ಲಾಕ್ಡೌನ್ ಮುಂದುವರಿಕೆಗೆ ಬಹುತೇಕ ಸಚಿವರ ಒಲವು
ದಾವಣಗೆರೆ, ಮೇ 21: ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸಲು ಬಹುತೇಕ ಸಚಿವರು ಒಲವು ತೋರಿದ್ದು, ನಾಳೆ ಅಥವಾ ನಾಡಿದ್ದು ಈ ಬಗ್ಗೆ ಚರ್ಚಿಸಿ, ಅಂತಿಮವಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಸುಧಾಕರ್ ತಿಳಿಸಿದರು.
ದಾವಣಗೆರೆ ನಗರದ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೊರೊನಾ ಸೋಂಕಿತ ಪ್ರಕರಣಗಳು ಇನ್ನೊಂದು ವಾರದಲ್ಲಿ ಕಡಿಮೆ ಆಗುವ ವಿಶ್ವಾಸ ಇದೆ ಎಂದು ತಿಳಿಸಿದರು.
ಆರೋಗ್ಯ ಸಚಿವರು ಬಂದಾಗಲೇ ಪೊಲೀಸರ ಅಮಾನವೀಯ ವರ್ತನೆ
ರಾಜ್ಯದಲ್ಲಿ ಆಕ್ಸಿಜನ್ಗೆ ಯಾವುದೇ ಸಮಸ್ಯೆ ಇಲ್ಲ. ಸಾಕಷ್ಟು ಪ್ರಮಾಣದಲ್ಲಿ ಕೇಂದ್ರ ಸರ್ಕಾರದಿಂದ ಬಂದಿದೆ. ರೆಮ್ಡೆಸಿವಿರ್ ಸಹ ಹತ್ತು ಲಕ್ಷ ರಾಜ್ಯಕ್ಕೆ ಬಂದಿದ್ದು, ಲಸಿಕೆ ಕೊರತೆಯೂ ಇಲ್ಲ. ಕೊರೊನಾ ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯಲ್ಲಿಯೂ ಕ್ರಮ ಕೈಗೊಳ್ಳುತ್ತಿದೆ ಎಂದರು.
ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರು ಹೆಚ್ಚಿದ್ದರೂ ಈಗ ಕಡಿಮೆ ಆಗುತ್ತಿವೆ. ಶೇ.47ರಷ್ಟು ಪಾಸಿಟಿವಿಟಿ ಇದ್ದ ಜಿಲ್ಲೆಗಳಲ್ಲಿ ಅರ್ಧಕರ್ಧ ಕಡಿಮೆಯಾಗಿದೆ. ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ತೆಗೆದುಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ತಗ್ಗಿಸಲು ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ದಾವಣಗೆರೆ ಜಿಲ್ಲೆಯಲ್ಲಿ ಶೇ.20ರಷ್ಟಿದ್ದ ಪಾಸಿಟಿವಿಟಿ ಈಗ ಶೇ.29ಕ್ಕೆ ಏರಿದೆ. ಕೊರೊನಾ ಟೆಸ್ಟ್ ಕಡಿಮೆಗೊಳಿಸಿಲ್ಲ. ಮೊದಲು ಹೆಚ್ಚಾಗಿ ಕಂಡು ಬಂದಿದ್ದ ಜಿಲ್ಲೆಗಳಲ್ಲಿ ಕೊರೊನಾ ಆರ್ಭಟ ತಗ್ಗಿದೆ. ಕೆಲ ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದೆ ಎಂಬ ಮಾಹಿತಿ ಇದೆ. ಕೋವಿಡ್ ನಿಯಂತ್ರಣಕ್ಕೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕೋ ಅವೆಲ್ಲವನ್ನೂ ಮಾಡುತ್ತಿದ್ದೇವೆ ಎಂದರು.
ಲಾಕ್ಡೌನ್ ಮಾಡಬೇಕೆಂಬುದು ನಮ್ಮ ಅಪೇಕ್ಷೆ
ರಾಜ್ಯದಲ್ಲಿ ಲಾಕ್ಡೌನ್ ಮಾಡಬೇಕೆಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ದಾವಣಗೆರೆಯ ಜಿಎಂಐಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ಡೌನ್ ಅನಿವಾರ್ಯ. ಸಿಎಂ ಯಡಿಯೂರಪ್ಪ ಅವರು ಸಚಿವರ ಜೊತೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ನಮ್ಮ ಅಭಿಪ್ರಾಯವನ್ನು ಹೇಳುತ್ತೇವೆ ಎಂದು ಹೇಳಿದರು.
Recommended Video
ಇದಕ್ಕೂ ಮುನ್ನ ನಗರದ ಚಿಗಟೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಡಾ. ಕೆ. ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರು ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಸೋಂಕಿತರ ಸಂಖ್ಯೆ, ಯಾವ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ, ಲಸಿಕೆ ಎಷ್ಟಿವೆ ಎಂಬ ಕುರಿತಂತೆ ಮಾಹಿತಿ ಪಡೆದುಕೊಂಡರು.