ಮಾಜಿ ಸಿಎಂ ಬೊಮ್ಮಾಯಿ ಭೇಟಿ ಬಗ್ಗೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?
ದಾವಣಗೆರೆ, ಜೂನ್ 14: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಗರದ ಹೊರವಲಯದಲ್ಲಿನ ರೆಸಾರ್ಟ್ವೊಂದರಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡುವಂತೆ ಮಾಡಿದೆ.
ಸುಮಾರು 25 ನಿಮಿಷಗಳ ಕಾಲದವರೆಗೆ ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ರಾತ್ರಿ 7.30ರಿಂದ ಸುದೀರ್ಘ ಚರ್ಚೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಶಿಗ್ಗಾಂವಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಬಸವರಾಜ ಬೊಮ್ಮಾಯಿ ಅವರು ಶಾಮನೂರು ಶಿವಶಂಕರಪ್ಪರನ್ನು ಭೇಟಿ ಮಾಡಿದ್ದಾರೆ. ಜೂ. 16ರಂದು ಶಾಮನೂರು ಶಿವಶಂಕರಪ್ಪರ ಜನುಮದಿನ ಇದ್ದು, ಶುಭ ಕೋರಲು ಭೇಟಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ. ಆದರೂ ಭೇಟಿ ಸಮಯದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳು ಬಗ್ಗೆ ಸಮಾಲೋಚನೆ ನಡೆದಿರುವ ಕುರಿತಂತೆ ತಳ್ಳಿ ಹಾಕುವಂತಿಲ್ಲ. ಒಟ್ಟಾರೆ, ಈಗಿನ ರಾಜ್ಯ ರಾಜಕಾರಣದಲ್ಲಿ ಇಬ್ಬರ ಭೇಟಿ ವದಂತಿಗಳಿಗೂ ಕಾರಣವಾಗಿದೆ.
ರಾಜಕೀಯ ಬೆರೆಸುವುದು ಸರಿಯಲ್ಲ
ಶಾಮನೂರು ಶಿವಶಂಕರಪ್ಪ ಅವರು ನಮ್ಮ ಹಿರಿಯರು ಮತ್ತು ದೂರದ ಸಂಬಂಧಿಯೂ ಹೌದು. ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಇದರಲ್ಲಿ ರಾಜಕಾರಣ ಬೆರೆಸುವುದು ಸೂಕ್ತವಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಾನು ಶಿಗ್ಗಾಂವಿಯಿಂದ ಬೆಂಗಳೂರಿಗೆ ಬರುವಾಗ ರಾತ್ರಿ ಊಟ ಮಾಡಲು ಹೋಟೆಲ್ಗೆ ಹೋದಾಗ ಅವರು ತಮ್ಮ ಮೊಮ್ಮಕ್ಕಳ ಬಗ್ಗೆ ಹೊಸ ಸಂಬಂಧದ ಕುರಿತು ಚರ್ಚೆ ಮಾಡಲು ಸೇರಿದ್ದರು. ಆ ಸಂದರ್ಭದಲ್ಲಿ ಅವರ ಜೊತೆಗೆ ಹತ್ತು ನಿಮಿಷ ಉಭಯ ಕುಶಲೋಪರಿ ಮಾತನಾಡಿದ್ದು, ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸ್ನೇಹ ಸಂಬಂಧಗಳೇ ಬೇರೆ, ರಾಜಕೀಯ ಸಂಬಂಧವೇ ಬೇರೆ. ನಾನು ನನ್ನ ರಾಜಕೀಯ ನಿಲುವಿನಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಭೇಟಿ ಬಗ್ಗೆ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?
ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಮನೂರು ಶಿವಶಂಕರಪ್ಪ, ನಾವು ಬೊಮ್ಮಾಯಿ ಕುಟುಂಬದವರು ಬೀಗರು. ತುಂಬಾ ದಿನಗಳ ಬಳಿಕ ಭೇಟಿಯಾಗಿದ್ದೆವು. ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜಕೀಯ ಹೊಂದಾಣಿಕೆ ಮಾಡಿಕೊಳ್ಳುವುದಿದ್ದರೆ, ಚುನಾವಣೆಗೆ ಮುನ್ನ ಮಾಡಿಕೊಳ್ಳುತ್ತಿದ್ದೆವು. ಈಗ ಆ ಬಗ್ಗೆ ಮಾತನಾಡುವುದು ಅಪ್ರಸ್ತುತ. ಹಾಗಾಗಿ ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಇದನ್ನು ಬೆಳೆಸಿಕೊಂಡು ಹೋಗುವುದು ಬೇಡ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.












Click it and Unblock the Notifications