Shanti Sagara: ಸೂಳೆಕೆರೆಗೆ ತ್ಯಾಜ್ಯ ಹೋಗದಂತೆ ತಡೆಗೆ ಸೂಚನೆ: S.S.ಮಲ್ಲಿಕಾರ್ಜುನ್ ಭರವಸೆ
ದಾವಣಗೆರೆ, ಆಗಸ್ಟ್, 15: ಚನ್ನಗಿರಿ ತಾಲೂಕಿನ ಸೂಳೆಕೆರೆಯ ನೀರು ಕಲುಷಿತಗೊಂಡಿರುವ ಕುರಿತ ವರದಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಂದಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಈ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಮೂಲಕ ಸೂಳೆಕೆರೆಗೆ ಸೇರುತ್ತಿರುವ ತ್ಯಾಜ್ಯ ನಿಲ್ಲಿಸಲು ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂಳೆಕೆರೆ ನೀರು ಹಲವು ಗ್ರಾಮಗಳಿಗೆ ಪೂರೈಕೆಯಾಗುತ್ತದೆ. ಕುಡಿಯುವ ನೀರಿನ ಬಳಕೆ ಹೆಚ್ಚಿದೆ. ನೀರು ಕಲುಷಿತಗೊಂಡಿರುವ ಕಾರಣ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವುದಾಗಿ ಹೇಳಿದರು.

ಈ ವಿಚಾರ ಕುರಿತಂತೆ ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದೇನೆ. ಪಾಂಡುಮಟ್ಟಿಯ ಶ್ರೀ ಗುರುಬಸವ ಮಹಾಸ್ವಾಮೀಜಿ ಅವರು ನನ್ನ ಜೊತೆ ಸೂಳೆಕೆರೆ ಕಲುಷಿತಗೊಂಡಿರುವ ಕುರಿತಂತೆ ಚರ್ಚೆ ನಡೆಸಿದ್ದಾರೆ. ಚನ್ನಗಿರಿ ತಾಲೂಕಿನ ವಿವಿಧ ಕಡೆಗಳಿಂದ ಸೂಳೆಕೆರೆಗೆ ತ್ಯಾಜ್ಯ ಬರುತ್ತಿದ್ದು, ಇದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಗ ಸೂಳೆಕೆರೆಗೆ ಸೇರುತ್ತಿರುವ ತ್ಯಾಜ್ಯವನ್ನು ಪರ್ಯಾಯ ಮಾರ್ಗದಡಿ ಬೇರೆ ಕಡೆ ಹೋಗುವಂತೆ ಮಾಡಲಾಗುವುದು ಎಂದು ತಿಳಿಸಿದರು.
ಸೂಳೆಕೆರೆಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಒಂದೂವರೆ ಲಕ್ಷಕ್ಕೂ ಅಧಿಕ ಮೀನಿನ ಮರಿಗಳ ಅಭಿವೃದ್ಧಿಗೆ ಬಿಡಲಾಗಿದ್ದು, ನೀರು ಕಲುಷಿತಗೊಂಡಿರುವ ಕಾರಣಕ್ಕೆ ಇವುಗಳ ಸ್ಥಿತಿ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ವರದಿ ಕೈಸೇರಿ ಎರಡು ದಿನಗಳಾಗಿವೆ. ಎಲ್ಲವನ್ನೂ ಒಮ್ಮೆಲೆ ಮಾಡಲಾಗದು. ಈ ಕುರಿತಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗುವುದು ಎಂದು ಹೇಳಿದರು.
ಸೂಳೆಕೆರೆಯಿಂದ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಜನರಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಹೇಳಿದ್ದೇನೆ. ಈ ನಿಟ್ಟಿನಲ್ಲಿ ಅವರು ಕೆಲಸ ಮಾಡಲಿದ್ದಾರೆ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ರಾಯಚೂರು ಥರ್ಮಲ್ ಘಟಕದಲ್ಲಿ ತಾಂತ್ರಿಕ ತೊಂದರೆಯಾದ ಕಾರಣ ದಾವಣಗೆರೆಯಲ್ಲಿ ರಾತ್ರಿ ಎರಡು ಗಂಟೆಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುತಿತ್ತು. ಇದೇನೂ ಲೋಡ್ ಶೆಡ್ಡಿಂಗ್ ಅಲ್ಲ. ಈ ಸಮಸ್ಯೆ ಈಗ ಪರಿಹಾರವಾಗಿದೆ. ಸಂಬಂಧಪಟ್ಟ ಇಲಾಖೆಯ ಎಂಡಿ ಹಾಗೂ ಸಂಸದರ ಜೊತೆ ಮಾತನಾಡಿದ್ದೇನೆ. ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆ ಆಗದು. ಜನರು ಹೆದರುವ ಅವಶ್ಯಕತೆ ಇಲ್ಲ. ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಈ ರೀತಿಯಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಯತ್ನಾಳ್ ವಿರುದ್ಧ ವಾಗ್ದಾಳಿ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಇನ್ನು ಆರು ತಿಂಗಳಿನಲ್ಲಿ ಪತನವಾಗುತ್ತದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವುದರಲ್ಲಿ ಅರ್ಥ ಇಲ್ಲ. ಯಾವುದೇ ಕಾರಣಕ್ಕೂ ಸರ್ಕಾರ ಪತನ ಆಗದು. ಅವರೇ ಡೆಲ್ಲಿಗೆ ಹೋಗಿ ಗುಂಡಿಗೆ ಬಿದ್ದು ಬಂದಿಲ್ವಾ. ಇನ್ನೆಲ್ಲಿ ಸರ್ಕಾರ ಪತನ ಆಗುತ್ತದೆ. ವಿಪಕ್ಷದವರಿಗೆ ಬೇರೆ ಯಾವ ವಿಚಾರಗಳೂ ಇಲ್ಲ. ಹಾಗಾಗಿ, ಏನೇನೋ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.












Click it and Unblock the Notifications