ಮಾರ್ಚ್ 25ರಂದು ಬೆಣ್ಣೆನಗರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ: ಅಧಿಕಾರಿಗಳಿಗೆ DC ನೀಡಿದ ಸೂಚನೆಗಳೇನು?
ಮಾರ್ಚ್ 25ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಹಾಗಾದರೆ ಕಾರ್ಯಕ್ರಮದ ಸಿದ್ಧತೆ ಹೇಗಿದೆ ಎಂದು ಇಲ್ಲಿ ತಿಳಿಯಿರಿ.
ದಾವಣಗೆರೆ, ಮಾರ್ಚ್, 20: ಇದೇ ಮಾರ್ಚ್ 25ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಶಿಷ್ಟಾಚಾರ ಹಾಗೂ ಸುರಕ್ಷತಾ ಕ್ರಮಗಳಲ್ಲಿ ಯಾವುದೇ ಲೋಪವಾಗದಂತೆ ಗರಿಷ್ಠ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಸೂಚನೆ ನೀಡಿದರು. ಹಾಗಾದರೆ ಮೋದಿ ಸ್ವಾಗತಕ್ಕೆ ಬೆಣ್ಣೆನಗರಿ ಯಾವ ರೀತಿಯಲ್ಲಿ ಸಿದ್ಧಗೊಳ್ಳುತ್ತಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಧಾನ ಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವ ಸಿದ್ಧತೆಗಳ ಕುರಿತಂತೆ ಇಂದು ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದ ಅವರು, ಖಾಸಗಿ ಕಾರ್ಯಕ್ರಮ ನಿಮಿತ್ತ ದಾವಣಗೆರೆಗೆ ಮೋದಿ ಅವರು ಆಗಮಿಸಲಿದ್ದಾರೆ. ಆದ್ಯಾಗ್ಯೂ ಶಿಷ್ಟಾಚಾರ ಹಾಗೂ ಸುರಕ್ಷತಾ ಜವಾಬ್ದಾರಿ ಎಲ್ಲ ಅಧಿಕಾರಿಗಳದ್ದಾಗಿದೆ. ಗರಿಷ್ಠ ಎಚ್ಚರಿಕೆಯಿಂದ ತಮಗೆ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೂಕ್ತ ವ್ಯವಸ್ಥೆ ಕೈಗೊಳ್ಳಲು ಸೂಚನೆ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯದ ವಿವಿಧ ಸಚಿವರು, ಹಿರಿಯ ಅಧಿಕಾರಿಗಳು, ಎಸ್.ಪಿ.ಜಿ. ತಂಡದವರು ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ. ವಸತಿ ವ್ಯವಸ್ಥೆ, ವಾಹನ ವ್ಯವಸ್ಥೆ, ಊಟ- ಉಪಾಹಾರದ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಶಿಷ್ಟಾಚಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸೂಚಿಸಿದರು.
400 ಹೆಕ್ಟೇರ್ ಜಾಗದಲ್ಲಿ ಸಮಾವೇಶ
ನಗರದ ಜಿ.ಎಂ.ಐ.ಟಿ ಕಾಲೇಜಿನ ಪಕ್ಕದಲ್ಲಿ ಸುಮಾರು 400 ಹೆಕ್ಟೇರ್ ಜಾಗದಲ್ಲಿ ಸಮಾವೇಶ ನಡೆಯಲಿದೆ. ಕಾರ್ಯಕ್ರಮ ಸುಗಮ ನಿರ್ವಹಣೆ ಮತ್ತು ಯಶಸ್ಸಿಗೆ ವಿವಿಧ ತಂಡಗಳನ್ನು ರಚಿಸಿದ್ದು, ಆಯಾ ಅಧಿಕಾರಿಗಳಿಗೆ ನೀಡಲಾಗಿರುವ ಜವಾಬ್ದಾರಿಗಳನ್ನು ಚಾಚು ತಪ್ಪದೆ ಸಮರ್ಪಕವಾಗಿ ನಿರ್ವಹಿಸಬೇಕು. ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಗಣ್ಯರ ಆಸನದ ವ್ಯವಸ್ಥೆ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವೂ ಅಚ್ಚುಕಟ್ಟಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮುನ್ನೆಚ್ಚರಿಕೆಯಾಗಿ ಕಾರ್ಯಕ್ರಮ ಸ್ಥಳದಲ್ಲಿ ಆ್ಯಂಬುಲೆನ್ಸ್, ತಾತ್ಕಾಲಿಕ ಆಸ್ಪತ್ರೆ ಮತ್ತು ತುರ್ತು ಚಿಕಿತ್ಸೆಗೆ ನಗರದ ಎಸ್.ಎಸ್ ಆಸ್ಪತ್ರೆಯಲ್ಲಿ ಐ.ಸಿ.ಯು ಸ್ಥಾಪಿಸಬೇಕು. ಅಗ್ನಿ ಶಾಮಕ ವಾಹನ ಇರಬೇಕು ಎಂದು ಸೂಚನೆ ನೀಡಿದರು.
ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುವುದು
ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮಾತನಾಡಿ, ಎಸ್.ಪಿ.ಜಿ. ಅವರ ಮಾರ್ಗಸೂಚಿಯಂತೆ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುವುದು. ಹೆಲಿಪ್ಯಾಡ್ಗಳ ನಿರ್ಮಾಣ, ಸಂಪರ್ಕ ರಸ್ತೆ ದುರಸ್ತಿ, ಪಾತ್ವೋಲ್ಗಳ ಭರ್ತಿ ಮಾಡುವುದು, ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಪೂರೈಕೆ, ಹಾಗೆಯೇ ಇಡೀ ದಾವಣಗೆರೆ ನಗರದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಗರಿಷ್ಠ ಎಚ್ಚರ ವಹಿಸಬೇಕು. ಅಗ್ನಿಶಾಮಕ ಸುರಕ್ಷತಾ ಕ್ರಮಗಳು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾದರೆ ಪರ್ಯಾಯವಾಗಿ ಜನರೇಟರ್ ವ್ಯವಸ್ಥೆ ಸೇರಿದಂತೆ ಸೂಕ್ಷ್ಮವಾಗಿ ಎಲ್ಲವನ್ನು ನಿರ್ವಹಿಸಬೇಕು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎ.ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಲೋಕೇಶ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
2023 ರ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ಈ ಬಾರಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕು ಎಂದು ಪಣತೊಟ್ಟಿರುವ ಬಿಜೆಪಿ ಹೈಕಮಾಂಡ ನಾಯಕರ ಮೂಲಕ ಮತಭೇಟೆಗೆ ಮುಂದಾಗಿದೆ. ವಿಜಯಸಂಕಲ್ಪ ಯಾತ್ರೆಯ ಮೂಲಕ ರಾಜ್ಯಾದ್ಯಂತ ಪ್ರಚಾರ ನಡೆಸಿರುವ ಬಿಜೆಪಿ ಅಂತಿಮವಾಗಿ ಮೋದಿ ಕ್ಲೈಮ್ಯಾಕ್ಸ್ ದಾವಣಗೆರೆಯಲ್ಲಿ ಮಾರ್ಚ್ 25 ಕ್ಕೆ ಮುಕ್ತಾಯಗೊಳ್ಳಲಿದೆ.
ಪ್ರಧಾನಿ ಮೋದಿ ಅವರು ಬೆಣ್ಣೆನಗರಿಗೆ ಬರಲಿದ್ದು, ಇಡೀ ದಾವಣಗೆರೆ ಮದುವಣಗಿತ್ತಿಯಂತೆ ಶೃಂಗಾರಗೊಳ್ಳುತ್ತಿದೆ. ಸಂಪೂರ್ಣ ಸಿಟಿ ಕೇಸರಿಮಯವಾಗುತ್ತಿದೆ. ಈಗಾಗಲೇ ಸಕಲ ಸಿದ್ದತೆ ಕೈಗೊಂಡಿದ್ದು, ಸಿದ್ದರಾಮೋತ್ಸವಕ್ಕೆ ಠಕ್ಕರ್ ಕೊಡಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ.
ಈ ಹಿಂದೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ಹುಟ್ಟು ಹಬ್ಬದ ಹಿನ್ನೆಲೆ ಬೆಣ್ಣೆ ನಗರಿ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ನಡೆಸುವ ಮೂಲಕ ಸಿದ್ದರಾಮಯ್ಯ ಸರ್ಕಾರದ ಅವದಿಯಲ್ಲಿ ಜಾರಿಗೊಳಿಸಿದ ಕಾರ್ಯಕ್ರಮ ಕುರಿತು ಬೃಹತ್ ಸಮಾವೇಶವನ್ನ ನಡೆಸಿ, ಐದಾರು ಲಕ್ಷ ಜನರನ್ನ ಸೇರಿಸುವ ಮೂಲಕ ಕಾಂಗ್ರೆಸ್ ನಾಯಕರು ತಮ್ಮ ಶಕ್ತಿ ಪ್ರದರ್ಶನವನ್ನು ತೋರಿಸಿದ್ದರು. ಹಾಗೆಯೇ ಇದಕ್ಕೆ ಠಕ್ಕರ್ ಕೊಡಲು ಬಿಜೆಪಿ ಭಾರಿ ಸಿದ್ಧತೆ ನಡೆಸಿದೆ.
ಪ್ರಧಾನಿ ಮೋದಿಯವರು ಮಾರ್ಚ್ 25ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು, ಅಲ್ಲಿಂದ ಚಿಕ್ಕಬಳ್ಳಾಪುರಕ್ಕೆ ಹೋಗಲಿದ್ದಾರೆ. ಇದಾದ ಬಳಿಕ ದಾವಣಗೆರೆಗೆ ಆಗಮಿಸಲಿದ್ದು, ಇಲ್ಲಿ ನಡೆಯುವ ಬೃಹತ್ ಸಮಾವೇಶ ಹಾಗೂ ವಿಜಯಸಂಕಲ್ಪ ಯಾತ್ರೆಯಲ್ಲೂ ಕೂಡ ಪಾಲ್ಗೊಳ್ಳಿದ್ದಾರೆ. ಹಾಗೆಯೇ ಇಲ್ಲಿನ ಕಾರ್ಯಕ್ರಮ ಮುಗಿಸಿಕೊಂಡು ನೇರವಾಗಿ ನವದೆಹಲಿಗೆ ಹಿಂದಿರುಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications