ಕೆಲವರು ಬಿಎಸ್ವೈ ವಿರುದ್ಧ ದೂರು ನೀಡಿರುವುದನ್ನು ಒಪ್ಪಿಕೊಂಡ ಈಶ್ವರಪ್ಪ
ದಾವಣಗೆರೆ, ಜೂನ್ 19: "ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲ ಇದ್ದವರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೊತೆ ಮಾತನಾಡಿದ್ದಾರೆ,'' ಎಂದು ಹೇಳುವ ಮೂಲಕ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಒಪ್ಪಿಕೊಂಡರು.
Recommended Video
ದಾವಣಗೆರೆಯಲ್ಲಿ ಮಾತನಾಡಿದ ಅವರು, "ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ರಾಜಕೀಯ ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆ ಇದ್ದೇ ಇರುತ್ತದೆ. ಸಣ್ಣಪುಟ್ಟ ಸಮಸ್ಯೆಗಳ ಬಗ್ಗೆ ಕೂತು ಚರ್ಚಿಸಿದ್ದಾರೆ. ಕುಟುಂಬದ ರೂಪದಲ್ಲಿ ಶಾಸಕರು, ಮಂತ್ರಿಗಳು ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ಮಾಡಿದ್ದೇವೆ ಕೇವಲ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಎಂಬುದಲ್ಲ. ಕೊರೊನಾ ನಿಯಂತ್ರಣ ಸೇರಿ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ ಎಂದು,'' ತಿಳಿಸಿದರು.
"ಎಲ್ಲವನ್ನೂ ಬಗೆಹರಿಸಿ ಅರುಣ್ ಸಿಂಗ್ ದೆಹಲಿಗೆ ಹೋಗಿದ್ದಾರೆ ಎಂಬ ಭಾವನೆ ನನ್ನದು. ಬಿಜೆಪಿ ಕುಟುಂಬವಿದ್ದಂತೆ, ಸಣ್ಣಪುಟ್ಟ ಭಿನ್ನಾಭಿಪ್ರಾಯ ಸಹಜ. ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಶಾಸಕರ ಜೊತೆ ನಾಲ್ಕು ಗೋಡೆ ಮಧ್ಯೆ ಚರ್ಚೆ ಮಾಡುವ ಅವಕಾಶ ಎಲ್ಲಿದೆ,'' ಎಂದು ಹೇಳಿದರು.

" ಯಾವುದೇ ಚುನಾವಣೆ ಇಲ್ಲ. ಜಿಲ್ಲಾ, ತಾಲ್ಲೂಕು ಪಂಚಾಯತಿ ಚುನಾವಣೆ ಸದ್ಯಕ್ಕಿಲ್ಲ. ಕೊರೊನಾ ನಿಯಂತ್ರಣಕ್ಕೆ ಬರುತ್ತದೆ, ಸೋಂಕು ಕಡಿಮೆಯಾಗುತ್ತಿದೆ. ಚುನಾವಣೆ ನಡೆಸದಿರಲು ಸರ್ಕಾರ ತೀರ್ಮಾನಿಸಿದೆ. ಗ್ರಾಮ ಪಂಚಾಯತಿ ಸದಸ್ಯರಿಂದ ಉತ್ತಮ ಕಾರ್ಯವಾಗುತ್ತಿದ್ದು, ಕೊರೊನಾ 3ನೇ ಅಲೆಯ ಭೀತಿಯೂ ಇದೆ. ಗ್ರಾಮೀಣ ಭಾಗಗಳಲ್ಲಿಯೂ ಸೋಂಕು ಕಡಿಮೆಯಾಗುತ್ತಿದೆ,'' ಎಂದರು.
"ಲಾಕ್ಡೌನ್ ಮುಂದುವರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಎಂ ಯಡಿಯೂರಪ್ಪ ತೀರ್ಮಾನಿಸುತ್ತಾರೆ. ಸಚಿವ ಸಂಪುಟ ಸಭೆ ಅಂದು 4 ಗಂಟೆಗೆ ಕರೆಯಲಾಗಿದೆ. ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ,'' ಎಂದು ಸಚಿವ ಈಶ್ವರಪ್ಪ ತಿಳಿಸಿದರು.
"ನೀರಾವರಿ ಇಲಾಖೆಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ, ನೀರಾವರಿ ಇಲಾಖೆಯ ಕಾರ್ಯದರ್ಶಿ ಉತ್ತರ ಕೊಟ್ಟಿದ್ದಾರೆ. ಇದರ ಬಗ್ಗೆ ಹೆಚ್ಚು ಮಾತನಾಡಲಾರೆ. ಇನ್ನು ಮುಂದೆ ಬಹಿರಂಗವಾಗಿ ಮಾತನಾಡುವುದಕ್ಕೆ ಬ್ರೇಕ್ ಬೀಳುವ ವಿಶ್ವಾಸ ಇದೆ,'' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.












Click it and Unblock the Notifications