ. ಅವಿಭಜಿತ ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷನಾಗಿ, ರಾಜ್ಯ ಉಪಾಧ್ಯಕ್ಷನಾಗಿ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷನಾಗಿ ನಂತರ ರಾಜ್ಯ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿಯಾಗಿ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ವಕ್ತಾರನಾಗಿ, ಕೆಪಿಸಿಸಿ ಸದಸ್ಯರಾಗಿ 15 ವರ್ಷಗಳ ಕಾಲ ಪಕ್ಷವನ್ನು ಸಂಘಟಿಸಿದ್ದೇನೆ. ಜಿಲ್ಲೆಯ ಕಾಂಗ್ರೆಸ್ ನಾಯಕರು ಈ ಬಾರಿ ನನಗೆ ಬೆಂಬಲಿಸಿ ಕಾಂಗ್ರೆಸ್ ಟಿಕೆಟ್ ದೊರೆಯುವಂತೆ ಮಾಡುತ್ತಾರೆ ಎಂಬ ಅಭಿಲಾಷೆ ಹೊಂದಿದ್ದೇನೆ ಎಂದು ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.