ರಾಜ್ಯದ ಜನರು ಭ್ರಷ್ಟ ಬಿಜೆಪಿ ಸರ್ಕಾರವನ್ನು ಮನೆಗೆ ಕಳುಹಿಸುವ ಸಂಕಲ್ಪ ಮಾಡಿದ್ದಾರೆ: ಸಲೀಂ ಅಹ್ಮದ್
ದಾವಣಗೆರೆ, ಜನವರಿ, 03: ಬಿಜೆಪಿಯು ರಾಜ್ಯಾದ್ಯಂತ ಜನಸಂಕಲ್ಪ ಯಾತ್ರೆ ಮಾಡುತ್ತಿದೆ. ಸರ್ಕಾರದ ಆಯಸ್ಸು ಇನ್ನು ಕೇವಲ 100 ದಿನಗಳು ಮಾತ್ರ. ಜನರು ಬಿಜೆಪಿಯ ದುರಾಡಳಿತಕ್ಕೆ ಬೇಸತ್ತಿದ್ದು, ಮನೆಗೆ ಕಳುಹಿಸುವ ಸಂಕಲ್ಪ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ದಾವಣಗೆರೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಆಶೀರ್ವಾದ ಮಾಡುತ್ತಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ನೋಡಿ ಮತ ಹಾಕುತ್ತಾರೆ. ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಸಣ್ಣಪುಟ್ಟ ಲೋಪದೋಷಗಳಿದ್ದು, ಬಿಜೆಪಿಯವರು ಏನು ಮಾಡಿದರೂ ನಾವು ಗೆಲ್ಲುತ್ತೇವೆ. ಬಿಜೆಪಿಯವರು ಅಲ್ಪಸಂಖ್ಯಾತರ ಮತ ವಿಭಜನೆ, ಮತ ಡಿಲೀಟ್ ಮಾಡುವಂತಹ ಷಡ್ಯಂತ್ರವನ್ನು ಮಾಡುತ್ತಿದ್ದಾರೆ. ಇದೊಂದು ಭ್ರಷ್ಟ, ಕಮೀಷನ್ ಸರ್ಕಾರ ಎಂಬುದು ಜನರಿಗೆ ಗೊತ್ತಾಗಿದೆ ಎಂದು ಹೇಳಿದರು.
ಆಂತರಿಕ ಸಮೀಕ್ಷೆ ಪ್ರಕಾರ ಬಿಜೆಪಿಗೆ ಕೇವಲ 60 ಸ್ಥಾನಗಳು ಬರುತ್ತವೆ ಎಂಬ ಮಾಹಿತಿ ಇದೆ. ಹಾಗಾಗಿ, ಬಿಜೆಪಿಯವರು ಏನೇನೋ ಮಾಡಿ, ವಿನಾಕಾರಣ ಗೊಂದಲವನ್ನು ಸೃಷ್ಟಿಸುತ್ತಿದ್ದಾರೆ. ಜೆ.ಪಿ. ನಡ್ಡಾ ಸೇರಿದಂತೆ ಯಾರೇ ಬರಲಿ, ನಾವು ಗೆಲ್ಲುವುದು ನಿಶ್ಚಿತವಾಗಿದೆ. ಹಾಗೆಯೇ ಫೆಬ್ರವರಿ ನಂತರ ರಾಹುಲ್ ಗಾಂಧಿ ಅವರು ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಅಖಿಲ ಭಾರತದ ಮಟ್ಟದಲ್ಲಿ ಸರ್ವೇ ಮಾಡಲಾಗಿದೆ
ಚುನಾವಣೆಯಲ್ಲಿ ಸ್ಪರ್ಧಿಸಲು 1350 ಅರ್ಜಿಗಳು ಸಲ್ಲಿಕೆಯಾಗಿವೆ. ಅಖಿಲ ಭಾರತ ಮಟ್ಟದಲ್ಲಿ ಸರ್ವೇ ಮಾಡಲಾಗಿದ್ದು, 130 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದಿದೆ ಎಂದು ಬಂದಿದೆ. ನಮ್ಮ ಟಾರ್ಗೆಟ್ ಇರುವುದು 150 ಸ್ಥಾನ. ಇದರಲ್ಲಿ ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸ ಇದೆ. ಬೀದರ್ನಿಂದ ಮಾಜಿ ಸಿಎಂ ಸಿದ್ದರಾಮಯ್ಯ, ಮತ್ತವರ ತಂಡ ಹಾಗೂ ಮೈಸೂರು ಭಾಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ತಂಡ ಪ್ರವಾಸ ನಡೆಸಲಿದೆ. 224 ಕ್ಷೇತ್ರಗಳಲ್ಲೂ ಪ್ರವಾಸ ಮಾಡಲು ಸಮಯದ ಅವಕಾಶ ಕಡಿಮೆ ಇದ್ದ ಕಾರಣ ಪ್ರತ್ಯೇಕವಾಗಿ ಪ್ರವಾಸವನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ವಿರುದ್ಧ ಸಲೀಂ ಅಹ್ಮದ್ ಆಕ್ರೋಶ
ವೋಟರ್ ಐಡಿ ಡಿಲೀಟ್, ಕದಿಯುವಂತಹ ಮಟ್ಟದಲ್ಲಿ ಬಿಜೆಪಿ ಷಡ್ಯಂತ್ರ ಮಾಡುತ್ತಿದೆ. ರೈತರಿಗೆ ಸಹಾಯ ಮಾಡಿಲ್ಲ, ಯುವಕರಿಗೆ ಉದ್ಯೋಗ ನೀಡಿಲ್ಲ. ಯಾವುದೇ ಜನಪರ ಕೆಲಸಗಳನ್ನೂ ಮಾಡಿಲ್ಲ. ಅವರಿಗೆ ಮೂರು ವರ್ಷಗಳ ಬಳಿಕ ಜನರು ನೆನಪಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿರುವ ಬಿಜೆಪಿ ಸರ್ಕಾರ ಯಾವ ಮುಖ ಇಟ್ಟುಕೊಂಡು ಸಂಕಲ್ಪ ಯಾತ್ರೆ ಮಾಡುತ್ತಿದೆಯೋ ಗೊತ್ತಿಲ್ಲ. ಒಣ ಕಾರ್ಯಕ್ರಮ, ದೇಶದಲ್ಲಿ ಕರ್ನಾಟಕ ಭ್ರಷ್ಟಾಚಾರದ ರಾಜಧಾನಿಯಾಗಿದೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿದೆ ಎಂದರು.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ
ಎಸ್. ಎಂ. ಕೃಷ್ಣ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ಹಗರಣ ಮಾಡಲಿಲ್ಲ, ಭ್ರಷ್ಟಾಚಾರವೂ ಇಲ್ಲ. ಆದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಮಹಾದಾಯಿ, ಮೇಕೆದಾಟು ಯೋಜನೆ ಜಾರಿಗೆ ಯಾಕೆ ಮುಂದಾಗಲಿಲ್ಲ? ಇದು ಡಬಲ್ ಎಂಜಿನ್ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ. ಹಳಿ ತಪ್ಪಿರುವ ಈ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. 25 ಸಂಸದರು ಯಾಕೆ ದೆಹಲಿ ಮಟ್ಟದಲ್ಲಿ ಶಕ್ತಿ ಪ್ರದರ್ಶಿಸುತ್ತಿಲ್ಲ? ಎಂದು ಪ್ರಶ್ನಿಸಿದರು.

ಮಲ್ಲಿಕಾರ್ಜುನ್ ಅವರೇ ಉತ್ತರ ನೀಡುತ್ತಾರೆ
ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ರೈಸ್ ಮಿಲ್ನಲ್ಲಿ ವನ್ಯಜೀವಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರ ತನಿಖೆ ನಡೆಯುತ್ತದೆ. ಮಲ್ಲಿಕಾರ್ಜುನ್ ಅವರೇ ಇದಕ್ಕೆ ಉತ್ತರ ನೀಡುತ್ತಾರೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂಬ ವಿಶ್ವಾಸ ಇದೆ. ನಾನು ಅವರ ಜೊತೆ ಚರ್ಚೆ ಮಾಡಿಲ್ಲ. ಪತ್ರಿಕೆಗಳಲ್ಲಿ ನಾನು ಓದಿದ್ದೇನೆ. ಬಿಜೆಪಿಯವರಿಗೆ ಸೋಲಿನ ಭಯ ಶುರುವಾಗಿದೆ. ಹಾಗಾಗಿ ಮಲ್ಲಿಕಾರ್ಜುನ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಚುನಾವಣಾ ಸಮಿತಿ ಸಭೆ ನಡೆಸಲಾಗಿದ್ದು, 45 ಆಕಾಂಕ್ಷಿಗಳು ಟಿಕೆಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಕ್ಷೇತ್ರವಾರು ಎಲ್ಲಾ ಆಕಾಂಕ್ಷಿಗಳನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಗೆಲ್ಲಲು ಏನೆಲ್ಲಾ ಕಾರ್ಯತಂತ್ರ ರೂಪಿಸಿಕೊಂಡಿದ್ದಾರೆ ಎಂಬ ಮಾಹಿತಿ ಪಡೆಯಲಾಗುವುದು. ಏಳು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಯಾರಾಗಬೇಕು ಎಂಬ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲು ಬಂದಿದ್ದೇನೆ. ಜಿಲ್ಲೆಯಲ್ಲಿ ಚುನಾವಣೆ ತಂತ್ರಗಾರಿಕೆ ಬಗ್ಗೆಯೂ ಚರ್ಚಿಸಲಾಯಿತು ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ್ ಜಯಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.












Click it and Unblock the Notifications