ದಾವಣಗೆರೆಯಲ್ಲೂ ನೈಟ್ ಕರ್ಫ್ಯೂ ಜಾರಿ: ದೇಗುಲದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ!
ದಾವಣಗೆರೆ, ಆಗಸ್ಟ್ 03: ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾಡಳಿತ ಬಿಗಿ ಕ್ರಮಕ್ಕೆ ಮುಂದಾಗಿದ್ದು ಮಾತ್ರವಲ್ಲದೆ, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.
ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದ್ದು, ಸಾವಿನ ಪ್ರಮಾಣದ ಪಾಸಿಟಿವಿಟಿ ಕೂಡ ಕುಂಠಿತಗೊಂಡಿದೆ. ಆದರೂ ಆ.16ರವರೆಗೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ದಾವಣಗೆರೆ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 10 ಗಂಟೆಯಿಂದ ಆಗಸ್ಟ್ 16 ರ ಬೆಳಿಗ್ಗೆ 6 ಗಂಟೆಯವರೆಗೆ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಅನುಮತಿಸಿದ ಚಟುವಟಿಕೆಗಳಿಗೆ ವಿನಾಯಿತಿ ನೀಡಿ, ತಕ್ಷಣದಿಂದ ಅಂದರೆ ಇಂದು ರಾತ್ರಿಯಿಂದಲೇ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಎಲ್ಲಾ ಮುಜರಾಯಿ ದೇವಾಲಯಗಳಿಗೆ ಆದೇಶ
ಇಂದಿನಿಂದ ಆಗಸ್ಟ್ 31ರವರೆಗೆ ಕೂಡಲೇ ಜಾರಿಗೆ ಬರುವಂತೆ ಜಿಲ್ಲೆಯ ಎಲ್ಲಾ ಮುಜರಾಯಿ ದೇವಾಲಯಗಳು ಮತ್ತು ಖಾಸಗಿ ದೇಗುಲಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮ ಕೈಗೊಂಡು ಭಕ್ತಾಧಿಗಳಿಗೆ ದೇವಾಲಯದ ಪ್ರವೇಶ, ದೇವರ ದರ್ಶನಕ್ಕೆ ಮಾತ್ರ ಸೀಮಿತಗೊಳಿಸಿ ಆದೇಶಿಸಲಾಗಿದೆ.
"ಉತ್ಸವ, ಸೇವೆ, ಮುಡಿ, ಪ್ರಸಾದ, ದಾಸೋಹ ಸೇರಿದಂತೆ ಜನರು ನಡೆಸುವ ಹೋಮ, ಹವನಕ್ಕೆ ನಿಷೇಧಿಸಲಾಗಿದೆ. ಶನಿವಾರ ಮತ್ತು ಭಾನುವಾರ ಅರ್ಚಕರಿಂದ ಸಾಂಪ್ರದಾಯಿಕ ಪೂಜೆ ಮಾತ್ರ ಅವಕಾಶ ನೀಡಲಾಗಿದೆ. ಭಕ್ತಾಧಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ,'' ಎಂದು ಜಿಲ್ಲಾಧಿಕಾರಿ ಮಹಾಂತೇಶ್. ಆರ್. ಬೀಳಗಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಎಲ್ಲಾ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮ ನಿರ್ಬಂಧ
ಕೋವಿಡ್ ಮೂರನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ತಜ್ಞರು ಈಗಾಗಲೇ ಅಗತ್ಯ ಸಲಹೆ ನೀಡಿದ್ದಾರೆ. ಈ ವೇಳೆ ಗರ್ಭಿಣಿಯರು ಹಾಗೂ ಮಕ್ಕಳು ಸೋಂಕಿಗೆ ಹೆಚ್ಚಾಗಿ ತುತ್ತಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚೆರಿಕಾ ಕ್ರಮ ತೆಗೆದುಕೊಳ್ಳಲಾಗುತ್ತದೆ. ದಾವಣಗೆರೆ ಜಿಲ್ಲೆಯಲ್ಲಿ ಎಲ್ಲಾ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು, ಇತರೆ ಜನದಟ್ಟಣೆಯಿಂದ ಕೂಡಿದ ಕಾರ್ಯಕ್ರಮಗಳು ಹಾಗೂ ಜನರು ಗುಂಪುಗೂಡುವುದಕ್ಕೂ ನಿರ್ಬಂಧ ಹೇರಲಾಗಿದೆ.

ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು
ಮುಂಬರುವ ಹಬ್ಬದ ದಿನಗಳಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮುಜರಾಯಿ, ಖಾಸಗಿ ದೇವಾಲಯಗಳಲ್ಲಿ ಜನದಟ್ಟಣೆ ನಿಯಂತ್ರಿಸುವುದು ಅನಿವಾರ್ಯ. ಈ ಹಂತದಲ್ಲಿ ರಾಜ್ಯ ಸರ್ಕಾರದ ಕೋವಿಡ್ ನಿಯಮಾವಳಿ ಪಾಲಿಸಲೇಬೇಕಿದೆ.
ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳ ವಿಶೇಷ ಕಣ್ಗಾವಲು ಇಡಲಾಗಿದೆ. ರಾಜ್ಯ ಸರ್ಕಾರದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದಲ್ಲಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಕ್ರಮ ಜರುಗಿಸಿ, ದಂಡ ವಿಧಿಸಬೇಕು
"ಕೋವಿಡ್ 3ನೇ ಅಲೆ ಬರದಂತೆ ತಡೆಗಟ್ಟಬೇಕಾದ ಜವಾಬ್ದಾರಿ ಆಯಾ ಸ್ಥಳೀಯ ಮಟ್ಟದ ಅಧಿಕಾರಿಗಳದ್ದು. ತಮ್ಮ ವ್ಯಾಪ್ತಿಯಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ದಂಡ ವಿಧಿಸದಿರುವ ಕಾರಣ ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರವಿಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದು, ಧಾರ್ಮಿಕ ಸ್ಥಳಗಳಲ್ಲಿ ದರ್ಶನದ ಜೊತೆಗೆ ಸೇವೆ ಸಲ್ಲಿಸುವುದು ಹೀಗೆ ಬೇಜವ್ದಾರಿಯಿಂದ ನಿಯಮ ಉಲ್ಲಂಘಿಸಿ ನಡೆಯುತ್ತಿರುವುದರಿಂದ 3ನೇ ಅಲೆಯ ಅಪಾಯವನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಿ, ದಂಡ ವಿಧಿಸಬೇಕು," ಎಂದು ತಿಳಿಸಿದರು.
ಇನ್ನು ದಾವಣಗೆರೆ ಜಿಲ್ಲೆಯ ಗಡಿಭಾಗದಲ್ಲಿ ಪೊಲೀಸರು ತಪಾಸಣೆ ತೀವ್ರಗೊಳಿಸಲಿದ್ದಾರೆ. ಮಹಾರಾಷ್ಟ್ರ, ಕೇರಳ, ಮಂಗಳೂರು ಸೇರಿದಂತೆ ಕೊರೊನಾ ಹೆಚ್ಚಿರುವ ಜಿಲ್ಲೆಗಳಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸುವಂತೆಯೂ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ,'' ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ.












Click it and Unblock the Notifications