ಅಧಿಕಾರಿಗಳೇ ಮನೆ ಬಾಗಿಲಿಗೆ ಭೇಟಿ ನೀಡಿ ಜನರ ಸಮಸ್ಯೆ ಬಗೆಹರಿಸಿ-ಶಾಸಕ ಶಾಮನೂರು ಶಿವಶಂಕರಪ್ಪ
ದಾವಣಗೆರೆ. ಅಕ್ಟೋಬರ್ 26: ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಬದಲು ಅಧಿಕಾರಿಗಳೇ ಮನೆ ಬಾಗಿಲಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹರಿಸಿ, ಸೌಲಭ್ಯ ಕಲ್ಪಿಸಲು ಜನತಾ ದರ್ಶನ ಸಹಕಾರಿಯಾಗಿದೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ದಾವಣಗೆರೆ ತಾಲೂಕಿನ ಬೆಳವನೂರು ಗ್ರಾಮದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹರಿಸುವುದರಿಂದ ಜನರ ಸಮಯ, ಖರ್ಚು-ವೆಚ್ಚ ಉಳಿತಾಯವಾಗಿ ಸರ್ಕಾರದ ಬಗ್ಗೆ ವಿಶ್ವಾಸ ಮೂಡುತ್ತದೆ ಎಂದರು.

ಜನರು ಸರ್ಕಾರದ ಸೌಲಭ್ಯಗಳಿಗಾಗಿ ಕಚೇರಿ ಅಲೆಯುವುದನ್ನು ತಪ್ಪಿಸಬೇಕೆಂದು ಮತ್ತು ಸಣ್ಣ, ಸಣ್ಣ ಸಮಸ್ಯೆಗೂ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದವರೆಗೂ ಅಲೆಯಬೇಕಾದ ಸ್ಥಿತಿಯನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಬಗೆಹರಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದರು.
ಬೆಳವನೂರು ಗ್ರಾಮದಲ್ಲಿ ನಡೆದ ಜನತಾ ದರ್ಶನಕ್ಕೂ ಮುಂಚಿತವಾಗಿ ಪ್ರತಿ ಮನೆಗೂ ಭೇಟಿ ನೀಡಿ ಎಲ್ಲರ ಕುಂದುಕೊರತೆಗಳನ್ನು ಆಲಿಸಿ ಇ-ಸ್ವತ್ತಿನ ಸಮಸ್ಯೆ, ಶೌಚಾಲಯ, ಪಿಂಚಣಿ, ಗೃಹಲಕ್ಷ್ಮೀ ಸಮಸ್ಯೆ ಸೇರಿದಂತೆ 442 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು ಶೀಘ್ರವೇ ಪರಿಹರಿಸಲಾಗುತ್ತದೆ. ನಮ್ಮ ಸರ್ಕಾರ ಮಹಿಳಾ ಸಬಲೀಕರಣದ ಉದ್ದೇಶದಿಂದ ಮನೆ ಯಜಮಾನಿಗೆ ಮಾಸಿಕ ರೂ.2000 ನೀಡುತ್ತಿದ್ದು, ಹಣ ಬಾರದಿರುವ ಫಲಾನುಭವಿಗಳನ್ನು ಗುರುತಿಸಿ ಶೀಘ್ರವೇ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಮಾತನಾಡಿ, ಜನರಿಂದ, ಜನರಿಗೋಸ್ಕರ, ಜನರಿಗಾಗಿ ಮಾಡುತ್ತಿರುವ ಈ ಜನತಾ ದರ್ಶನ ಕಾರ್ಯಕ್ರಮದ ಮೂಲ ಉದ್ದೇಶ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ನೀಡುವುದಾಗಿದೆ ಎಂದರು.

ಈ ಬಾರಿಯ ಜನತಾದರ್ಶನ ಅತ್ಯಂತ ವಿನೂತನವಾದದ್ದು ಹಾಗೂ ವಿಶೇಷತೆಯನ್ನು ಹೊಂದಿದೆ. ಕೇವಲ ಕಾರ್ಯಕ್ರಮದಲ್ಲಿ ಅರ್ಜಿಗಳನ್ನು ಸ್ವೀಕರಿಸುತ್ತಿರುವುದಲ್ಲದೇ, ಕಳೆದ ಮೂರು ದಿನಗಳಿಂದ ಗ್ರಾಮದಲ್ಲಿನ ಮನೆಗಳಿಗೆ ಭೇಟಿ ನೀಡಿ, ಜನರನ್ನು ಸಂಪರ್ಕಿಸಿ ಅವರ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ. ಕಂದಾಯ, ಕೃಷಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಹಾರ ಇಲಾಖೆಗೆ ಸಂಬಂಧಿಸಿದಂತೆ ಅನೇಕ ಅರ್ಜಿಗಳು ಸ್ವೀಕಾರಗೊಂಡಿದ್ದು, ಈಗಾಗಲೇ ಗ್ರಾಮದ ಶೇ.50 ರಷ್ಟು ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದರು.
ಗ್ರಾಮದ ಪ್ರಮುಖ ಬೇಡಿಕೆಯಾದ ಗ್ರಾಮ ಠಾಣಾಕ್ಕೆ ನೀಲ ನಕ್ಷೆಯನ್ನು ಸಿದ್ಧಪಡಿಸಲಾಗಿದೆ. ಗ್ರಾಮಕ್ಕೆ ಸ್ಮಶಾನ ಬೇಕು ಎಂಬ ಬೇಡಿಕೆಗೆ ಈಗಾಗಲೇ ಜಾಗವನ್ನು ಗುರುತಿಸಲಾಗಿದೆ. ದನದ ಕೊಟ್ಟಿಗೆ, ಶೌಚಾಲಯ ವ್ಯವಸ್ಥೆ, ಚರಂಡಿ ಸ್ವಚ್ಛಗೊಳಿಸುವಿಕೆ, ಜಿಲ್ಲಾ ಪಂಚಾಯತಿಗೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೂವ್ವಮ್ಮ, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ದಾವಣಗೆರೆ ತಾಲ್ಲೂಕು ತಹಶಿಲ್ದಾರ್ ಡಾ. ಅಶ್ವತ್ ಎಂ.ಬಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಕುಮಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.












Click it and Unblock the Notifications